ತಪ್ಪಿದ ಸಚಿವ ಸ್ಥಾನ: ನಾಳೆಯೇ ಬೇಳೂರು ಗೋಪಾಲಕೃಷ್ಣ ರಾಜೀನಾಮೆ?
ಶಿವಮೊಗ್ಗ : ಸಚಿವ ಸಂಪುಟದ ಪಟ್ಟಿ ಬಿಡುಗಡೆಯಾಗಿ ಪ್ರಮಾಣವಚನಕ್ಕೆ ಸಿದ್ಧತೆಯಾಗುತ್ತಿದ್ದಂತೆ ಸಂಪುಟ ಸ್ಥಾನ ವಂಚಿತರ ಆಕ್ರೋಶ ಭುಗಿಲೆದ್ದಿದೆ. ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ನಾಯಕ ಬೇಳೂರು ಗೋಪಾಲಕೃಷ್ಣ ಅಸಮಾಧಾನ ಹೊರಹಾಕಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಆಗಸ್ಟ್ 4 ಬೆಳಗ್ಗೆ 10 ಗಂಟೆಗೆ ಶಾಸಕ ಸ್ಥಾನ ಹಾಗೂ ನಿಗಮ ಮಂಡಳಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ನನಗೆ ಸಾಕಷ್ಟು ನೋವಾಗಿದೆ. ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಹಾಗೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಮತ್ತು ಪ್ರಭಾವಿ ನಾಯಕರಿಗೆ ಮಾತ್ರ ಸೂಕ್ತ ಸ್ಥಾನಮಾನ ನೀಡಲಾಗುತ್ತಿದೆ ಎಂದು ಆರೋಪಿಸಿದರು.
ಮೂರು ವರ್ಷ ಮಂತ್ರಿಯಾದವರಿಗೇ ಮತ್ತೆ ಅವಕಾಶ ಕೊಟ್ಟಿದ್ದಾರೆ. ಮಾಜಿ ಮುಖ್ಯಮಂತ್ರಿ ಮಕ್ಕಳು ಮತ್ತು ಮಂತ್ರಿಗಳ ಮಕ್ಕಳೇ ಸಚಿವರಾಗಬೇಕಾ? ಹೊಸಬರಿಗೆ ಅವಕಾಶ ನೀಡುತ್ತೇವೆ ಅನ್ನುತ್ತಾರೆ, ಇದೇನಾ ಅವರು ಕೊಟ್ಟಿರುವ ಅವಕಾಶ? ನನ್ನ ಜೊತೆ ಸೇರಿದಂತೆ ಹಲವು ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಿದ್ದಾರೆ.
ನಮ್ಮ ಕ್ಷೇತ್ರದ ಜನರು ಕಣ್ಣೀರು ಹಾಕುತ್ತಿದ್ದಾರೆ. ನನಗೆ ಯಾಕೆ ಸಚಿವ ಸ್ಥಾನ ಕೊಡಲಿಲ್ಲ ಎಂದು ಯಾರಾದರೂ ಹೋಗಿ ಅವರಿಗೆ ಉತ್ತರ ಕೊಡಲಿ. ನಾನು ಏನು ಹೇಳಲಿ.ಸಚಿವ ಸ್ಥಾನಕ್ಕಾಗಿ ಮುಖ್ಯಮಂತ್ರಿ ಅಥವಾ ಇತರ ನಾಯಕರೊಂದಿಗೆ ಮತ್ತೊಮ್ಮೆ ಮಾತುಕತೆ ನಡೆಸುವ ಪ್ರಶ್ನೆಯೇ ಇಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.