ಕಾಲ್ತುಳಿತ ಪ್ರಕರಣ | ಆರ್ಸಿಬಿ ಮತ್ತು ಕೆಎಸ್ಸಿಎಯಿಂದ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ
Photo | PTI
ಬೆಂಗಳೂರು: ಆರ್ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟಿರುವ 11 ಮಂದಿಯ ಕುಟುಂಬಗಳಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಒಕ್ಕೂಟ ಜಂಟಿಯಾಗಿ ತಲಾ 5 ಲಕ್ಷ ರೂ.ಪರಿಹಾರ ಘೋಷಿಸಿದೆ.
ಈ ಕುರಿತು ಜಂಟಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಒಕ್ಕೂಟ, ಘಟನೆಯ ಕುರಿತು ವಿಷಾದ ವ್ಯಕ್ತಪಡಿಸಿದೆ. ದುಃಖತಪ್ತ ಕುಟುಂಬಗಳಿಗೆ ಸಂತಾಪ ಸೂಚಿಸಿವೆ.
ʼಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸಂಭ್ರಮಾಚರಣೆಯ ವೇಳೆ ಸಂಭವಿಸಿದ ದುರದೃಷ್ಟಕರ ಘಟನೆಯ ಕುರಿತು ನಾವು ತೀವ್ರ ಕಳವಳ ಹಾಗೂ ಸಂತಾಪ ವ್ಯಕ್ತಪಡಿಸುತ್ತೇವೆʼ ಎಂದು ಪತ್ರಿಕಾ ಪ್ರಕಟನೆಯಲ್ಲಿ ಹೇಳಲಾಗಿದೆ.
ʼಕಾಲ್ತುಳಿತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿರುವ ಕುಟುಂಬಗಳಿಗೆ ನೆರವು ನೀಡುವ ಭಾಗವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಒಕ್ಕೂಟ ಜಂಟಿಯಾಗಿ ತಲಾ 5 ಲಕ್ಷ ರೂ. ಪರಿಹಾರ ಘೋಷಿಸುತ್ತಿವೆ. ಆದರೆ, ಈ ಪರಿಹಾರವು ಯಾವುದೇ ಜೀವಕ್ಕೆ ಬೆಲೆ ಕಟ್ಟುವ ನಡೆಯಲ್ಲ. ಬದಲಿಗೆ, ತೀವ್ರ ದುಃಖತಪ್ತ ಗಳಿಗೆಯಲ್ಲಿ ಒಂದಿಷ್ಟು ನೆರವು ನೀಡುವ ಪ್ರಯತ್ನವಾಗಿದೆʼ ಎಂದೂ ಪ್ರಕಟನೆಯಲ್ಲಿ ಹೇಳಲಾಗಿದೆ.