ಬಾಗಲಕೋಟೆ ಕಾಂಗ್ರೆಸ್ನಲ್ಲಿ ಮೇಲ್ಮನೆ ಟಿಕೆಟ್ ಕಸರತ್ತು
ವಿಧಾನ ಪರಿಷತ್ ಚುನಾವಣೆಗೆ ಆಕಾಂಕ್ಷಿಗಳ ಪೈಪೋಟಿ
ಬಾಗಲಕೋಟೆ: ಕ್ಷೇತ್ರದ ಉಪಚುನಾವಣೆ ಮುಗಿದ ಬೆನ್ನಲ್ಲೇ ಇದೀಗ ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯಲಿರುವ 13 ಸ್ಥಾನಗಳ ಚುನಾವಣೆಯತ್ತ ಗಮನವಿಟ್ಟು ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿವೆ. ಜೂನ್ ತಿಂಗಳಲ್ಲಿ ನಡೆಯುವ ಈ ಚುನಾವಣೆಗೆ ಕಾಂಗ್ರೆಸ್ ಪಕ್ಷದೊಳಗೆ ಟಿಕೆಟ್ ಪಡೆಯಲು ಜಿಲ್ಲೆಯ ಹಲವು ಮುಖಂಡರು ತೆರೆಮರೆಯ ಕಸರತ್ತು ಆರಂಭಿಸಿದ್ದಾರೆ.
ಉಪಚುನಾವಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದ ಹಲವು ನಾಯಕರು ಈಗ ಮೇಲ್ಮನೆ ಸ್ಥಾನಕ್ಕಾಗಿ ತಂತ್ರ ರೂಪಿಸಿದ್ದು, ಆಕಾಂಕ್ಷಿಗಳ ಪಟ್ಟಿ ದಿನದಿಂದ ದಿನಕ್ಕೆ ವಿಸ್ತರಿಸುತ್ತಿದೆ. ಆಕಾಂಕ್ಷಿಗಳ ಪೈಕಿ ಮಾಜಿ ಸಚಿವ ಅಜೇಯ್ ಕುಮಾರ ಸರನಾಯಕ ಅವರ ಹೆಸರು ಪ್ರಮುಖವಾಗಿ ಕೇಳಿಬರುತ್ತಿದೆ. ಬಾಗಲಕೋಟೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾಗಿ ಸುಮಾರು ಹತ್ತು ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಅವರು, ಕೆಪಿಸಿಸಿ ಉಪಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಕಾಲದಿಂದಲೇ ಸಕ್ರಿಯ ರಾಜಕಾರಣದಲ್ಲಿ ತೊಡಗಿಸಿಕೊಂಡಿರುವ ಸರನಾಯಕ ಅವರ ಹೆಸರು, ಹಲವು ಬಾರಿ ವಿಧಾನ ಪರಿಷತ್ ಸ್ಥಾನಕ್ಕೆ ಕೇಳಿಬಂದಿದ್ದರೂ ಪಕ್ಷದೊಳಗಿನ ತೀವ್ರ ಪೈಪೋಟಿಯಿಂದ ಅವಕಾಶ ವಂಚಿತರಾಗಿದ್ದರು. ಈ ಬಾರಿ ಅವಕಾಶ ಸಿಗುವ ವಿಶ್ವಾಸದಲ್ಲಿ ಅವರು ಹಿರಿಯ ನಾಯಕರ ಸಂಪರ್ಕದಲ್ಲಿ ತೊಡಗಿಕೊಂಡಿದ್ದಾರೆ ಎನ್ನಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಆರ್.ವಿ. ದೇಶಪಾಂಡೆ ಸೇರಿದಂತೆ ಪಕ್ಷದ ಪ್ರಮುಖರೊಂದಿಗೆ ಉತ್ತಮ ಒಡನಾಟ ಹೊಂದಿರುವ ಸರನಾಯಕ, ಆಲಮಟ್ಟಿ ಜಲಾಶಯ ಮುಳುಗಡೆ ಹೋರಾಟದ ಮೂಲಕವೂ ಗಮನ ಸೆಳೆದಿದ್ದರು.
