ರಾಯಚೂರು | ಅರ್ಥಪೂರ್ಣವಾಗಿ ಡಿ.ದೇವರಾಜು ಅರಸು ಜಯಂತಿ ಆಚರಣೆಗೆ ಡಿಸಿ ಸೂಚನೆ
ರಾಯಚೂರು : ಜಿಲ್ಲೆಯಲ್ಲಿ ಆ.20 ರಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಆ.7ರ ಗುರುವಾರ ದಂದು ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಡಿ.ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆಯ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಂದು ಬೆಳಿಗ್ಗೆ 9ಕ್ಕೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಮೆರವಣಿಗೆಯು ಅಚ್ಚುಕಟ್ಟಾಗಿ ನಡೆಯಬೇಕು. ಬಳಿಕ ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರವು ಸುವ್ಯಸ್ಥಿತವಾಗಿ ನಡೆಯುವಂತಾಗಬೇಕು. ಜಯಂತಿ ಹಿನ್ನೆಲೆಯಲ್ಲಿ ಅಂದು ನಗರದ ಎಲ್ಲಾ ವೃತ್ತಗಳಲ್ಲಿ ಮತ್ತು ಪ್ರಮುಖ ರಸ್ತೆಗಳಲ್ಲಿ ಹಾಗೂ ಜಿಲ್ಲಾ ರಂಗಮಂದಿರದ ಹೊರಾಂಗಣ ಮತ್ತು ಒಳಾಂಗಣದಲ್ಲಿ ಶುಚಿತ್ವ ಕಾಯ್ದುಕೊಳ್ಳಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಆಯಾ ತಾಲೂಕಿನ ತಹಶೀಲ್ದಾರರು ತಾಲೂಕು ಮಟ್ಟದಲ್ಲಿ ದಿನಾಚರಣೆ ಆಚರಿಸಲು ಕ್ರಮ ವಹಿಸಬೇಕು. ಜನ ಪ್ರತಿನಿಧಿಗಳ, ಸಂಘ ಸಂಸ್ಥೆಗಳ ಮತ್ತು ಅಧಿಕಾರಿಗಳ ಸಭೆ ಕರೆದು ಸಮಾಲೋಚಿಸಿ ತಾಲೂಕು ಕೇಂದ್ರಗಳಲ್ಲಿ ಅರ್ಥಪೂರ್ಣವಾಗಿ ದಿನಾಚರಣೆ ನಡೆಸಲು ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಹಶೀಲ್ದಾರರಿಗೆ ಸೂಚನೆ ನೀಡಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರ ಕಚೇರಿಯಿಂದ ಸುತ್ತೋಲೆ ಹೊರಡಿಸಿ ತಿಳಿಸಿದಂತೆ ಡಿ.ದೇವರಾಜು ಅವರ ಜನ್ಮ ದಿನಾಚರಣೆಯನ್ನು ರಾಜ್ಯದಲ್ಲಿರುವ ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರ ವಿದ್ಯಾರ್ಥಿ ನಿಲಯಗಳಲ್ಲಿ, ಆಶ್ರಮ ಶಾಲೆಗಳಲ್ಲಿ, ಖಾಸಗಿ ಮೆಟ್ರಿಕ್ ಪೂರ್ವ ಮತ್ತು ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ಆ.20 ರಂದು ಕಡ್ಡಾಯ ಆಚರಿಸಲು ಕ್ರಮ ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳು, ಬಿಸಿಎಂ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸೂಚನೆ ನೀಡಿದರು.
