×
Ad

ಫೆ.5ರಿಂದ 'ಎಡೆದೊರೆ ನಾಡು' ಸಂಭ್ರಮ : ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌ರಿಂದ ಹೊಸ ದಿನಾಂಕ ಘೋಷಣೆ

Update: 2026-01-16 21:50 IST

ರಾಯಚೂರು: ಜಿಲ್ಲೆಯ ಐತಿಹಾಸಿಕ ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ‘ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ-2026’ರ ದಿನಾಂಕವನ್ನು ಅನಿವಾರ್ಯ ಕಾರಣಗಳಿಂದಾಗಿ ಒಂದು ವಾರ ಮುಂದೂಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌ ತಿಳಿಸಿದ್ದಾರೆ.

ಜ.16ರಂದು ರಾಯಚೂರು ಪ್ರವಾಸದಲ್ಲಿದ್ದ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ್‌ ಪಾಟೀಲ್‌ ಅವರು ಮಾವಿನಕೆರೆ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ರಾಯಚೂರು ಜಿಲ್ಲಾ ಉತ್ಸವವನ್ನು ಜ.29, 30 ಹಾಗೂ 31ರಂದು ನಡೆಸಬೇಕು ಎಂದು ನಿರ್ಧರಿಸಿ ಸಿದ್ಧತೆ ಮಾಡಲಾಗುತ್ತಿತ್ತು. ಆದರೆ, ಜ.22ರಿಂದ ವಿಧಾನ ಮಂಡಲ ಅಧಿವೇಶನ ನಡೆಸಬೇಕು ಎನ್ನುವ ಸಚಿವ ಸಂಪುಟದ ನಿರ್ಣಯಕ್ಕೆ ರಾಜ್ಯಪಾಲರು ಅಂಗೀಕರಿಸಿದ್ದರಿಂದಾಗಿ ಕರ್ನಾಟಕ ವಿಧಾನ ಮಂಡಲ ಕಲಾಪವು ತುರ್ತಾಗಿ ನಿಗದಿಯಾದ ಹಿನ್ನೆಲೆಯಲ್ಲಿ ಎಲ್ಲ ಸಚಿವರು ಮತ್ತು ಶಾಸಕರು ಕಲಾಪದಲ್ಲಿ ಭಾಗಿಯಾಗುತ್ತಿರುವ ಹಿನ್ನೆಲೆಯಲ್ಲಿ ಉತ್ಸವವನ್ನು ಮುಂದಿನ ತಿಂಗಳು ಫೆ.5ರಿಂದ ಮೂರು ದಿನಗಳ ಕಾಲ ನಡೆಸಲಾಗುವುದು ಎಂದು ಸಚಿವರು ಹೊಸ ದಿನಾಂಕ ಪ್ರಕಟಿಸಿದರು.

ಉತ್ಸವವನ್ನು ಫೆ.6ರಿಂದ ಮೂರು ದಿನಗಳ ಕಾಲ ನಡೆಸಲು ಯೋಜಿಸಲಾಗಿತ್ತಾದರೂ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ಫೆ.8ರಿಂದ ವಾಲ್ಮೀಕಿ ಜಾತ್ರೋತ್ಸವ ಆಯೋಜನೆಯಾಗಿದ್ದರಿಂದಾಗಿ ಫೆ.6ರ ಬದಲಾಗಿ ಫೆ.5ರಿಂದ ಮೂರು ದಿನಗಳು ಫೆ.5, 6 ಮತ್ತು 7ರಂ ದು ಉತ್ಸವ ನಡೆಸಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ಎನ್.ಎಸ್.ಬೋಸರಾಜು, ಶಾಸಕರಾದ ಡಾ.ಎಸ್.ಶಿವರಾಜ ಪಾಟೀಲ, ಬಸನಗೌಡ ದದ್ದಲ್, ಹಂಪಯ್ಯ ನಾಯಕ, ಎ.ವಸಂತಕುಮಾರ ಹಾಗೂ ಇನ್ನೀತರ ಗಣ್ಯ ಮಹನಿಯರು ಮತ್ತು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಈಶ್ವರ ಕುಮಾರ ಕಾಂದೂ, ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ ಹಾಗೂ ಇತರರು ಇದ್ದರು.




Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News