ರಾಯಚೂರು | ಸೆ.13 ರಂದು ರಾಷ್ಟ್ರೀಯ ಲೋಕ ಅದಾಲತ್: ನ್ಯಾ.ಎಚ್.ಎ.ಸಾತ್ವಿಕ್
ರಾಯಚೂರು : ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಉಳಿದಿರುವ ಪ್ರಕರಣಗಳನ್ನು ತಕ್ಷಣ ಇತ್ಯರ್ಥಪಡಿಸುವ ಸಲುವಾಗಿ ಇಡೀ ಜಿಲ್ಲೆಗೆ ಸಂಬಂಧಿಸಿದಂತೆ ಸೆ.13 ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಎಚ್.ಎ.ಸಾತ್ವಿಕ್ ಅವರು ತಿಳಿಸಿದ್ದಾರೆ.
ಅಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ನ್ಯಾಯಾಲಯದಲ್ಲಿ ಹಾಗೂ ಜಿಲ್ಲೆಯ ಎಲ್ಲಾ ತಾಲ್ಲೂಕು ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್ ನಿಗದಿಪಡಿಸಲಾಗಿದ್ದು, ಲೋಕ ಅದಾಲತ್ನಲ್ಲಿ ನ್ಯಾಯಾಲಯದಲ್ಲಿ ಬಾಕಿ ಇರುವ ಸಿವಿಲ್ ಮತ್ತು ಕ್ರೀಮಿನಲ್ (ರಾಜಿಯಾಗುವಂತಹ) ಮೊಕದ್ದಮೆಗಳನ್ನು, ಅಲ್ಲದೇ ಮೋಟಾರ್ ವಾಹನ ಕಾಯ್ದೆ, ಕುಟುಂಬ ನ್ಯಾಯಾಲಯದ ಪ್ರಕರಣಗಳು ಮತ್ತು ಎಲ್ಲಾ ಬಗೆಯ ಪ್ರಕರಣಗಳನ್ನು ಲೋಕ ಅದಾಲತ್ ಮುಖಾಂತರ ಇತ್ಯರ್ಥಗೊಳಿಸಲಾಗುವುದು.
ವಕೀಲರು, ಕಕ್ಷಿದಾರರು, ನ್ಯಾಯಾಲಯದಲ್ಲಿ ಬಾಕಿ ಇರುವ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಷ್ಟ್ರೀಯ ಲೋಕ ಅದಾಲತ್ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಸದಾವಕಾಶವನ್ನು ಒದಗಿಸಲಾಗಿದ್ದು, ಎಲ್ಲಾ ವಕೀಲರು, ಕಕ್ಷಿದಾರರು, ನ್ಯಾಯಾಲಯದಲ್ಲಿ ಬಾಕಿ ಇರುವ ಹಾಗೂ ವ್ಯಾಜ್ಯಪೂರ್ವ ಎಲ್ಲಾ ಬಗೆಯ ಕೇಸುಗಳನ್ನು ಲೋಕ ಅದಾಲತ್ ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಇತ್ಯರ್ಥಪಡಿಸಿಕೊಳ್ಳುವಂತೆ ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.