ಜಮ್ಮುಕಾಶ್ಮೀರ | ಅಖಾಲ್ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳಿಂದ ಓರ್ವ ಭಯೋತ್ಪಾದಕನ ಹತ್ಯೆ
ಶ್ರೀನಗರ : ಜಮ್ಮು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಅಖಾಲ್ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಈ ವೇಳೆ ಭದ್ರತಾ ಪಡೆಗಳು ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಿದೆ.
'ಅಖಾಲ್ ಆಪರೇಷನ್' ಅಡಿಯಲ್ಲಿ ಇನ್ನಿಬ್ಬರು ಭಯೋತ್ಪಾದಕರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಚಿನಾರ್ ಕಾರ್ಪ್ಸ್ ಎಕ್ಸ್ನಲ್ಲಿ ಪೋಸ್ಟ್ ಮಾಡಿದೆ.
ಹತ್ಯೆಯಾದ ಭಯೋತ್ಪಾದಕ ನಿಷೇಧಿತ ಲಷ್ಕರೆ ತೈಬಾದ ಘಟಕವಾದ ದಿ ರೆಸಿಸ್ಟೆನ್ಸ್ ಫ್ರಂಟ್ಗೆ ಸೇರಿದವನಾಗಿದ್ದು, ಪಹಲ್ಗಾಮ್ ದಾಳಿಯಲ್ಲಿ ಈತನ ಕೈವಾಡ ಕೂಡ ಇತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಖಾಲ್ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರ ಚಲನವಲನಗಳ ಬಗ್ಗೆ ಗುಪ್ತಚರ ಮಾಹಿತಿಯ ನಂತರ ಭಾರತೀಯ ಸೇನೆ, ಸಿಆರ್ಪಿಎಫ್ ಮತ್ತು ಜಮ್ಮುಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ. ಶೋಧ ಕಾರ್ಯಾಚರಣೆ ಸಮಯದಲ್ಲಿ ಭಯೋತ್ಪಾದಕರು ಭದ್ರತಾ ಸಿಬ್ಬಂದಿಯ ಮೇಲೆ ಗುಂಡು ಹಾರಿಸಿದ್ದು, ಆ ನಂತರ ಎನ್ಕೌಂಟರ್ ನಡೆದಿದೆ.
ಶ್ರೀನಗರ ಬಳಿಯ ಡಚಿಗಮ್ ರಾಷ್ಟ್ರೀಯ ಉದ್ಯಾನವನದೊಳಗೆ ಭಯೋತ್ಪಾದಕರು ಅಡಗಿಕೊಂಡಿದ್ದಾರೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಭದ್ರತಾ ಪಡೆಗಳು ಆ ಪ್ರದೇಶವನ್ನು ಸುತ್ತುವರೆದಿದ್ದು, ಉಳಿದ ಇಬ್ಬರು ಭಯೋತ್ಪಾದಕರಿಗೆ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ.