ರಾಯಚೂರು: ಸೆಪ್ಟೆಂಬರ್ 14ರಂದು ಜಿಲ್ಲೆಯಾದ್ಯಂತ ನಡೆಯಲಿರುವ ಗಣೇಶ ಚತುರ್ಥಿ ಹಬ್ಬವನ್ನು ಶಾಂತಿಯುತವಾಗಿ ಆಚರಿಸಲು ರಾಯಚೂರು ಜಿಲ್ಲಾ ಪೊಲೀಸರು ವ್ಯಾಪಕ ಭದ್ರತಾ ಕ್ರಮ ಕೈಗೊಂಡಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ 23 ಜನರ ವಿರುದ್ಧ ಗಡಿಪಾರು ಕ್ರಮ ಜರುಗಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು 2,570 ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ನಡೆಯಲಿದ್ದು, ಎಲ್ಲ ಗಣೇಶ ಮಂಡಳಿಗಳಿಂದ ಮುಚ್ಚಳಿಕೆ ಪತ್ರ ಬರೆಯಿಸಿಕೊಳ್ಳಲಾಗಿದೆ. ರಾಯಚೂರು ನಗರ ಸೇರಿದಂತೆ ಎಲ್ಲಾ ತಾಲೂಕು ಹಾಗೂ ಗ್ರಾಮಗಳಲ್ಲಿ ವಿವಿಧ ಸಮುದಾಯಗಳ ಮುಖಂಡರು ಮತ್ತು ಅಧಿಕಾರಿಗಳೊಂದಿಗೆ ಶಾಂತಿ ಸಭೆಗಳು ನಡೆಸಲಾಗಿದೆ.

ಜಿಲ್ಲೆಯಲ್ಲಿ ದಾಖಲಾಗಿರುವ 1,557 ರೌಡಿ ಆಸಾಮಿಗಳ ಪೈಕಿ 1,454 ಜನರ ವಿರುದ್ಧ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಇವರಲ್ಲಿ 1,124 ಜನರಿಂದ ತಾಲೂಕು ದಂಡಾಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಮುಚ್ಚಳಿಕೆ ಪತ್ರ ಪಡೆದುಕೊಂಡಿದ್ದಾರೆ.

ಹಬ್ಬದ ಬಂದೋಬಸ್ತ್‌ಗೆ ಹೆಚ್ಚುವರಿ ಎಸ್‌ಪಿ, 4 ಡಿಎಸ್‌ಪಿಗಳು, 31 ಪಿಐ/ಸಿಪಿಐಗಳು, 122 ಎಎಸ್‌ಐಗಳು, 630 ಪೊಲೀಸ್ ಸಿಬ್ಬಂದಿ, 500 ಗೃಹರಕ್ಷಕ ದಳದ ಸಿಬ್ಬಂದಿ, 10 ಸಶಸ್ತ್ರ ಮೀಸಲು ಪಡೆ ತುಕಡಿಗಳು, 6 ಕೆಎಸ್‌ಆರ್‌ಪಿ ತುಕಡಿಗಳು ಹಾಗೂ ಎಎಸ್‌ಸಿ ತಂಡವನ್ನು ನಿಯೋಜಿಸಲಾಗಿದೆ.

ಗಣೇಶೋತ್ಸವದ ವೇಳೆ ಮಾದಕ ದ್ರವ್ಯ ಸೇವನೆ, ಬೈಕ್ ವೀಲಿಂಗ್, ಮಹಿಳೆಯರು, ಮಕ್ಕಳು ಹಾಗೂ ವೃದ್ಧರಿಗೆ ಕಿರಿಕಿರಿ ಉಂಟು ಮಾಡುವವರು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಪಿ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲೆಯ ಜನರು ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ, ಶಾಂತಿ, ಸೌಹಾರ್ದ ಮತ್ತು ಕಾನೂನು ಪಾಲನೆಯೊಂದಿಗೆ ಗಣೇಶ ಹಬ್ಬವನ್ನು ಆಚರಿಸಬೇಕು ಎಂದು ಪೊಲೀಸ್ ಇಲಾಖೆ ಮನವಿ ಮಾಡಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor