2030ರೊಳಗೆ ಹೆಚ್ಐವಿ ಮುಕ್ತ ಭಾರತ ಗುರಿ ಸಾಧನೆಗೆ ಎಲ್ಲ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿ
ರಾಯಚೂರಿನಲ್ಲಿ ಹೆಚ್ಐವಿ ನಿಯಂತ್ರಣ ಕಾರ್ಯಕ್ರಮಗಳ ಪರಿಶೀಲನೆ
ರಾಯಚೂರು : 2030ರೊಳಗೆ ಹೆಚ್ಐವಿ ಮುಕ್ತ ಭಾರತ ಎಂಬ ರಾಷ್ಟ್ರೀಯ ಗುರಿ ಸಾಧಿಸಲು ಆರೋಗ್ಯ ಇಲಾಖೆ ಮಾತ್ರವಲ್ಲದೆ ಸರ್ಕಾರದ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಜಂಟಿ ಹೋರಾಟ ರೂಪಿಸಬೇಕಾಗಿದೆ ಎಂದು ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸಂಸ್ಥೆಯ ಮೂಲಸೌಕರ್ಯ ವಿಭಾಗದ ಜಂಟಿ ನಿರ್ದೇಶಕಿ ಡಾ. ಗಿರಿಜಾ ತಾಯಿ ಹೇಳಿದರು.
ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸಂಸ್ಥೆಯ ನಿರ್ದೇಶನದಂತೆ ರಾಯಚೂರು ಜಿಲ್ಲೆಯಲ್ಲಿ ಹೆಚ್ಐವಿ ನಿಯಂತ್ರಣ ಕಾರ್ಯಕ್ರಮಗಳ ಪರಿಶೀಲನೆ ನಡೆಸಿದ ಅವರು, ರೀಮ್ಸ್ ಬೋಧಕ ಆಸ್ಪತ್ರೆ, ಗುಂಜಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಜಿಲ್ಲಾ ಔಷಧಿ ಉಗ್ರಾಣ, ಹೊಸಬೆಳಕು ಸಂಸ್ಥೆ, ಎಆರ್ಟಿ, ಡಿಎಸ್ಆರ್ಸಿ ಹಾಗೂ ಐಸಿಟಿಸಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಳಿಕ ಮಾತನಾಡಿದ ಅವರು, ಸಮಾಜದಲ್ಲಿ ಹೆಚ್ಐವಿ ಸೋಂಕಿಗೆ ಸಂಬಂಧಿಸಿದ ಕಳಂಕ ಹಾಗೂ ತಾರತಮ್ಯ ನಿವಾರಿಸುವುದು ಮತ್ತು ಇತ್ತೀಚಿನ ದಿನಗಳಲ್ಲಿ ಹದಿಹರೆಯದವರಲ್ಲಿ ಹೆಚ್ಚುತ್ತಿರುವ ಸೋಂಕು ಪ್ರಕರಣಗಳನ್ನು ನಿಯಂತ್ರಿಸಲು ವ್ಯಾಪಕ ಜಾಗೃತಿ ಮೂಡಿಸಬೇಕಾಗಿದೆ ಎಂದು ಹೇಳಿದರು.
ರಾಜ್ಯದ ಎಲ್ಲ ಜಿಲ್ಲೆಗಳಿಗೆ ಪರಿಶೀಲನಾ ತಂಡಗಳು ಭೇಟಿ ನೀಡುತ್ತಿದ್ದು, ಹೆಚ್ಐವಿ ಹರಡುವ ನಾಲ್ಕು ಪ್ರಮುಖ ಮಾರ್ಗಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವ ಹೊಣೆಗಾರಿಕೆ ಎಲ್ಲ ಇಲಾಖೆಗಳ ಮೇಲಿದೆ. ವಿಶೇಷವಾಗಿ ಯುವಜನರಲ್ಲಿ ಸೋಂಕು ತಡೆಗಟ್ಟಲು ಆರೋಗ್ಯ ಇಲಾಖೆಯೊಂದಿಗೆ ವಿವಿಧ ಮುಂಚೂಣಿ ಇಲಾಖೆಗಳು ಸಮಾನ ಹೊಣೆಗಾರಿಕೆಯಿಂದ ಕೆಲಸ ಮಾಡಬೇಕು ಎಂದು ತಿಳಿಸಿದರು.
ಕೆಎಸ್ಎಪಿಎಸ್ ಅಡಿಯಲ್ಲಿ ಕಾರ್ಯನಿರ್ವಹಿಸುವ ಎಲ್ಲ ಸೇವಾ ಕೇಂದ್ರಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ತರಬೇತಿ, ಪರೀಕ್ಷೆ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಮತ್ತಷ್ಟು ಬಲಪಡಿಸಲು ಸೂಚನೆ ನೀಡಿದರು.
ಭಾರತ ಸರ್ಕಾರದ ಮಾರ್ಗಸೂಚಿಯಂತೆ ಮೊಬಿಲೈಸೇಶನ್ ಏಡ್ಸ್ ಸುರಕ್ಷಾ ಅಭಿಯಾನ ಹಾಗೂ 95-95-95 ರಾಷ್ಟ್ರೀಯ ಗುರಿ ಸಾಧನೆಗಾಗಿ ಅಪಾಯದ ಪ್ರದೇಶಗಳು ಮತ್ತು ಪದವಿ ಕಾಲೇಜುಗಳಲ್ಲಿ ರೆಡ್ ರಿಬ್ಬನ್ ಕ್ಲಬ್ಗಳ ಮೂಲಕ ಹೆಚ್ಐವಿ ಕುರಿತು ಅರಿವು ಮೂಡಿಸಬೇಕು. ಜೊತೆಗೆ ಕ್ಯೂಆರ್ ಕೋಡ್ ಬಳಸಿ ಸ್ವಯಂ ಮೌಲ್ಯಮಾಪನಕ್ಕೆ ಉತ್ತೇಜನ ನೀಡುವಂತೆ ಸಂಬಂಧಿತ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಹಣಕಾಸು ಜಂಟಿ ನಿರ್ದೇಶಕಿ ಲಲಿತಾ, ಮೂಲಸೌಕರ್ಯ ಉಪ ನಿರ್ದೇಶಕ ಡಾ ಹನುಮಂತರಾಯಪ್ಪ, ಸಹಾಯಕ ನಿರ್ದೇಶಕರು ಟಿಐ ಜ್ಯೋತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರ ಬಾಬು, ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿ ಡಾ.ಮಹಮ್ಮದ್ ಶಾಕೀರ್, ಜಿಲ್ಲಾ ಏಡ್ಸ್ ಮೇಲ್ವಿಚಾರಕ ಮಲ್ಲಯ್ಯ ಮಠಪತಿ, ಸೇರಿದಂತೆ ಡ್ಯಾಪ್ಕೂ ಸಿಬ್ಬಂದಿ ವರ್ಗದವರು ಹಾಜರಿದ್ದರು.