ರಾಯಚೂರು: ವಿಷ ಸೇವಿಸಿ ಯುವಕ ಆತ್ಮಹತ್ಯೆ
Update: 2025-01-22 23:09 IST
ಶರಣಬಸವ
ರಾಯಚೂರು: ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದಲ್ಲಿ ನಡೆದಿದೆ. ಮೈಕ್ರೋ ಫೈನಾನ್ಸ್ ಕಂಪನಿಯ ಕಿರುಕುಳಕ್ಕೆ ಬೇಸತ್ತು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.
ಮೃತಪಟ್ಟ ಯುವಕನನ್ನು ಶರಣಬಸವ (30) ಎಂದು ಗುರುತಿಸಲಾಗಿದೆ.
ಶರಣಬಸವ ಮೈಕ್ರೋ ಫೈನಾನ್ಸ್ ಕಂಪೆನಿಯಲ್ಲಿ ಸಾಲ ಪಡೆದು ಸಾಲದ ಕಂತುಗಳನ್ನು ಪಾವತಿಸುತ್ತಿದ್ದರು. ಕೆಲ ತಿಂಗಳಿಂದ ಅವರು ಸಾಲ ಮರು ಪಾವತಿ ಮಾಡಿಲ್ಲ ಎಂದು ಫೈನಾನ್ಸ್ ಸಿಬ್ಬಂದಿಗಳು ಮಾನಸಿಕ ಕಿರುಕುಳ ನೀಡಿದ್ದರು. ಇದರಿಂದ ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಆದರೆ ಮೃತನ ಕೆಲ ಸಂಬಂಧಿಕರು ಆತ ಜೀವನದಿಂದ ಜಿಗುಪ್ಸೆಗೊಂಡು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಿದ್ದಾರೆ.
ಈ ಕುರಿತು ಕುಟುಂಬಸ್ಥರು ಇದುವರೆಗೆ ಯಾವುದೇ ದೂರು ದಾಖಲಿಸಿಲ್ಲ ಎಂದು ಗೊತ್ತಾಗಿದೆ.