Raichur | ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಎಸ್‌ಎಫ್‌ಐ-ಡಿವೈಎಫ್ ನೇತೃತ್ವದಲ್ಲಿ ತರಗತಿ ಬಹಿಷ್ಕಾರ; ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

Update: 2026-07-24 17:03 IST

ರಾಯಚೂರು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಲಾಠಿಚಾರ್ಜ್ ಖಂಡಿಸಿ ಎಸ್‌ಎಫ್‌ಐ ಹಾಗೂ ಡಿವೈಎಫ್ ಸಂಘಟನೆಗಳ ನೇತೃತ್ವದಲ್ಲಿ ನಗರದ ವಿವಿಧ ಪದವಿ ಹಾಗೂ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು ಶುಕ್ರವಾರ ತರಗತಿ ಬಹಿಷ್ಕರಿಸಿ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ಘಟನೆಗೆ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಅಲ್ಲದೆ, ದೇಶದ ವಿದ್ಯಾರ್ಥಿ-ಯುವಜನರ ಕ್ಷಮೆಯನ್ನು ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕವಾಗಿ ಕೇಳಬೇಕು ಹಾಗೂ ನೀಟ್ ಪ್ರಶ್ನೆಪತ್ರಿಕೆ ಸೋರಿಕೆಗೆ ಸಂಬಂಧಿಸಿದ ಘಟನೆಗಳಲ್ಲಿ ಮೃತಪಟ್ಟ ವಿದ್ಯಾರ್ಥಿಗಳ ಕುಟುಂಬಗಳಿಗೆ ತಲಾ 1 ಕೋಟಿ ರೂ. ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ)ಯನ್ನು ರದ್ದುಗೊಳಿಸಬೇಕು, ನೀಟ್ ಪರೀಕ್ಷಾ ವ್ಯವಸ್ಥೆಯನ್ನು ಸ್ಥಗಿತಗೊಳಿಸಬೇಕು ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಲ್ಲಿ ಭಾಗಿಯಾಗಿರುವವರಿಗೆ ಕಠಿಣ ಶಿಕ್ಷೆ ವಿಧಿಸಿ, ಶಿಕ್ಷೆಯ ಪ್ರಮಾಣವನ್ನು ಜೀವಾವಧಿ ಶಿಕ್ಷೆಯವರೆಗೆ ಹೆಚ್ಚಿಸುವಂತೆ ಕಾನೂನು ತಿದ್ದುಪಡಿ ಮಾಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ವಿದ್ಯಾರ್ಥಿ ಹಾಗೂ ಯುವಜನ ಸಂಘಟನೆಗಳ ಮುಖಂಡರಾದ ರಮೇಶ್ ಯಾಪಲದಿನ್ನಿ, ವೀರೇಶ್ ಯಾಪಲದಿನ್ನಿ, ರಫಿ, ವಿದ್ಯಾರ್ಥಿ ಪಾಲಕರಾದ ಡಿ.ಎಸ್. ಶರಣಬಸವ, ಕೆ.ಜಿ. ವಿರೇಶ್, ಕರಿಯಪ್ಪ ಅಚ್ಚೋಳಿ ಹಾಗೂ ವಿದ್ಯಾರ್ಥಿಗಳಾದ ರಾಘವೇಂದ್ರ, ರಾಜು, ಮೇಶಕ್ ಗುರುರಾಜ್ ಸೇರಿದಂತೆ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News