ಉಚಿತ ಬಸ್ಪಾಸ್: ವಿದ್ಯಾರ್ಥಿಗಳಿಗೆ ದೊಡ್ಡ ನೆರವು
ಶಿಕ್ಷಣಕ್ಕೆ ಸಂಚಾರ ವೆಚ್ಚದ ಹೊರೆ ಇಳಿಕೆ; ಹಾಜರಾತಿ ಹೆಚ್ಚಿಸುವ ಪ್ರಯತ್ನ
ವಿಜಯಪುರ: ವಿದ್ಯಾರ್ಥಿಗಳ ಶಿಕ್ಷಣದ ಮೇಲಿನ ಆರ್ಥಿಕ ಹೊರೆ ತಗ್ಗಿಸುವ ಉದ್ದೇಶದಿಂದ ರಾಜ್ಯ ಸರಕಾರ ಜಾರಿಗೆ ತಂದಿರುವ ಉಚಿತ ಬಸ್ ಪಾಸ್ ಯೋಜನೆಯಡಿ ವಿಜಯಪುರ ನಗರ ಹಾಗೂ ಜಿಲ್ಲಾ ವಿಭಾಗಗಳಲ್ಲಿ ಶಾಲೆ ಮತ್ತು ಕಾಲೇಜುಗಳ ಸುಮಾರು 17 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಆರಂಭಿಸಲಾಗಿದೆ.
ರಾಜ್ಯ ಸರಕಾರದ ಹೊಸ ಯೋಜನೆಯಡಿ ಮೊದಲ ಬಾರಿಗೆ ವಿದ್ಯಾರ್ಥಿಗಳಿಗೆ ಯಾವುದೇ ಶುಲ್ಕವಿಲ್ಲದೆ ಬಸ್ ಪಾಸ್ ನೀಡಲಾಗುತ್ತಿದ್ದು, ಗ್ರಾಮೀಣ ಹಾಗೂ ದೂರದ ಪ್ರದೇಶಗಳಿಂದ ಶಾಲೆ ಮತ್ತು ಕಾಲೇಜುಗಳಿಗೆ ನಿತ್ಯ ಸಂಚರಿಸುವ ವಿದ್ಯಾರ್ಥಿಗಳಿಗೆ ಇದರಿಂದ ಹೆಚ್ಚಿನ ಅನುಕೂಲವಾಗಲಿದೆ.
ಜೂನ್ 12ರಿಂದ ಉಚಿತ ಬಸ್ಪಾಸ್ ವಿತರಣೆ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ಅರ್ಹ ವಿದ್ಯಾರ್ಥಿಗಳಿಗೆ ಹಂತ ಹಂತವಾಗಿ ಪಾಸ್ ವಿತರಿಸಲಾಗುತ್ತಿದೆ. ಯೋಜನೆಯಿಂದ ವಿದ್ಯಾರ್ಥಿಗಳ ಪ್ರಯಾಣ ವೆಚ್ಚ ಕಡಿಮೆಯಾಗಲಿದ್ದು, ಪೋಷಕರ ಮೇಲಿನ ಆರ್ಥಿಕ ಹೊರೆಯೂ ಇಳಿಕೆಯಾಗಲಿದೆ.
ಸಾರಿಗೆ ವೆಚ್ಚದ ಕಾರಣದಿಂದ ಶಿಕ್ಷಣದಲ್ಲಿ ಹಿನ್ನಡೆ ಅನುಭವಿಸುತ್ತಿದ್ದ ವಿದ್ಯಾರ್ಥಿಗಳಿಗೆ ಈ ಯೋಜನೆ ನೆರವಾಗಲಿದ್ದು, ಶಾಲೆ ಮತ್ತು ಕಾಲೇಜುಗಳ ಹಾಜರಾತಿ ಪ್ರಮಾಣ ಹೆಚ್ಚುವ ನಿರೀಕ್ಷೆಯಿದೆ. ವಿಶೇಷವಾಗಿ ಗ್ರಾಮೀಣ ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳಿಗೆ ಯೋಜನೆ ಹೆಚ್ಚು ಪ್ರಯೋಜನಕಾರಿಯಾಗಿದೆ.
ಜಿಲ್ಲೆಯ ಸುಮಾರು 17 ಸಾವಿರ ವಿದ್ಯಾರ್ಥಿಗಳು ಈ ಯೋಜನೆಯ ಲಾಭ ಪಡೆಯುವ ನಿರೀಕ್ಷೆಯಿದ್ದು, ಶಿಕ್ಷಣ ಎಲ್ಲರಿಗೂ ಸುಲಭವಾಗಿ ಲಭ್ಯವಾಗುವಂತೆ ಮಾಡುವ ಸರಕಾರದ ಪ್ರಯತ್ನಕ್ಕೆ ಈ ಯೋಜನೆ ಪೂರಕವಾಗಿದೆ.
