Raichur | ಗ್ರಾಮ ಪಂಚಾಯತ್ ನೌಕರರಿಗೆ ಕನಿಷ್ಠ ವೇತನ ಜಾರಿಗೆ ಆಗ್ರಹಿಸಿ ಪ್ರತಿಭಟನೆ
ರಾಯಚೂರು: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಜಾರಿ, ಸೇವಾ ಹಿರಿತನ ಆಧರಿಸಿ ಇನ್ಕ್ರಿಮೆಂಟ್, ಡಾಟಾ ಎಂಟ್ರಿ ಆಪರೇಟರ್ ಹಾಗೂ ನೀರುಗಂಟಿ ಸೇರಿದಂತೆ ವಿವಿಧ ಸಿಬ್ಬಂದಿಯನ್ನು ಸರ್ಕಾರಿ ನೌಕರರೆಂದು ಘೋಷಣೆ ಮಾಡುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಯಿತು.
ಸಂಘದ ಪದಾಧಿಕಾರಿಗಳು ನಗರದ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿ, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕಳೆದ 7–8 ವರ್ಷಗಳಿಂದ ವೇತನ ಪರಿಷ್ಕರಣೆಯಾಗದೆ ಇರುವುದರಿಂದ ಬೆಲೆ ಏರಿಕೆಯ ನಡುವೆ ಜೀವನ ನಿರ್ವಹಣೆ ಕಷ್ಟವಾಗಿದೆ. ಪ್ರಸ್ತುತ ನೀಡುತ್ತಿರುವ ವೇತನದಿಂದ ಮಕ್ಕಳ ಶಿಕ್ಷಣ, ಆರೋಗ್ಯ ಸೇರಿದಂತೆ ಕುಟುಂಬದ ಮೂಲಭೂತ ಅಗತ್ಯಗಳನ್ನು ಪೂರೈಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಬೆಲೆ ಏರಿಕೆಗೆ ಅನುಗುಣವಾಗಿ 2026ರ ಮೇ 22ರಂದು ಹೊರಡಿಸಿರುವ ವೇತನ ನಿಗದಿ ಆದೇಶದಂತೆ ಪರಿಷ್ಕೃತ ವೇತನವನ್ನು ಕೂಡಲೇ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕರವಸೂಲಿಗಾರರು, ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ಗಳು, ನೀರುಗಂಟಿಗಳು, ಜವಾನರು ಹಾಗೂ ಸ್ವಚ್ಛತಾಗಾರರನ್ನು ಏಕಕಾಲದಲ್ಲಿ ಸರ್ಕಾರಿ ನೌಕರರೆಂದು ಘೋಷಿಸಬೇಕು ಎಂದು ಆಗ್ರಹಿಸಿದರು.
ಸೇವಾ ಹಿರಿತನ ಆಧರಿಸಿ ಇನ್ಕ್ರಿಮೆಂಟ್ಗೆ ಒತ್ತಾಯ :
ಸೇವಾ ಹಿರಿತನದ ಆಧಾರದ ಮೇಲೆ ಇನ್ಕ್ರಿಮೆಂಟ್ ನೀಡಬೇಕು. 5 ವರ್ಷ ಸೇವೆ ಸಲ್ಲಿಸಿದವರಿಗೆ 750 ರೂ., 10 ವರ್ಷ ಮೇಲ್ಪಟ್ಟವರಿಗೆ 1,500 ರೂ. ಹಾಗೂ 15 ವರ್ಷ ಮೇಲ್ಪಟ್ಟವರಿಗೆ 3,00 ರೂ.0 ಇನ್ಕ್ರಿಮೆಂಟ್ ನೀಡಬೇಕು ಎಂದು ಒತ್ತಾಯಿಸಿದರು.
ನಿವೃತ್ತಿ ಅಥವಾ ಮರಣ ಹೊಂದುವ ಪಂಚಾಯಿತಿ ನೌಕರರಿಗೆ 6 ಲಕ್ಷ ರೂ. ಇಡಿಗಂಟು ನೀಡಬೇಕು. ಜಿಲ್ಲಾ ಪಂಚಾಯಿತಿಯಿಂದ ಅನುಮೋದನೆ ಪಡೆಯದಿದ್ದರೂ ಪಂಚಾಯಿತಿ ಠರಾವಿನ ಮೂಲಕ ನೇಮಕಗೊಂಡ ಸಿಬ್ಬಂದಿಗೂ ಇಡಿಗಂಟು ನೀಡಲು ಆದೇಶಿಸಬೇಕು ಎಂದು ಆಗ್ರಹಿಸಿದರು.
ತರಬೇತಿ ಪಡೆದ ಎಲ್ಲ ಸ್ವಚ್ಛವಾಹಿನಿ ನೌಕರರಿಗೆ ಕೆಲಸ ನೀಡಬೇಕು. ಒಡಂಬಡಿಕೆ ಪತ್ರ ಹಾಗೂ ಪ್ರತಿವರ್ಷ ನವೀಕರಣದ ಪದ್ಧತಿ ರದ್ದುಪಡಿಸಿ, 15ನೇ ಹಣಕಾಸು ಯೋಜನೆಯಡಿ ವೇತನ ಪಾವತಿಸಬೇಕು. ಪ್ರತಿ ಪಂಚಾಯಿತಿಗೆ ಒಬ್ಬ ಚಾಲಕ ಎಂದು ಪರಿಗಣಿಸಿ 15 ಸಾವಿರ ರೂ. ವೇತನ ನಿಗದಿಪಡಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಮನ್ಸಲಾಪುರ, ಪ್ರಧಾನ ಕಾರ್ಯದರ್ಶಿ ಆಂಜನೇಯ ನಾಯಕ, ಪಾಂಡುರಂಗ ನಾಯಕ, ಮುಖಂಡರಾದ ಡಿ.ಎಸ್. ಶರಣಬಸವ, ಗಿರಿಯಪ್ಪ ಪೂಜಾರಿ, ಶರ್ಫುದ್ದಿನ್ ಪೋತ್ನಾಳ, ಎಚ್. ಪದ್ಮಾ, ಶಿವಶರಣ ಹಿರೇಬೂದುರು, ಅಂಬಣ್ಣ ನಾಯಕ, ಶ್ರೀರಾಮುಲು, ಶರಣಬಸವ ಹರವಿ, ಯಂಕಪ್ಪ ಸೇರಿದಂತೆ ನೂರಾರು ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.