ಸಂಡೂರು: ಸಚಿವ ಬಿ. ನಾಗೇಂದ್ರ ರಾಜೀನಾಮೆಯಿಂದ ತೆರವಾಗಿರುವ ಸಚಿವ ಸ್ಥಾನ ಯಾರಿಗೆ ಎಂಬ ಒಲಿಯಲಿದೆ ಚರ್ಚೆ ಗರಿಗೆದರಿದೆ. ಸಂಡೂರು ಕ್ಷೇತ್ರದ ಶಾಸಕಿ ಹಾಗೂ ಜಿಲ್ಲೆಯ ಏಕೈಕ ಮಹಿಳಾ ಶಾಸಕಿ ಅನ್ನಪೂರ್ಣ ಅವರಿಗೆ ಸಂಪುಟದಲ್ಲಿ ಸ್ಥಾನ ಕಲ್ಪಿಸುವ ಸಾಧ್ಯತೆ ಕುರಿತು ಕಾಂಗ್ರೆಸ್ ವಲಯದಲ್ಲಿ ಚರ್ಚೆಗಳು ಆರಂಭಗೊಂಡಿವೆ.
ನಾಗೇಂದ್ರ ರಾಜೀನಾಮೆ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯ ಪ್ರಾತಿನಿಧ್ಯ ಹಾಗೂ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯ ಎರಡನ್ನೂ ಸರಿದೂಗಿಸುವ ನಿಟ್ಟಿನಲ್ಲಿ ಶಾಸಕಿ ಅನ್ನಪೂರ್ಣ ಹೆಸರು ಮುನ್ನೆಲೆಗೆ ಬಂದಿದೆ ಎನ್ನಲಾಗುತ್ತಿದೆ.
ಮಹಿಳಾ ಪ್ರಾತಿನಿಧ್ಯದ ಕೊರತೆ ಅನ್ನಪೂರ್ಣಗೆ ಅವಕಾಶ? :
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸಮರ್ಪಕ ಪ್ರಾತಿನಿಧ್ಯ ಸಿಕ್ಕಿಲ್ಲ ಎನ್ನುವ ಟೀಕೆಗಳ ನಡುವೆ, ಸಂಪುಟಕ್ಕೆ ಮಹಿಳೆಯೊಬ್ಬರನ್ನು ತೆಗೆದುಕೊಳ್ಳುವ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂಗಿತ ವ್ಯಕ್ತಪಡಿಸಿದ್ದಾರೆನ್ನಲಾಗಿದ್ದು, ಇದು ಅನ್ನಪೂರ್ಣ ನಿರೀಕ್ಷೆಗೆ ಮತ್ತಷ್ಟು ಬಲ ನೀಡಿದೆ ಎಂಬ ವಿಶ್ಲೇಷಣೆ ಕಾಂಗ್ರೆಸ್ ವಲಯದಲ್ಲಿ ನಡೆಯುತ್ತಿದೆ.
ತುಕಾರಾಮ್ಗೆ ಕೈತಪ್ಪಿದ್ದ ಅವಕಾಶ... ಪತ್ನಿಗೆ ಒಲಿಯುವುದೇ? :
ಸಂಡೂರು ಕ್ಷೇತ್ರದಿಂದ ಸತತ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಈ.ತುಕಾರಾಮ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಸಂಸದರಾದರು. ಸಚಿವರಾಗುವ ಅವಕಾಶಗಳಿದ್ದರೂ ಪಕ್ಷದ ಹೈಕಮಾಂಡ್ ಹಾಗೂ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿಯ ಮೇರೆಗೆ ಅವರು ಶಾಸಕ ಸ್ಥಾನ ತೊರೆದರು ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿವೆ.
ಬಳಿಕ ನಡೆದ ಸಂಡೂರು ವಿಧಾನಸಭಾ ಉಪಚುನಾವಣೆಯಲ್ಲಿ ತುಕಾರಾಮ್ ಪತ್ನಿ ಅನ್ನಪೂರ್ಣ ಗೆದ್ದು ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದರು. ಇದೀಗ ನಾಗೇಂದ್ರ ರಾಜೀನಾಮೆಯಿಂದ ತೆರವಾಗಿರುವ ಸಚಿವ ಸ್ಥಾನಕ್ಕೆ ಅವರ ಹೆಸರು ಕೇಳಿಬರುತ್ತಿರುವುದು ರಾಜಕೀಯವಾಗಿ ಕುತೂಹಲ ಮೂಡಿಸಿದೆ.
