Raichur | ಆರು ತಿಂಗಳ ವೇತನ ಬಾಕಿ; ಕಾರ್ಮಿಕರಿಂದ ದಿಢೀರ್ ಪ್ರತಿಭಟನೆ
ಗಿಲ್ಲೆಸಗೂರು ನೀರಾವರಿ ಉಪ ವಿಭಾಗ ಕಚೇರಿ ಎದುರು TUCI ನೇತೃತ್ವದಲ್ಲಿ ಹೋರಾಟ
ರಾಯಚೂರು: ಕಳೆದ ಆರು ತಿಂಗಳಿಂದ ಬಾಕಿ ಉಳಿದಿರುವ ವೇತನವನ್ನು ತಕ್ಷಣ ಪಾವತಿಸುವಂತೆ ಆಗ್ರಹಿಸಿ ತುಂಗಭದ್ರ ನೀರಾವರಿ ವಲಯ ಹಂಗಾಮಿ ಕಾರ್ಮಿಕ ಸಂಘ (TUCI) ನೇತೃತ್ವದಲ್ಲಿ ಗಿಲ್ಲೆಸಗೂರು ನೀರಾವರಿ ಉಪ ವಿಭಾಗದ ಕಚೇರಿ ಎದುರು ಸೋಮವಾರ ಕಾರ್ಮಿಕರು ದಿಢೀರ್ ಪ್ರತಿಭಟನೆ ನಡೆಸಿದರು.
ಫೆಬ್ರವರಿಯಿಂದ ಜುಲೈ 2026ರವರೆಗೆ ನಿರಂತರವಾಗಿ ಕೆಲಸ ನಿರ್ವಹಿಸಿದ್ದರೂ ವೇತನ ಪಾವತಿಯಾಗಿಲ್ಲ ಎಂದು ಆರೋಪಿಸಿದ ಕಾರ್ಮಿಕರು, ಇದರಿಂದ ಕುಟುಂಬಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ದುಡಿಯುವ ಕಾರ್ಮಿಕರಿಗೆ ಸಮಯಕ್ಕೆ ಸರಿಯಾಗಿ ವೇತನ ಪಾವತಿಸುವುದು ಆಡಳಿತ ಮತ್ತು ಸಂಬಂಧಿತ ಅಧಿಕಾರಿಗಳ ಜವಾಬ್ದಾರಿಯಾಗಿದ್ದು, ಆರು ತಿಂಗಳ ಬಾಕಿ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
TUCI ರಾಯಚೂರು ಜಿಲ್ಲಾ ಅಧ್ಯಕ್ಷ ಹಾಗೂ ತುಂಗಭದ್ರ ಕಾರ್ಮಿಕ ಸಂಘದ ಪ್ರಧಾನ ಕಾರ್ಯದರ್ಶಿ ಜಿ. ಅಡವಿರಾವ್ ಮಾತನಾಡಿ, ಕಾರ್ಮಿಕರ ಶ್ರಮಕ್ಕೆ ತಕ್ಕ ಪ್ರತಿಫಲವನ್ನು ತಿಂಗಳುಗಟ್ಟಲೆ ತಡೆಹಿಡಿಯುವುದು ಕಾರ್ಮಿಕ ವಿರೋಧಿ ಕ್ರಮವಾಗಿದ್ದು, ನ್ಯಾಯಯುತ ಬೇಡಿಕೆಯನ್ನು ತಕ್ಷಣ ಈಡೇರಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷ ಸಿದ್ದಪ್ಪಗೌಡ, ಖಜಾಂಚಿ ಹನುಮೇಶ ಸೇರಿದಂತೆ ಸಂಘದ ಪದಾಧಿಕಾರಿಗಳು ಮತ್ತು ಹೆಚ್ಚಿನ ಸಂಖ್ಯೆಯ ಕಾರ್ಮಿಕರು ಭಾಗವಹಿಸಿದ್ದರು. ಬೇಡಿಕೆ ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಸಂಘದ ಮುಖಂಡರು ಎಚ್ಚರಿಕೆ ನೀಡಿದರು.