ಇನ್ನೊಂದೆಡೆ, ದಾವಣಗೆರೆ ವಿಧಾನಸಭೆ ಉಪಚುನಾವಣೆ ಸಂದರ್ಭದಲ್ಲಿ ಮುಸ್ಲಿಮ್ ನಾಯಕರಲ್ಲಿ ಉಂಟಾಗಿದ್ದ ಅಸಮಾಧಾನ ತಣಿಸಲು ವಿಧಾನ ಪರಿಷತ್ ಸ್ಥಾನದ ‘ಗ್ಯಾರೆಂಟಿ’ ಮುಂದಿಡಲಾಗಿತ್ತು ಎನ್ನಲಾಗಿದೆ. ಈ ಸ್ಥಾನಕ್ಕೆ ಮುಸ್ಲಿಂ ಸಮುದಾಯದ ಮಹಿಳಾ ನಾಯಕಿಯಾಗಿ ಝೀನತ್ ಝಾಕೀರ್ ಅವರ ಹೆಸರು ಸಹ ಬಲವಾಗಿ ಕೇಳಿಬರುತ್ತಿದೆ. ಸಚಿವ ಝಮೀರ್ ಅಹಮದ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಝೀನತ್ ಝಾಕಿರ್ ಅವರಿಗೆ ವಿಧಾನ ಪರಿಷತ್ ಸದಸ್ಯತ್ವ ನೀಡುವಂತೆ ಬೆಂಬಲಿಗರು ಒತ್ತಾಯಿಸುತ್ತಿದ್ದಾರೆ. ಸಚಿವ ಜಮೀರ್ ಅಹಮ್ಮದ್, ಸಲೀಂ ಅಹಮ್ಮದ್ ಸೇರಿದಂತೆ ಹಲವು ನಾಯಕರನ್ನು ಭೇಟಿಯಾಗಿ ಝೀನತ್ ಪರವಾಗಿ ಲಾಬಿ ನಡೆಯುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿದೆ.
ಅಲ್ಪಸಂಖ್ಯಾತ ರಾಜ್ಯ ಘಟಕದ ಉಪಾಧ್ಯಕ್ಷೆಯಾಗಿರುವ ಝೀನತ್ ಝಾಕಿರ್, ಕಳೆದ ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತಾ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದಾರೆ. ಪಕ್ಷದ ಗೆಲುವಿಗಾಗಿ ದುಡಿಯುವುದರ ಜೊತೆಗೆ, ಸಮುದಾಯ ಭೇದವಿಲ್ಲದೆ ಮಹಿಳೆಯರ ಸಮಸ್ಯೆಗಳಿಗೆ ಸ್ಪಂದಿಸಿ, ಸರಕಾರದ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ ಎಂದು ಸದ್ದಿಲ್ಲದೆ ಪ್ರಚಾರ ನಡೆಯುತ್ತಿದೆ.
‘ಮುಸ್ಲಿಂ ಸಮುದಾಯದ ಮಹಿಳೆಗೆ ವಿಧಾನಪರಿಷತ್ ಸದಸ್ಯತ್ವ ನೀಡಬೇಕು’ ಎಂಬ ಒತ್ತಾಯ ಕಾಂಗ್ರೆಸ್ ವಲಯದಲ್ಲಿ ಹೆಚ್ಚಾಗಿದ್ದು, ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರ ಗಮನಕ್ಕೂ ತರಲಾಗಿದೆ ಎಂದು ಮೂಲಗಳು ತಿಳಿಸಿವೆ.
ದಾವಣಗೆರೆ ಹಾಗೂ ಬಾಗಲಕೋಟೆ ಉಪಚುನಾವಣೆಗಳಲ್ಲಿ ಮುಸ್ಲಿಂ ಸಮುದಾಯ ಕಾಂಗ್ರೆಸ್ ಪರವಾಗಿ ನಿಂತು ಪಕ್ಷದ ಗೆಲುವಿಗೆ ಕೈ ಜೋಡಿಸಿದೆ. ಹೀಗಾಗಿ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಬೇಕೆಂಬ ಒತ್ತಡವೂ ಹೆಚ್ಚಾಗಿದೆ.ಇದರ ಜೊತೆಗೆ ಕಾಂಗ್ರೆಸ್ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಎಂ.ಬಿ.ಸೌದಾಗರ ಸೇರಿದಂತೆ ಇತರ ಕೆಲ ಮುಖಂಡರೂ ಮೇಲ್ಮನೆ ಸ್ಥಾನಕ್ಕಾಗಿ ತೆರೆಯ ಹಿಂದೆ ಲಾಬಿ ನಡೆಸುತ್ತಿದ್ದಾರೆ ಎನ್ನಲಾಗಿದೆ.
ವಿಧಾನ ಪರಿಷತ್ ಚುನಾವಣೆಯ ಪ್ರಕ್ರಿಯೆಸಮೀಪಿಸುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಮತ್ತಷ್ಟು ಕಾವು ಪಡೆಯಲಿದ್ದು, ಆಕಾಂಕ್ಷಿಗಳ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ. ಬಾಗಲಕೋಟೆ ಉಪಚುನಾವಣೆಯ ಬಳಿಕ ಈಗ ಮೇಲ್ಮನೆ ರಾಜಕೀಯ ತೀವ್ರ ಕುತೂಹಲ ಮೂಡಿಸಿದ್ದು, ಸಾರ್ವಜನಿಕ ವಲಯದಲ್ಲೂ ಚರ್ಚೆಗೆ ಗ್ರಾಸವಾಗಿದೆ.