ರಾಯಚೂರು: ಸ್ವಚ್ಛತೆ ಹಾಗೂ ಕಸ ವಿಲೇವಾರಿ ಕೇವಲ ಪೌರ ಕಾರ್ಮಿಕರ ಜವಾಬ್ದಾರಿಯಲ್ಲ, ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ. ಸಾರ್ವಜನಿಕರು ತಮ್ಮ ಮನೆಯ ಕಸವನ್ನು ಹಸಿ ಮತ್ತು ಒಣ ಕಸವಾಗಿ ಬೇರ್ಪಡಿಸಿ ಪಾಲಿಕೆಯ ಸಂಗ್ರಹಣಾ ವಾಹನಗಳಿಗೆ ನೀಡುವ ಮೂಲಕ ವೈಜ್ಞಾನಿಕವಾಗಿ ವಿಲೇವಾರಿಗೆ ಸಹಕರಿಸಬೇಕು ಎಂದು ಪಾಲಿಕೆ ವಲಯ ಆಯುಕ್ತ ಮಲ್ಲಿಕಾರ್ಜುನ ಬಿ.ಎಂ. ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ರಾಯಚೂರು ಮಹಾನಗರ ಪಾಲಿಕೆ ವತಿಯಿಂದ ‘ಘನತ್ಯಾಜ್ಯ ನಿರ್ವಹಣಾ ನಿಯಮಗಳು–2026’ ಹಾಗೂ ‘ಸ್ವಚ್ಛ ನಗರ ರಾಯಚೂರು’ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ಅರಿವು ಮೂಡಿಸುವ ಕಾರ್ಯಾಗಾರ ಗುರುವಾರ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸ್ವಚ್ಛ ನಗರ ನಿರ್ಮಾಣಕ್ಕಾಗಿ ಪಾಲಿಕೆಯ ಅನೇಕ ಪೌರ ಕಾರ್ಮಿಕರು, ಸಿಬ್ಬಂದಿ ಹಾಗೂ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ನಗರವನ್ನು ಸ್ವಚ್ಛವಾಗಿಡುವಲ್ಲಿ ಸಾರ್ವಜನಿಕರೂ ಕೈಜೋಡಿಸಬೇಕು ಎಂದರು.

ಪಾಲಿಕೆ ಸಿಬ್ಬಂದಿ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಸಾರ್ವಜನಿಕರೊಂದಿಗೆ ಉತ್ತಮವಾಗಿ ಬೆರೆಯಲು ಕೆಲವೊಮ್ಮೆ ಜ್ಞಾನದ ಕೊರತೆ ಎದುರಾಗುತ್ತದೆ. ಇದನ್ನು ತಜ್ಞರ ಮೂಲಕ ನಿವಾರಿಸುವ ಉದ್ದೇಶದಿಂದ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿದೆ. ಸ್ವಚ್ಛ ರಾಯಚೂರು ಸಂಕಲ್ಪವನ್ನು ಸಾಕಾರಗೊಳಿಸಲು ಇಂತಹ ತರಬೇತಿಗಳು ಸಹಕಾರಿಯಾಗಲಿವೆ ಎಂದು ಹೇಳಿದರು.

ಗ್ರೀನ್ ಸ್ಟ್ರೀಟ್ ಇಂಡಿಯಾ ಸಂಸ್ಥೆಯ ಪ್ರತಿನಿಧಿ ಸಂಪತ್ ಸಿ.ಎಂ. ಮಾತನಾಡಿ, ಕಸ ವಿಲೇವಾರಿ ಎಲ್ಲರ ಜವಾಬ್ದಾರಿಯಾಗಿದೆ. ಕಸ ನಿರ್ವಹಣೆಯನ್ನು ಪಾಲಿಕೆಯೇ ಮಾಡಬೇಕು ಎಂಬ ಮನೋಭಾವ ಸರಿಯಲ್ಲ. ‘ನಮ್ಮ ನಗರ, ನಮ್ಮ ಹೆಮ್ಮೆ’ ಎಂಬ ಭಾವನೆಯೊಂದಿಗೆ ಪ್ರತಿಯೊಬ್ಬರೂ ಸ್ವಚ್ಛತೆ ಕಾಪಾಡಬೇಕು. ಏಕಬಳಕೆಯ ವಸ್ತುಗಳ ಬಳಕೆಯನ್ನು ಆದಷ್ಟು ಕಡಿಮೆ ಮಾಡಬೇಕು ಎಂದು ಹೇಳಿದರು.