ಭೂ ಸುಧಾರಣೆ ಕಾಯಿದೆಯಂತಹ ಜನಪರ ಯೋಜನೆಗಳನ್ನು ರೂಪಿಸಿ ಕಾರ್ಯನುಷ್ಠಾನಕ್ಕೆ ತಂದ ಡಿ.ದೇವರಾಜ ಅರಸು ಅವರ ವ್ಯಕ್ತಿತ್ವದ ಬಗ್ಗೆ ಇಂದಿನ ಯುವ ಸಮುದಾಯಕ್ಕೆ ಸಂದೇಶ ಹೋಗುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿನ ವಿವಿಧ ವಸತಿ ನಿಲಯಗಳಲ್ಲಿನ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ, ಭಾಷಣ ಸ್ಪರ್ಧೆ ಹಾಗು ಇನ್ನೀತರ ಸ್ಪರ್ಧೆಗಳನ್ನು ಆಯೋಜನೆ ಮಾಡಿ ಬಹುಮಾನ ವಿತರಣೆಗೆ ಕ್ರಮ ವಹಿಸಬೇಕು ಎಂದು ಇದೆ ವೇಳೆ ಅಪರ ಜಿಲ್ಲಾಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಅಶೋಕ ಅವರಿಗೆ ಸೂಚನೆ ನೀಡಿದರು.
2024-25ನೇ ಸಾಲಿನಲ್ಲಿ ಎಸೆಸೆಲ್ಸಿ, ಪಿ.ಯು.ಸಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಬಿಸಿಎಂ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳನ್ನು ಗುರುತಿಸಿ ವೇದಿಕೆಯಲ್ಲಿ ಸನ್ಮಾನಿಸಿ ಗೌರವಿಸಬೇಕು. ಹಿಂದುಳಿದ ಸಮುದಾಯಗಳ ಒಕ್ಕೂಟದ ಗಣ್ಯರಿಗೆ ವೇದಿಕೆಗೆ ಅವಕಾಶ ಕಲ್ಪಿಸಿಕೊಡಬೇಕು. ಉತ್ತಮ ಸಂಪನ್ಮೂಲ ವ್ಯಕ್ತಿಗಳಿಂದ ಡಿ.ದೇವರಾಜು ಅರಸು ಅವರ ಕುರಿತು ಉಪನ್ಯಾಸ ಏರ್ಪಡಿಸಬೇಕು. ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರದ ಉಪನ್ಯಾಸಕರಾದ ವೆಂಕಟೇಶ ಅವರನ್ನು ಉಪನ್ಯಾಸಕರೆಂದು ಆಹ್ವಾನ ನೀಡಬೇಕು ಎಂದು ಸಭೆಯಲ್ಲಿದ್ದ ವಿವಿಧ ಸಮುದಾಯದ ಮುಖಂಡರು ಸಭೆಗೆ ಸಲಹೆ ಮಾಡಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಡಾ.ಅಶೋಕ ವಿ ಹಾಗೂ ಪತ್ರಾಂಕಿತ ವ್ಯವಸ್ಥಾಪಕರಾದ ಪಂಕಜ ಅವರು ದಿನಾಚರಣೆಗೆ ಸಂಬಂಧಿಸಿದ ಸರ್ಕಾರದ ಸುತ್ತೋಲೆಗಳನ್ನು ಸಭೆಗೆ ಓದಿ ಹೇಳಿದರು.
ಸಭೆಯಲ್ಲಿ ವಿವಿಧ ಸಂಘ ಸಂಸ್ಥೆಗಳ ಪ್ರಮುಖರಾದ ಕೆ.ಶಾಂತಪ್ಪ, ಟಿ.ಕಾಜನಗೌಡ, ಹನುಮಂತಪ್ಪ, ಭಗತರಾಜ ನಿಜಾಮಕಾರಿ, ಪಾಗುಂಡಪ್ಪ, ಎಂ.ಚAದಶೇಖರ, ರಂಗನಾಥ, ಆಂಜನೇಯ ಯಾದವ, ಸುರೇಖಾ ಪಿ, ವಿಜಯಭಾಷ್ಕರ ಇಟಗಿ, ಹಿರಿಯ ಪತ್ರಕರ್ತರಾದ ಬಿ ವೆಂಕಟಸಿಂಗ್, ವಾರ್ತಾ ಇಲಾಖೆಯ ಗವಿಸಿದ್ದಪ್ಪ ಹೊಸಮನಿ, ಲಿಂಗರಾಜ ಸೇರಿದಂತೆ ಇನ್ನೀತರ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.