ಅರ್ಜಿ ಪ್ರಕ್ರಿಯೆ ಸುಲಭ
ಈ ಹಿಂದಿನ ವ್ಯವಸ್ಥೆಯಂತೆಯೇ ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ ಮೂಲಕ ಆನ್ಲೈನ್ನಲ್ಲಿ ಉಚಿತ ಬಸ್ ಪಾಸ್ಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಲ್ಲದೆ, ಶಾಲೆ-ಕಾಲೇಜುಗಳು ಹಾಗೂ ಇತರ ನಿಗದಿತ ಸೌಲಭ್ಯ ಕೇಂದ್ರಗಳ ಮೂಲಕವೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ನಿಗದಿತ ಶೈಕ್ಷಣಿಕ ಅರ್ಹತೆ, ಪ್ರಯಾಣದ ದೂರದ ಮಾನದಂಡ ಹಾಗೂ ಇತರೆ ನಿಯಮಾವಳಿಗಳಿಗೆ ಅನುಗುಣವಾಗಿ ಅರ್ಜಿಗಳನ್ನು ಸ್ವೀಕರಿಸಿ ಬಸ್ ಪಾಸ್ ವಿತರಿಸಲಾಗುತ್ತಿದೆ.
ಈಗಾಗಲೇ ಬಸ್ಪಾಸ್ ಪಡೆದವರಿಗೆ ಹಣ ಮರುಪಾವತಿ
2026-27ನೇ ಶೈಕ್ಷಣಿಕ ವರ್ಷದ ಆರಂಭದಲ್ಲಿ ಶುಲ್ಕ ಪಾವತಿಸಿ ಬಸ್ ಪಾಸ್ ಪಡೆದ ವಿದ್ಯಾರ್ಥಿಗಳಿಗೂ ರಾಜ್ಯ ಸರಕಾರ ಪರಿಹಾರ ಘೋಷಿಸಿದೆ. ಅಂತಹ ವಿದ್ಯಾರ್ಥಿಗಳು ಪಾವತಿಸಿರುವ ಸಂಪೂರ್ಣ ಮೊತ್ತವನ್ನು 15 ದಿನಗಳೊಳಗೆ ಮರುಪಾವತಿಸಲಾಗುವುದು ಎಂದು ತಿಳಿಸಲಾಗಿದೆ. ಅಲ್ಲದೆ, ಕರ್ನಾಟಕದಲ್ಲಿ ವಾಸವಿದ್ದು ನೆರೆ ರಾಜ್ಯಗಳ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹಾಗೂ ಗಡಿಭಾಗದ ನೆರೆ ರಾಜ್ಯಗಳಲ್ಲಿ ವಾಸವಿದ್ದು ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೂ ಯೋಜನೆಯ ಪ್ರಯೋಜನ ದೊರೆಯಲಿದೆ. ಇದರಿಂದ ಗಡಿಭಾಗದ ಸಾವಿರಾರು ವಿದ್ಯಾರ್ಥಿಗಳಿಗೂ ಅನುಕೂಲವಾಗಲಿದೆ.
ರಾಜ್ಯ ಸರಕಾರದ ಉಚಿತ ಬಸ್ ಪಾಸ್ ಯೋಜನೆಯಿಂದ ಜಿಲ್ಲೆಯ ಸಾವಿರಾರು ಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಅರ್ಹ ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ ಅಥವಾ ತಮ್ಮ ಶಿಕ್ಷಣ ಸಂಸ್ಥೆಗಳ ಮೂಲಕ ಶೀಘ್ರವೇ ಅರ್ಜಿ ಸಲ್ಲಿಸಿ ಯೋಜನೆಯ ಪ್ರಯೋಜನ ಪಡೆಯಬೇಕು. ಈಗಾಗಲೇ ಶುಲ್ಕ ಪಾವತಿಸಿ ಬಸ್ ಪಾಸ್ ಪಡೆದ ವಿದ್ಯಾರ್ಥಿಗಳಿಗೆ ಸರಕಾರದ ಮಾರ್ಗಸೂಚಿಯಂತೆ ಹಣ ಮರುಪಾವತಿ ಪ್ರಕ್ರಿಯೆಯನ್ನೂ ಕೈಗೊಳ್ಳಲಾಗುವುದು.
-ದೇವಾನಂದ ಎ. ಬಿರಾದರ
ಕೆಎಸ್ಸಾರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