×
Ad

ಸಂಡೂರು: ಕಳಪೆ ಡಾಂಬರೀಕರಣ ಆರೋಪ : ಕೆಲವೇ ದಿನಗಳಲ್ಲಿ ಗುಂಡಿ ಬಿದ್ದ ರಸ್ತೆ

Update: 2026-06-11 13:13 IST

ಸಂಡೂರು: ಬಳ್ಳಾರಿ ಜಿಲ್ಲೆಯ ಸಂಡೂರು ಪಟ್ಟಣದಲ್ಲಿ ಇತ್ತೀಚೆಗೆ ನಿರ್ಮಿಸಲಾದ ನೂತನ ಡಾಂಬರು ರಸ್ತೆಯ ಗುಣಮಟ್ಟದ ಕುರಿತು ಸಾರ್ವಜನಿಕ ವಲಯದಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ರಸ್ತೆ ಕೆಲವೇ ದಿನಗಳಲ್ಲಿ ಹಾಳಾಗಿದ್ದು, ಹಲವು ಕಡೆಗಳಲ್ಲಿ ಗುಂಡಿಗಳು ಹಾಗೂ ತಗ್ಗು ಪ್ರದೇಶಗಳು ಉಂಟಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಪಟ್ಟಣದ ಪ್ರಮುಖ ಮಾರ್ಗವಾದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಅರಣ್ಯ ಇಲಾಖೆ ಕಚೇರಿವರೆಗಿನ ರಸ್ತೆಯನ್ನು ಇತ್ತೀಚೆಗೆ ಡಾಂಬರೀಕರಣಗೊಳಿಸಲಾಗಿತ್ತು. ಈ ಹಿಂದೆ ಒಳಚರಂಡಿ ಹಾಗೂ ಕುಡಿಯುವ ನೀರಿನ ಕಾಮಗಾರಿಗಾಗಿ ರಸ್ತೆ ಅಗೆದಿದ್ದು, ಬಳಿಕ ಮರುನಿರ್ಮಾಣ ಮಾಡಲಾಗಿತ್ತು. ಆದರೆ ಕಾಮಗಾರಿ ಪೂರ್ಣಗೊಂಡ ಕೆಲವೇ ದಿನಗಳಲ್ಲಿ ರಸ್ತೆಯ ಹಲವೆಡೆ ಕುಸಿತ ಕಂಡುಬಂದಿದೆ.

ವಾಹನ ಸಂಚಾರ ಹೆಚ್ಚಿರುವ ಪ್ರದೇಶಗಳಲ್ಲಿ ರಸ್ತೆ ತಗ್ಗಿ ಗುಂಡಿಗಳು ಉಂಟಾಗಿದ್ದು, ಅವುಗಳನ್ನು ಶಾಶ್ವತವಾಗಿ ದುರಸ್ತಿ ಮಾಡುವ ಬದಲು ಜಲ್ಲಿ ಮತ್ತು ಮಣ್ಣು ತುಂಬಿ ತಾತ್ಕಾಲಿಕವಾಗಿ ತೇಪೆ ಹಾಕಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಇದರಿಂದ ಕಾಮಗಾರಿಯ ಗುಣಮಟ್ಟದ ಬಗ್ಗೆ ಅನುಮಾನ ಮೂಡಿದ್ದು, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಸಾರ್ವಜನಿಕರ ಪ್ರಕಾರ, ರಸ್ತೆ ನಿರ್ಮಾಣದಲ್ಲಿ ಗುಣಮಟ್ಟದ ಮಾನದಂಡಗಳನ್ನು ಪಾಲಿಸದೆ ಕಳಪೆ ಕಾಮಗಾರಿ ನಡೆಸಲಾಗಿದೆ. ಕಾಮಗಾರಿ ಮೇಲ್ವಿಚಾರಣೆ ನಡೆಸಬೇಕಾದ ಅಧಿಕಾರಿಗಳು ಮತ್ತು ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳದಿರುವುದು ಹಲವು ಪ್ರಶ್ನೆಗಳಿಗೆ ಕಾರಣವಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ರಸ್ತೆ ಮತ್ತಷ್ಟು ಹದಗೆಡುವ ಸಾಧ್ಯತೆ ಇದ್ದು, ಗುಂಡಿಗಳಲ್ಲಿ ನೀರು ನಿಂತು ವಾಹನ ಸವಾರರು ಹಾಗೂ ಪಾದಚಾರಿಗಳಿಗೆ ಅಪಾಯ ಉಂಟಾಗುವ ಭೀತಿ ಎದುರಾಗಿದೆ. ಆದ್ದರಿಂದ ತಕ್ಷಣ ರಸ್ತೆ ಪರಿಶೀಲನೆ ನಡೆಸಿ, ಕಳಪೆ ಕಾಮಗಾರಿಗೆ ಹೊಣೆಗಾರರ ವಿರುದ್ಧ ಕ್ರಮ ಕೈಗೊಂಡು ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಮುಂದಾಗಬೇಕು. ಸ್ಥಳೀಯ ಶಾಸಕಿ ಅನ್ನಪೂರ್ಣ ತುಕಾರಾಂ, ಸಂಸದರು ಹಾಗೂ ಜಿಲ್ಲಾಡಳಿತ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಗುತ್ತಿಗೆದಾರರ ಜವಾಬ್ದಾರಿಯನ್ನು ನಿಗದಿಪಡಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಸಾರ್ವಜನಿಕರ ತೆರಿಗೆ ಹಣದಲ್ಲಿ ನಿರ್ಮಾಣವಾಗುವ ರಸ್ತೆ ಕೆಲವೇ ದಿನಗಳಲ್ಲಿ ಗುಂಡಿ ಬೀಳುವುದು ಅಭಿವೃದ್ಧಿಯಲ್ಲ, ಅದು ಆಡಳಿತದ ವೈಫಲ್ಯದ ಪ್ರತೀಕವಾಗಿದೆ. ಕಳಪೆ ಕಾಮಗಾರಿಗೆ ಹೊಣೆಗಾರರಾದ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು, ಮಳೆಗಾಲದಲ್ಲಿ ಜನರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಗುಣಮಟ್ಟದ ಮತ್ತು ಶಾಶ್ವತ ರಸ್ತೆ ನಿರ್ಮಾಣ ಮಾಡಬೇಕು.

-ಎ.ಜಗದೀಶ್, ಸಂಡೂರು ತಾಲೂಕು ಅತಿಥಿ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಕೆ.ಮಹಮ್ಮದ್ ಖಾಸಿಂ

contributor

Similar News