ಮಾನ್ವಿ: ನಯೋಪ್ರಾ ಅಧ್ಯಕ್ಷರಾಗಿ ಗಫೂರ್ ಸಾಬ್ ಪದಗ್ರಹಣ; ಸಚಿವ ಎನ್ ಎಸ್ ಬೋಸರಾಜು ಭಾಗಿ
ಮಾನ್ವಿ:ಸ್ಥಳೀಯ ನಗರ ಯೋಜನಾ ಪ್ರಾಧಿಕಾರದ ಕಚೇರಿಯಲ್ಲಿ ಗುರುವಾರ ನಡೆದ ಸಮಾರಂಭದಲ್ಲಿ ಸರ್ಕಾರದಿಂದ ನಾಮನಿರ್ದೇಶಿತರಾದ ನೂತನ ಅಧ್ಯಕ್ಷ ಅಬ್ದುಲ್ ಗಫೂರ್ ಸಾಬ್ ಹಾಗೂ ಮೂವರು ಸದಸ್ಯರು ಅಧಿಕಾರ ಸ್ವೀಕರಿಸಿದರು.
ಸಣ್ಣ ನೀರಾವರಿ, ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಮಾತನಾಡಿ,
ಪುರಸಭೆ ಹಾಗೂ ನಗರ ಯೋಜನಾ ಪ್ರಾಧಿಕಾರ ಸಮನ್ವಯದಿಂದ ಪಟ್ಟಣವನ್ನು ಅಭಿವೃದ್ದಿ ಪಡಿಸಬೇಕು. ನೂತನ ಲೇ ಔಟ್ಗಳಿಗೆ ಮಂಜೂರಾತಿ ನೀಡುವ ಸಮಯದಲ್ಲಿ ಜನರಿಗೆ ಅನುಕೂಲವಾಗುವಂತೆ ಮಂಜೂರಾತಿ ನೀಡುವುದಕ್ಕೆ ಕ್ರಮ ಕೈಗೊಳ್ಳಬೇಕು. ಪಟ್ಟಣದ ಅಭಿವೃದ್ದಿಗೆ ₹10ಕೋಟಿ ವೆಚ್ಚದಲ್ಲಿ ವಿವಿಧ ಅಬಿವೃದ್ದಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ' ಎಂದು ತಿಳಿಸಿದರು.
'ಪಕ್ಷದ ಎಲ್ಲಾ ನಿಷ್ಠಾವಂತ ಕಾರ್ಯಕರ್ತರನ್ನು ಗುರುತಿಸಿ ವಿವಿಧ ಹುದ್ದೆಗಳನ್ನು ನೀಡಿ ಸೇವೆ ಸಲ್ಲಿಸುವ ಅವಕಾಶ ಕಲ್ಪಿಸಲಾಗುವುದು' ಎಂದರು. ಕಾಂಗ್ರೆಸ್ ಪಕ್ಷದ ಸ್ಥಳೀಯ ಮುಖಂಡರು ಪ್ರಾಧಿಕಾರದ ನೂತನ ಅಧ್ಯಕ್ಷ ಅಬ್ದುಲ್ ಗಫೂರ್ ಸಾಬ್ ಅವರನ್ನು ಸನ್ಮಾನಿಸಿ ಅಭಿನಂದಿಸಿದರು.
ಶಾಸಕ ಜಿ.ಹಂಪಯ್ಯ ನಾಯಕ, ನಗರ ಯೋಜನಾ ಪ್ರಾಧಿಕಾರದ ಸದಸ್ಯರಾದ ಸ್ಟೆಲ್ಲಾ ಸುದರ್ಶನ್, ಮನ್ಸಾಲಿ ಯಂಕಯ್ಯ ಶೆಟ್ಟಿ ಹಾಗೂ ಕನಕಪ್ಪ ಯಾದವ್, ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.