×
Ad

ರಾಯಚೂರು | ಪೌರಕಾರ್ಮಿಕರನ್ನು ಕಾಯಂಗೊಳಿಸುವಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ

Update: 2026-06-08 17:49 IST

ರಾಯಚೂರು, ಜೂ.7: ರಾಯಚೂರು ಮಹಾನಗರ ಪಾಲಿಕೆಯಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರಿಗೆ ಸೇವಾ ಭದ್ರತೆ, ಖಾಯಂಗೊಳಿಸಬೇಕು ಹಾಗೂ ವಸತಿ ಸೌಲಭ್ಯಗಳನ್ನು ಕಲ್ಪಿಸುವಂತೆ ಆಗ್ರಹಿಸಿ ಸಮಾಜ ಸೇವಕ ಸಣ್ಣ ಬಾಬು ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲ‌ ಸೀತಾರಾಮನ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ರಾಯಚೂರು ನಗರಸಭೆ ಮಹಾನಗರ ಪಾಲಿಕೆಯಾಗಿದ್ದರೂ ಪೌರಕಾರ್ಮಿಕರ ಕೊರತೆ ತೀವ್ರವಾಗಿದ್ದು, ಪ್ರಸ್ತುತ ಸುಮಾರು 370 ಕಾರ್ಮಿಕರು ಮಾತ್ರ ಇದ್ದಾರೆ. ಇವರಲ್ಲಿ ಹಲವರು 15 ರಿಂದ 20 ವರ್ಷಗಳಿಗೂ ಅಧಿಕ ಕಾಲ ಸೇವೆ ಸಲ್ಲಿಸಿದ್ದರೂ ಇನ್ನೂ ಖಾಯಂ ನೇಮಕಾತಿ ಸೌಲಭ್ಯದಿಂದ ವಂಚಿತರಾಗಿದ್ದಾರೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ನಗರದ ಸ್ವಚ್ಛತೆ, ನೀರು ಸರಬರಾಜು, ಒಳಚರಂಡಿ ನಿರ್ವಹಣೆ ಸೇರಿದಂತೆ ಸಾರ್ವಜನಿಕ ಆರೋಗ್ಯಕ್ಕೆ ಸಂಬಂಧಿಸಿದ ಪ್ರಮುಖ ಕಾರ್ಯಗಳನ್ನು ಪೌರಕಾರ್ಮಿಕರು ನಿಷ್ಠೆಯಿಂದ ನಿರ್ವಹಿಸುತ್ತಿದ್ದಾರೆ. ಒಂದು ಅಥವಾ ಎರಡು ದಿನಗಳ ಕಾಲ ಅವರ ಸೇವೆ ಸ್ಥಗಿತಗೊಂಡರೂ ನಗರ ಜೀವನ ಅಸ್ತವ್ಯಸ್ತವಾಗುವ ಸಾಧ್ಯತೆ ಇದ್ದರೂ, ಅವರ ಸೇವೆಗೆ ತಕ್ಕ ಮಾನ್ಯತೆ ದೊರೆಯುತ್ತಿಲ್ಲ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಕೆಲಸ ನಿರ್ವಹಣೆಗೆ ಅಗತ್ಯವಾದ ಸುರಕ್ಷತಾ ಉಪಕರಣಗಳು, ರಕ್ಷಣಾ ಸಾಮಗ್ರಿಗಳು ಹಾಗೂ ಮೂಲ ಸೌಲಭ್ಯಗಳ ಕೊರತೆ ನಡುವೆಯೂ ಪೌರಕಾರ್ಮಿಕರು ತಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತಿದ್ದಾರೆ. ಆದರೆ ಅವರಿಗೆ ಸೇವಾ ಭದ್ರತೆ, ವಸತಿ ಸೌಲಭ್ಯ ಹಾಗೂ ಸಾಮಾಜಿಕ ಭದ್ರತೆ ಒದಗಿಸುವಲ್ಲಿ ಸರಕಾರ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಸಣ್ಣ ಬಾಬು ಆರೋಪಿಸಿದ್ದಾರೆ. ಪೌರಕಾರ್ಮಿಕರ ಸೇವೆಯನ್ನು ಗೌರವಿಸಿ ಅವರ ಬದುಕಿಗೆ ಭದ್ರತೆ ಕಲ್ಪಿಸುವ ನಿಟ್ಟಿನಲ್ಲಿ ಸರಕಾರ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News