ಪರೀಕ್ಷಾ ಅಕ್ರಮ ತಡೆ ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರ
Photo Creat: PTI
ಹೊಸದಿಲ್ಲಿ,ಜು.30: ಸಾರ್ವಜನಿಕ ಪರೀಕ್ಷೆ (ಅಕ್ರಮ ತಡೆ) ತಿದ್ದುಪಡಿ ಮಸೂದೆ, 2026 ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕಾರಗೊಂಡಿದೆ. ರಾಷ್ಟ್ರಪತಿಗಳ ಸಮ್ಮತಿಯ ಬಳಿಕ ಮಸೂದೆಯು ಶಾಸನವಾಗಲಿದೆ.
ಸಾರ್ವಜನಿಕ ಪರೀಕ್ಷೆಗಳಲ್ಲಿ ಅಕ್ರಮ ಎಸಗುವವರಿಗೆ ಗರಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 50 ಲಕ್ಷ ರೂ.ಗಳ ದಂಡ ವಿಧಿಸಲು ಅವಕಾಶ ಕಲ್ಪಿಸುವ ಈ ಮಸೂದೆಯು ಈಗಾಗಲೇ ಲೋಕಸಭೆಯಲ್ಲಿ ಅಂಗೀಕಾರಗೊಂಡಿದ್ದು, ಗುರುವಾರ ರಾಜ್ಯಸಭೆಯಲ್ಲಿ ಪ್ರತಿಪಕ್ಷ ಸದಸ್ಯರ ಸಭಾತ್ಯಾಗದ ಬಳಿಕ ಸುಗಮವಾಗಿ ಅಂಗೀಕಾರಗೊಂಡಿತು.
ಇದಕ್ಕೂ ಮುನ್ನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು, ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ಸಮಸ್ಯೆಯನ್ನು ಪರಿಹರಿಸಲು ಸರಕಾರ ಈ ಕಾನೂನು ತಿದ್ದುಪಡಿಯನ್ನು ತಂದಿಲ್ಲ, ಬದಲಿಗೆ ಪ್ರತಿಭಟಿಸುತ್ತಿರುವ ಯುವಜರನ್ನು ಶಾಂತಗೊಳಿಸಲು ಮಾತ್ರ ತಂದಿದೆ ಎಂದು ಆರೋಪಿಸಿದರು.
ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ತಡೆಯುವ ರೀತಿಯಲ್ಲಿ ಪರೀಕ್ಷೆಗಳನ್ನು ಹೇಗೆ ನಡೆಸಲಾಗುತ್ತದೆ ಎನ್ನುವುದನ್ನು ಸರಕಾರವು ವಿವರಿಸಿಲ್ಲ ಎಂದು ಅವರು ಬೆಟ್ಟು ಮಾಡಿದರು.