Raichur | ರಿಮ್ಸ್ ಆಸ್ಪತ್ರೆಯಲ್ಲಿ ಕೈದಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು : ಡೆತ್ ನೋಟ್ ಪತ್ತೆ

ನಾಲ್ವರು ಸಹ ಕೈದಿಗಳ ವಿರುದ್ಧ ಎಫ್‌ಐಆರ್

Update: 2026-08-05 19:31 IST

ರಾಯಚೂರು, ಆ.5: ರಿಮ್ಸ್ ಆಸ್ಪತ್ರೆಯ ಕೈದಿಗಳ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಆತ್ಮಹತ್ಯೆ ಮಾಡಿಕೊಂಡ ವಿಚಾರಣಾಧೀನ ಕೈದಿ ಪವನಕುಮಾರ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಸಹ ಕೈದಿಗಳ ಕಿರುಕುಳವೇ ಆತ್ಮಹತ್ಯೆಗೆ ಕಾರಣ ಎಂದು ಡೆತ್‌ನೋಟ್‌ನಲ್ಲಿ ಉಲ್ಲೇಖವಾಗಿರುವ ಹಿನ್ನೆಲೆಯಲ್ಲಿ ನಾಲ್ವರು ಸಹ ಕೈದಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ಕಲಬುರಗಿ ಮೂಲದ ಪವನಕುಮಾರ ಕೊಲೆ ಪ್ರಕರಣವೊಂದರಲ್ಲಿ ವಿಚಾರಣಾಧೀನ ಕೈದಿಯಾಗಿದ್ದು, ಅನಾರೋಗ್ಯದ ಹಿನ್ನೆಲೆಯಲ್ಲಿ ರಿಮ್ಸ್ ಆಸ್ಪತ್ರೆಯ ಕೈದಿ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜುಲೈ 28ರಂದು ಅವರು ಶೌಚಾಲಯದಲ್ಲಿ ಬೆಡ್‌ಶೀಟ್‌ನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಆರಂಭದಲ್ಲಿ ಅನಾರೋಗ್ಯದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದರು.

ಆದರೆ ಮರಣೋತ್ತರ ಪರೀಕ್ಷೆಯ ವೇಳೆ ಪತ್ತೆಯಾದ ಡೆತ್‌ನೋಟ್‌ನಲ್ಲಿ ಸಹ ಕೈದಿಗಳಾದ ಪ್ರಭಾಕರ ರೆಡ್ಡಿ, ವಿನಯ ರೆಡ್ಡಿ, ಮಹೇಶ್ ರಾಳದೊಡ್ಡಿ ಹಾಗೂ ಶಿವರಾಜ ಸಿರವಾರ ಅವರಿಂದ ನಿರಂತರ ದೈಹಿಕ ಮತ್ತು ಮಾನಸಿಕ ಕಿರುಕುಳ ಅನುಭವಿಸಿದ್ದಾಗಿ ಉಲ್ಲೇಖಿಸಲಾಗಿದೆ.

ಡೆತ್‌ನೋಟ್ ಪ್ರಕಾರ, ಟಿಬಿ ಕಾಯಿಲೆ ಇದ್ದ ಕಾರಣ ಪವನಕುಮಾರನನ್ನು ಕೀಳಾಗಿ ಕಾಣುವುದು, ಅವಾಚ್ಯ ಶಬ್ದಗಳಿಂದ ನಿಂದಿಸುವುದು, ಊಟದ ತಟ್ಟೆಗೆ ಉಗುಳುವುದು, ನೀರು ಸುರಿಯುವುದು, ಗಂಜಿ ಚೆಲ್ಲುವುದು ಸೇರಿದಂತೆ ವಿವಿಧ ರೀತಿಯ ಕಿರುಕುಳ ನೀಡಲಾಗುತ್ತಿತ್ತು ಎಂದು ಆರೋಪಿಸಲಾಗಿದೆ.

ಜಿಲ್ಲಾ ಕಾರಾಗೃಹ ಅಧಿಕಾರಿ ಅನಿತಾ ಹೀರೆಮಠ ನೀಡಿದ ದೂರಿನ ಮೇರೆಗೆ ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಕಲಂ 108, 54, 352 ಹಾಗೂ 3(5) ಅಡಿಯಲ್ಲಿ ನಾಲ್ವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಈ ಪ್ರಕರಣದೊಂದಿಗೆ, ನಗರದ ಘರ್ಷಣೆ ಪ್ರಕರಣದಲ್ಲಿ ವಿಚಾರಣಾಧೀನ ಕೈದಿಗಳಾಗಿದ್ದ ಆರೋಪಿಗಳಿಗೆ ಇದೀಗ ಸಹ ಕೈದಿಗೆ ಕಿರುಕುಳ ನೀಡಿದ ಮತ್ತೊಂದು ಪ್ರಕರಣವೂ ಸೇರ್ಪಡೆಯಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News