ರಾಯಚೂರು | ಒಪೆಕ್ ಆಸ್ಪತ್ರೆಗೆ ಜಿಲ್ಲಾಧಿಕಾರಿಗಳ ಭೇಟಿ : ಕಾಮಗಾರಿ, ಸೌಲಭ್ಯಗಳ ಪರಿಶೀಲನೆ
ರಾಯಚೂರು: ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ಜು.16ರಂದು ನಗರದಲ್ಲಿನ ಒಪೆಕ್ ಆಸ್ಪತ್ರೆಗೆ ಭೇಟಿ ನೀಡಿದರು. ಈ ವೇಳೆ ನಿರ್ಮಾಣ ಹಂತದಲ್ಲಿರುವ ಟ್ರಾಮಾ ಕೇರ್ ಸೆಂಟರ್ ಗೆ ಭೇಟಿ ನೀಡಿ ಪರಿಶೀಲಿಸಿದರು.
ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಂಡು ಕಟ್ಟಡ ನಿರ್ಮಾಣ ಕಾರ್ಯವನ್ನು ವೇಗಗೊಳಿಸಬೇಕು ಎಂದು ನಿರ್ದೇಶನ ನೀಡಿದರು. ಆಸ್ಪತ್ರೆಯಲ್ಲಿನ ಸೌಕರ್ಯಗಳ ಬಗ್ಗೆ ವಿಶೇಷ ತಜ್ಞ ವೈದ್ಯರ ಜೊತೆಗೆ ಜಿಲ್ಲಾಧಿಕಾರಿಗಳು ಚರ್ಚೆ ನಡೆಸಿದರು.
ಕಾರ್ಡಿಯಾಲಜಿ ವಿಭಾಗ ಬಲಪಡಿಸಿ:
ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚುತ್ತಿದ್ದು, ಜನತೆಗೆ ಸಕಾಲಕ್ಕೆ ಚಿಕಿತ್ಸೆ ದೊರೆಯುವಂತೆ ಒಪೆಕ್ ಆಸ್ಪತ್ರೆಯಲ್ಲಿನ ಕಾರ್ಡಿಯಾಲಜಿ ವಿಭಾಗವನ್ನು ಬೇಗನೇ ಬಲಪಡಿಸಲು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಕಾರ್ಡಿಯಾಲಜಿ ವಿಭಾಗದ ಡಾ.ಗೋಪಿನಾಥ ಅವರಿಗೆ ಸೂಚನೆ ನೀಡಿದರು.
ಪ್ರಚಾರ ನಡೆಸಿ:
ಒಪೆಕ್ ಆಸ್ಪತ್ರೆಯಲ್ಲಿ ಉತ್ತಮವಾದ ವೈದ್ಯಕೀಯ ಚಿಕಿತ್ಸೆ ಸಿಗುತ್ತಿದೆ ಎಂಬುದರ ಬಗ್ಗೆ ಜನತೆಗೆ ಮಾಹಿತಿ ರವಾನೆಯಾಗಬೇಕು. ಈ ಬಗ್ಗೆ ವ್ಯಾಪಕ ಪ್ರಚಾರ ನೀಡಬೇಕು. ರೋಗಿಗಳಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದ ಸಂದರ್ಭದಲ್ಲಿ ಸರಕಾರಿ ಅಥವಾ ಖಾಸಗಿ ವೈದ್ಯರು ರೋಗಿಯನ್ನು ಒಪೆಕ್ ಆಸ್ಪತ್ರೆಗೆ ಹೋಗುವಂತೆ ಸಲಹೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಸಲಹೆ ಮಾಡಿದರು.
ಈ ಸಂದರ್ಭದಲ್ಲಿ ಒಪೆಕ್ ಆಸ್ಪತ್ರೆಯ ನಿರ್ದೇಶಕರಾದ ಡಾ.ರಮೇಶ ಬಿ.ಎಚ್., ವಿಶೇಷ ಅಧಿಕಾರಿ ಡಾ.ರಮೇಶ ಸಿ.ಸಾಗರ, ಒಪೆಕ್ ಆಸ್ಪತ್ರೆಯ ಮುಖ್ಯ ಆಡಳಿತಾಧಿಕಾರಿ ನೀಲಪ್ರಭಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರಬಾಬು, ಜಿಲ್ಲಾ ಶಸ್ತ್ರಚಿಕಿತ್ಸಕರಾದ ವಿಜಯಶಂಕರ ಸೇರಿದಂತೆ ಇತರರು ಇದ್ದರು.