ವರದಿಗೆ ಎಚ್ಚೆತ್ತ ಅಧಿಕಾರಿಗಳು: ತರಕಾರಿ ಮಾರುಕಟ್ಟೆಯಲ್ಲಿ ಸ್ವಚ್ಛತಾ ಕಾರ್ಯ
ವಾರ್ತಾಭಾರತಿ ವರದಿ ಫಲಶ್ರುತಿ
ಔರಾದ್ : ಪಟ್ಟಣದ ರಾಷ್ಟ್ರೀಯ ಹೆದ್ದಾರಿ 161ಎ ಸಮೀಪದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿರುವ ತರಕಾರಿ ಮಾರುಕಟ್ಟೆಯ ಅನೈರ್ಮಲ್ಯದ ಕುರಿತು ವಾರ್ತಾಭಾರತಿ ದಿನಪತ್ರಿಕೆಯಲ್ಲಿ ವಿಶೇಷ ವರದಿ ಪ್ರಕಟವಾದ ಬೆನ್ನಲ್ಲೇ ಎಚ್ಚೆತ್ತ ಅಧಿಕಾರಿಗಳು ಮಾರುಕಟ್ಟೆ ಆವರಣದಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡಿದ್ದಾರೆ.
ಜೂನ್ 24ರಂದು ವಾರ್ತಾಭಾರತಿ ದಿನ ಪತ್ರಿಕೆಯಲ್ಲಿ ‘ಔರಾದ್: ಮೂಗು ಮುಚ್ಚಿಕೊಂಡೇ ಓಡಾಡುವ ಸ್ಥಿತಿಯಲ್ಲಿ ತರಕಾರಿ ಮಾರುಕಟ್ಟೆ’ ಎಂಬ ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟವಾಗಿತ್ತು. ವರದಿ ಪ್ರಕಟವಾದ ನಂತರ ಎಪಿಎಂಸಿ ಅಧಿಕಾರಿಗಳು ಜೆಸಿಬಿ ಯಂತ್ರದ ಮೂಲಕ ಮಾರುಕಟ್ಟೆ ಆವರಣದಲ್ಲಿದ್ದ ಕಸ ಹಾಗೂ ಕೊಳಚೆಯನ್ನು ತೆರವುಗೊಳಿಸಿ ಸ್ವಚ್ಛತೆ ಮಾಡಿಸಿದ್ದಾರೆ.
ಸುದ್ದಿ ಪ್ರಕಟವಾದ ಬಳಿಕ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಿ ಕ್ರಮ ಕೈಗೊಂಡಿರುವುದಕ್ಕೆ ತರಕಾರಿ ವರ್ತಕರು ಹಾಗೂ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಮಾರುಕಟ್ಟೆಯಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಸಮರ್ಪಕ ಬೆಳಕಿಗಾಗಿ ಹೈಮಾಸ್ಟ್ ದೀಪ ಹಾಗೂ ಮೂಲಸೌಕರ್ಯಗಳನ್ನು ಶೀಘ್ರ ಕಲ್ಪಿಸಿ ತರಕಾರಿ ವ್ಯಾಪಾರಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ರೈತರು ಹಾಗೂ ವರ್ತಕರು ಆಗ್ರಹಿಸಿದ್ದಾರೆ.