ಸಂಡೂರಿಗೆ ಸಚಿವ ಸ್ಥಾನ ಹೊಸದೇನಲ್ಲ :
ಸಂಡೂರು ಕ್ಷೇತ್ರಕ್ಕೆ ಸಚಿವ ಸ್ಥಾನ ದೊರೆಯುವುದು ಹೊಸ ಬೆಳವಣಿಗೆಯೇನಲ್ಲ. ಕ್ಷೇತ್ರದಿಂದ ಸತತ ಏಳು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ದಿ. ಎಂ.ವೈ. ಘೋರ್ಪಡೆ ಅವರು ರಾಜ್ಯದ ಹಣಕಾಸು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸೇರಿದಂತೆ ಪ್ರಮುಖ ಖಾತೆಗಳನ್ನು ನಿರ್ವಹಿಸಿ ಮೂರು ಅವಧಿಗೆ ಸಚಿವರಾಗಿದ್ದರು.
ಇದೇ ಕ್ಷೇತ್ರದಿಂದ ಜೆಡಿಎಸ್ನಿಂದ ಆಯ್ಕೆಯಾಗಿದ್ದ ಸಂತೋಷ್ ಲಾಡ್ ಅವರು 2006-07ರ ಸಮ್ಮಿಶ್ರ ಸರಕಾರದಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ರಾಜಕೀಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು. ಬಳಿಕ 2018ರ ಸಮ್ಮಿಶ್ರ ಸರಕಾರದಲ್ಲಿ ಈ. ತುಕಾರಾಮ್ ಅವರು ಅಲ್ಪಾವಧಿಗೆ ವೈದ್ಯಕೀಯ ಶಿಕ್ಷಣ ಸಚಿವರಾಗಿದ್ದರು.
ಸಚಿವೆಯಾಗಿದ್ದ ಭಾಗೀರಥಿ ಮರಳು ಸಿದ್ದನಗೌಡ :
ಅಖಂಡ ಬಳ್ಳಾರಿ ಜಿಲ್ಲೆ ಇದ್ದ ಸಂದರ್ಭದಲ್ಲಿ ಕೊಟ್ಟೂರು ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಭಾಗೀರಥಿ ಮರಳುಸಿದ್ದನಗೌಡ ಅವರು ಅಂದಿನ ಮುಖ್ಯಮಂತ್ರಿ ಧರ್ಮಸಿಂಗ್ ಸಚಿವ ಸಂಪುಟದಲ್ಲಿ ಏಕೈಕ ಮಹಿಳಾ ಸಚಿವೆಯಾಗಿ ಕಾರ್ಯನಿರ್ವಹಿಸಿದ್ದರು.
ಹೈಕಮಾಂಡ್ ನಿರ್ಧಾರ :
ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ರಚನೆಯ ಅಂತಿಮ ನಿರ್ಧಾರ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ನಡೆಯುವುದರಿಂದ, ಸಂಡೂರು ಶಾಸಕಿ ಅನ್ನಪೂರ್ಣ ಅವರಿಗೆ ಸಚಿವಗಿರಿ ಒಲಿಯುವುದೇ ಎಂಬ ಪ್ರಶ್ನೆಗೆ ಕಾಲವೇ ಉತ್ತರ ನೀಡಬೇಕಿದೆ ಎನ್ನುತ್ತಾರೆ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು.
ಈ ನಡುವೆ, ಬಿಜೆಪಿ ನಾಯಕರು ಸಂಸದ ಈ ತುಕರಾಂ ಅವರು ವಾಲ್ಮೀಕಿ ನಿಗಮದ ಹಗರಣದ ಹಣದಿಂದ ಸಂಸದರಾಗಿದ್ದು ಎಂದು ಆರೋಪಿಸಿದ್ದು, ಹಾಗಾಗಿ ಅವರ ಪತ್ನಿ ಶಾಸಕಿ ಅನ್ನಪೂರ್ಣ ಅವರಿಗೆ ಸಚಿವಗಿರಿ ನೀಡಬಾರದೆಂದು ಪಟ್ಟು ಹಿಡಿದಿದ್ದಾರೆ.
ಬಳ್ಳಾರಿ ಚಲೋ ಪಾದಯಾತ್ರೆಯ ಅಂಗವಾಗಿ ಸಂಡೂರಿನಲ್ಲಿ ಬಿಜೆಪಿ ಮಂಡಲದ ವತಿಯಿಂದ ಅಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಶಾಸಕ ಜನಾರ್ದನ ರೆಡ್ಡಿ ಅವರು, ಅನ್ನಪೂರ್ಣರಿಗೆ ಸಚಿವ ಸ್ಥಾನ ನೀಡಿದರೆ, ವಿಧಾನಸಭೆಯಲ್ಲಿ ಕಾಂಗ್ರೆಸ್ ಸರಕಾರದ ವಿರುದ್ಧ ಇನ್ನಷ್ಟು ತೀವ್ರವಾದ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.