ಲಿಂಗಸುಗೂರು | ದಲಿತ ಮಹಿಳೆಯ ಕೊಲೆ ಪ್ರಕರಣ: ಆರೋಪಿಯ ಬಂಧನ

Update: 2026-08-23 11:57 IST

ಲಿಂಗಸುಗೂರು, ಆ.22: ನಾಲ್ಕು ದಿನಗಳ ಹಿಂದೆ ನಡೆದ ತಾಲೂಕಿನ ಕರಡಕಲ್ ಗ್ರಾಮದ ದಲಿತ ಮಹಿಳೆ ರಾಣಿಮ್ಮ ಎಂಬವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ನೀರಲಕೇರಿ ಗ್ರಾಮದ ಅಮರೇಶ ಗಾಣಿಗ ಬಂಧಿತ ಆರೋಪಿ. ಡಿವೈಎಸ್ಪಿ ದತ್ತಾತ್ರೇಯ ಕಾರ್ನಾಡ್ ನೇತೃತ್ವದ ಪೊಲೀಸ್ ತಂಡ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿ, ಲಭ್ಯವಾದ ಸಾಕ್ಷ್ಯಗಳು ಹಾಗೂ ಸಾಕ್ಷಿದಾರರ ಹೇಳಿಕೆಗಳ ಆಧಾರದ ಮೇಲೆ ಆರೋಪಿಯನ್ನು ಬಂಧಿಸಿದೆ.

ಆ.19ರಂದು ರಾಣಿಮ್ಮ ಮನೆಯಿಂದ ಹೊರಗೆ ತೆರಳಿದ ಬಳಿಕ, ಅವರ ಮೃತದೇಹ ಜಾಲಿಬೆಂಚಿ ಗ್ರಾಮದ ಹೊರವಲಯದ ಹೊಲದಲ್ಲಿ ಪತ್ತೆಯಾಗಿತ್ತು. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದರು.

ರಾಣಿಮ್ಮ ಅವರನ್ನು ಅಮರೇಶನು ಮೋಟರ್ ಸೈಕಲ್ ನಲ್ಲಿ ಕರೆದುಕೊಂಡು ಹೋಗಿದ್ದನ್ನು ಕಂಡಿರುವುದಾಗಿ ಸಾಕ್ಷಿಯೊಬ್ಬರು ಹೇಳಿಕೆ ನೀಡಿದ್ದು, ಮತ್ತೊಬ್ಬ ಸಾಕ್ಷಿಯು ಹೊಲದ ಬಳಿ ರಾಣಿಮ್ಮ ಅವರ ಮೇಲೆ ಕಲ್ಲಿನಿಂದ ಹಲ್ಲೆ ನಡೆಸುತ್ತಿದ್ದುದನ್ನು ಕಂಡಿರುವುದಾಗಿ ಪೊಲೀಸರಿಗೆ ತಿಳಿಸಿರುವುದು ತನಿಖೆಯಲ್ಲಿ ಮಹತ್ವದ ಸುಳಿವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಸಂಬಂಧಿತ ಕಲಂಗಳನ್ನೂ ಅಳವಡಿಸಿಕೊಳ್ಳಲಾಗಿದೆ.

ಬಂಧಿತ ಆರೋಪಿ ಅಮರೇಶನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಪ್ರಕರಣವನ್ನು ಭೇದಿಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದ ಡಿವೈಎಸ್ಪಿ ದತ್ತಾತ್ರೇಯ ಕಾರ್ನಾಡ್ ಹಾಗೂ ತನಿಖಾ ತಂಡದ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News