ರಾಯಚೂರು: ಜಿಲ್ಲೆಯ ಭೂಮಾನಂದ, ಅಶ್ವಿನಿ ಹಾಗೂ ರಾಣೆಮ್ಮ ಕೊಲೆ ಪ್ರಕರಣಗಳನ್ನು ಖಂಡಿಸಿ ಕರ್ನಾಟಕ ದಲಿತ ಸೇನೆ (ರಿ.) ರಾಯಚೂರು ಜಿಲ್ಲಾ ಘಟಕದ ವತಿಯಿಂದ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನಾಕಾರರು ಜಿಲ್ಲೆಯಲ್ಲಿ ದಲಿತರಿಗೆ ಸುರಕ್ಷತೆ ಇಲ್ಲದಂತಾಗಿದೆ ಎಂದು ಆರೋಪಿಸಿ, ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತದ ಕಾರ್ಯವೈಖರಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಅಧ್ಯಕ್ಷ ಮಾರುತಿ ಕಮ್ತೋಳ್ ಮಾತನಾಡಿ, ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದ ಅಶ್ವಿನಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಅತ್ಯಂತ ಅಮಾನವೀಯವಾಗಿದೆ. ಪ್ರಕರಣದ ಎಲ್ಲ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಅಶ್ವಿನಿಗೆ ನ್ಯಾಯ ದೊರೆಯುವುದು ಎಂದರೆ ಆರೋಪಿಗಳಿಗೆ ಶಿಕ್ಷೆ ನೀಡುವುದಷ್ಟೇ ಅಲ್ಲ, ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸುರಕ್ಷಿತ ಆಡಳಿತ ವ್ಯವಸ್ಥೆ ನಿರ್ಮಾಣವಾಗಬೇಕು ಎಂದು ಒತ್ತಾಯಿಸಿದರು.

ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛ ಭಾರತ ಮಿಷನ್ ಮತ್ತು ಮನೆ-ಮನೆಗೆ ಶೌಚಾಲಯ ಯೋಜನೆಯಡಿ ಅರ್ಹ ಕುಟುಂಬಗಳಿಗೆ ಶೌಚಾಲಯ ನಿರ್ಮಾಣವಾಗದಿರುವ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ಮಹಿಳೆಯರು ರಾತ್ರಿ ವೇಳೆ ಬಹಿರ್ದೆಸೆಗೆ ತೆರಳುವ ಅನಿವಾರ್ಯತೆ ತಪ್ಪಿಸಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಗ್ರಾಮ ಪಂಚಾಯಿತಿ ಮಟ್ಟದಿಂದ ಜಿಲ್ಲಾಮಟ್ಟದವರೆಗೆ ಪಿಡಿಒ, ತಹಶೀಲ್ದಾರ್, ಪೊಲೀಸ್ ಅಧಿಕಾರಿಗಳು, ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಸಿಇಒ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಮ್ಮ ಕರ್ತವ್ಯವನ್ನು ಕಟ್ಟುನಿಟ್ಟಾಗಿ ನಿರ್ವಹಿಸಬೇಕು. ದಲಿತ ಪ್ರದೇಶಗಳಲ್ಲಿ ಕುಂದುಕೊರತೆ ಸಭೆಗಳನ್ನು ನಡೆಸಿ ಕಾನೂನು ಅರಿವು ಮತ್ತು ಭದ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಯಿತು.

ಅಶ್ವಿನಿ ಸೇರಿದಂತೆ ಜಿಲ್ಲೆಯಲ್ಲಿ ನಡೆದಿರುವ ಕೊಲೆ ಪ್ರಕರಣಗಳ ತನಿಖೆಯನ್ನು ನಿಷ್ಪಕ್ಷಪಾತವಾಗಿ ಹಾಗೂ ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ಘಟನೆಗಳನ್ನು ತಡೆಯುವಲ್ಲಿ ವಿಫಲರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು, ಅಗತ್ಯವಿದ್ದಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ವಿರುದ್ಧವೂ ಹೊಣೆಗಾರಿಕೆ ನಿಗದಿಪಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನೆಯ ವೇಳೆ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು, ಸಂತ್ರಸ್ತ ಕುಟುಂಬಗಳಿಗೆ ಸೂಕ್ತ ಪರಿಹಾರ, ಭದ್ರತೆ ಮತ್ತು ಸರ್ಕಾರದ ನೆರವು ನೀಡುವಂತೆ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಗಿರಿಯಪ್ಪ ನೆಲಹಾಳ್, ನರಸಿಂಹಲು ಕುರ್ಡಿ, ಈರಣ್ಣ, ನಾಗೇಶ್ ಕುರ್ಡಿ, ಈಶ್ವರ ಯಾಕ್ಲಾಸಪುರ, ಸುರೇಶ ಬಾಬು, ವೆಂಕಟೇಶ್ ಚಿಕ್ಕಸೂಗೂರು, ಮಹಾನಂದ ಚಿಕ್ಕಸೂಗೂರು, ಹನುಮಂತ, ಚಿನ್ನಪ್ಪ ಚಿಕ್ಕಸೂಗೂರು, ಆಂಜನೇಯ ಕೊಂಬಿನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor