ರಾಯಚೂರು | ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್: ಬಿಜೆಪಿಯಿಂದ ದೂರು
ರಾಯಚೂರು: ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಹಾಗೂ ಬಿಜೆಪಿ ವಿರುದ್ಧ ಅವಹೇಳನಕಾರಿ, ಮಾನಹಾನಿಕರ ಮತ್ತು ಸಾರ್ವಜನಿಕ ಶಾಂತಿಗೆ ಧಕ್ಕೆ ತರುವ ರೀತಿಯ ಪೋಸ್ಟ್ ಗಳನ್ನು ಪ್ರಕಟಿಸಿರುವ ಆರೋಪದ ಹಿನ್ನೆಲೆಯಲ್ಲಿ ಪಾವಗಡ ಮೂಲದ ಶ್ರೀನಿವಾಸ್ ಬಾಬು ಎಂಬವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವೀಂದ್ರ ಜಲ್ದಾರ್ ಒತ್ತಾಯಿಸಿದ್ದಾರೆ.
ಈ ಕುರಿತು ಪಶ್ಚಿಮ ಪೊಲೀಸ್ ಠಾಣೆಗೆ ದೂರು ಸಲ್ಲಿಸಿರುವ ಅವರು, ಸಂಬಂಧಿತ ವ್ಯಕ್ತಿಯು ಸಂಸದ ಗೋವಿಂದ ಕಾರಜೋಳರ ವಿರುದ್ಧ ನಿರಂತರವಾಗಿ ಅವಹೇಳನಕಾರಿ ಪೋಸ್ಟ್ ಗಳನ್ನು ಪ್ರಕಟಿಸುತ್ತಿದ್ದು, ಬಿಜೆಪಿ ಪಕ್ಷ ಹಾಗೂ ಅದರ ಕಾರ್ಯಕರ್ತರ ಕುರಿತು ಅವಮಾನಕಾರಿ ಪದಗಳನ್ನು ಬಳಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ನಡೆಸುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಇಂತಹ ಪೋಸ್ಟ್ ಸಾರ್ವಜನಿಕರಲ್ಲಿ ದ್ವೇಷ, ವೈಮನಸ್ಸು ಮತ್ತು ಉದ್ವಿಗ್ನತೆ ಉಂಟು ಮಾಡುವ ಸಾಧ್ಯತೆ ಇದ್ದು, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಆತಂಕವಿದೆ. ಪ್ರಜಾಪ್ರಭುತ್ವದಲ್ಲಿ ಟೀಕೆ ಮಾಡುವ ಹಕ್ಕು ಎಲ್ಲರಿಗೂ ಇದ್ದರೂ, ಸುಳ್ಳು, ಮಾನಹಾನಿಕರ ಹಾಗೂ ಪ್ರಚೋದನಾತ್ಮಕ ಮಾಹಿತಿಯನ್ನು ಪ್ರಸಾರ ಮಾಡುವ ಹಕ್ಕು ಯಾರಿಗೂ ಇಲ್ಲ ಎಂದವರು ತಿಳಿಸಿದ್ದಾರೆ.
ದೂರಿನಲ್ಲಿ ಶ್ರೀನಿವಾಸ್ ಬಾಬು ವಿರುದ್ಧ ಪ್ರಕರಣ ದಾಖಲಿಸುವುದು, ಸಾಮಾಜಿಕ ಜಾಲತಾಣಗಳಲ್ಲಿನ ಪೋಸ್ಟ್ ಗಳನ್ನು ಪರಿಶೀಲಿಸಿ ಡಿಜಿಟಲ್ ಸಾಕ್ಷ್ಯ ಸಂರಕ್ಷಿಸುವುದು, ಅಗತ್ಯವಿದ್ದಲ್ಲಿ ಮೊಬೈಲ್ ಫೋನ್ ಹಾಗೂ ಸಾಮಾಜಿಕ ಜಾಲತಾಣ ಖಾತೆಗಳ ತನಿಖೆ ನಡೆಸುವುದು ಮತ್ತು ಸಾರ್ವಜನಿಕ ಶಾಂತಿ ಭಂಗಪಡಿಸುವ ಕೃತ್ಯಗಳ ವಿರುದ್ಧ ಕಾನೂನುಬದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷ ವೀರನಗೌಡ ಲೆಕ್ಕಿಹಾಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂತೋಷ್ ರಾಜಗುರು, ನಗರಸಭೆಯ ಮಾಜಿ ಸದಸ್ಯ ಹಾಗೂ ಬಿಜೆಪಿ ಎಸ್ಸಿ ಮೋರ್ಚಾದ ಮಾಜಿ ನಗರ ಅಧ್ಯಕ್ಷ ಮಂಚಲ್ ಭೀಮಣ್ಣ, ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಜೆ.ಎಂ.ಮೌನೇಶ್ ಸೇರಿದಂತೆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.