ಪೌರಾಡಳಿತ ಇಲಾಖೆಯ ನಿವೃತ್ತ ಅಧಿಕಾರಿ ರಾಘವೇಂದ್ರ ಡಿ.ಎಸ್. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಮೂಲದಲ್ಲಿಯೇ ತ್ಯಾಜ್ಯ ವಿಂಗಡಣೆ, ಸಂಗ್ರಹಣೆ, ಸಾಗಣೆ ಹಾಗೂ ವೈಜ್ಞಾನಿಕ ವಿಲೇವಾರಿ ಕುರಿತು ಮಾಹಿತಿ ನೀಡಿದರು. ಘನತ್ಯಾಜ್ಯ ನಿರ್ವಹಣೆಯಲ್ಲಿ ದಾಖಲೆಗಳ ನಿರ್ವಹಣೆ ಹಾಗೂ ಸಿಬ್ಬಂದಿಯ ಜವಾಬ್ದಾರಿಗಳ ಬಗ್ಗೆಯೂ ವಿವರಿಸಿದರು.

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಸಾರ್ವಜನಿಕರು ಮೂಲದಲ್ಲಿಯೇ ವೈಜ್ಞಾನಿಕವಾಗಿ ವಿಂಗಡಿಸಿ ನೀಡಬೇಕು. ಮನೆಗಳಲ್ಲಿ ಉತ್ಪತ್ತಿಯಾಗುವ ಕಸವನ್ನು ಹಸಿ, ಒಣ, ಗೃಹಬಳಕೆಯ ಹಾಗೂ ಅಪಾಯಕಾರಿ ತ್ಯಾಜ್ಯ ಎಂದು ಪ್ರತ್ಯೇಕಿಸಿ ಸ್ವಚ್ಛ ಸಂಗ್ರಹಣಾ ವಾಹನಗಳಿಗೆ ನೀಡಬೇಕು. ಇದರಿಂದ ಸಾರ್ವಜನಿಕರ ಆರೋಗ್ಯದ ಜತೆಗೆ ಪರಿಸರವನ್ನೂ ಸಂರಕ್ಷಿಸಲು ಸಾಧ್ಯ ಎಂದು ತಿಳಿಸಲಾಯಿತು.

ಹಸಿ ಮತ್ತು ಒಣ ಕಸವನ್ನು ಬೇರ್ಪಡಿಸದೆ ಒಟ್ಟಿಗೆ ನೀಡುವುದರಿಂದ ತ್ಯಾಜ್ಯ ವಿಲೇವಾರಿ ಕಷ್ಟವಾಗುತ್ತದೆ. ಮೂಲದಲ್ಲಿಯೇ ತ್ಯಾಜ್ಯವನ್ನು ಸರಿಯಾಗಿ ವಿಂಗಡಿಸಿದರೆ ಮರುಬಳಕೆಗೆ ಅನುಕೂಲವಾಗುವುದಲ್ಲದೆ, ಪೌರ ಕಾರ್ಮಿಕರ ಕೆಲಸವೂ ಸುಲಭವಾಗುತ್ತದೆ ಎಂದು ಸಂಪನ್ಮೂಲ ವ್ಯಕ್ತಿಗಳು ತಿಳಿಸಿದರು.

ಘನತ್ಯಾಜ್ಯವನ್ನು ಸುಡುವುದರಿಂದ ಪರಿಸರ ಹಾಗೂ ಮನುಷ್ಯರ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಕುರಿತು ಪರದೆ ಮೇಲೆ ಪ್ರದರ್ಶನದ ಮೂಲಕ ಮಾಹಿತಿ ನೀಡಲಾಯಿತು. ಮಿಶ್ರಿತ ತ್ಯಾಜ್ಯದಿಂದ ಉತ್ಪತ್ತಿಯಾಗುವ ಲಿಚೆಟ್ ನೀರಿನಿಂದ ಆಹಾರ ಹಾಗೂ ಪರಿಸರದ ಮೇಲೆ ಉಂಟಾಗುವ ಸಮಸ್ಯೆಗಳ ಬಗ್ಗೆಯೂ ವಿವರಿಸಲಾಯಿತು.

ಘನತ್ಯಾಜ್ಯ ನಿರ್ವಹಣಾ ನಿಯಮಗಳು–2026ರ ಕುರಿತು ಮಾಧ್ಯಮಗಳ ಮೂಲಕ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮತ್ತು ಜಾಗೃತಿ ಮೂಡಿಸುವುದು ಕಾರ್ಯಾಗಾರದ ಪ್ರಮುಖ ಉದ್ದೇಶವಾಗಿತ್ತು. ‘ತ್ಯಾಜ್ಯ ವಿಂಗಡಣೆಯಿಂದ ಆರೋಗ್ಯ ಮತ್ತು ಪರಿಸರ ಸಂರಕ್ಷಣೆ ಸಾಧ್ಯ’ ಎಂಬ ಸಂದೇಶದೊಂದಿಗೆ ಸಾರ್ವಜನಿಕರು ತಮ್ಮ ಜವಾಬ್ದಾರಿ ಅರಿತು ಕಸವನ್ನು ವಿಂಗಡಿಸಿ ನೀಡುವಂತೆ ಮನವಿ ಮಾಡಲಾಯಿತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor