‘ಕ್ರಾಫ್ಟ್ಸ್ ಆಫ್ ಮಲ್ನಾಡ್’ ವೆಬ್ಸೈಟ್ಗೆ ಚಾಲನೆ
ಕಲೆಗೆ ಉತ್ತೇಜನ ನೀಡಿ ಬೆಳೆಸಬೇಕು: ಸಚಿವ ಎಸ್. ಮಧು ಬಂಗಾರಪ್ಪ
ಶಿವಮೊಗ್ಗ (ಜ.25): ಸ್ವಸಹಾಯ ಗುಂಪುಗಳ ಮಹಿಳೆಯರು ಹಾಗೂ ಕುಶಲಕರ್ಮಿಗಳು ತಯಾರಿಸಿದ ಉತ್ಪನ್ನಗಳನ್ನು ಖರೀದಿಸುವ ಮೂಲಕ ಕಲೆಗೆ ಉತ್ತೇಜನ ನೀಡಿ ಬೆಳೆಸಬೇಕು. ನಮ್ಮ ನಾಡಿನ ಕಲೆ–ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ವರ್ಗಾಯಿಸುವ ಹೊಣೆ ಎಲ್ಲರ ಮೇಲೂ ಇದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದರು.
ಗಣರಾಜ್ಯೋತ್ಸವದ ಪ್ರಯುಕ್ತ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಹಾಗೂ ಜಿಲ್ಲಾ ಉದ್ಯಾನ ಕಲಾ ಸಂಘ, ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಅಲ್ಲಮ ಪ್ರಭು ಮೈದಾನ (ಫ್ರೀಡಂ ಪಾರ್ಕ್) ನಲ್ಲಿ ಜ.24ರಿಂದ 27ರವರೆಗೆ ಆಯೋಜಿಸಿರುವ ಮಲೆನಾಡು ಕರಕುಶಲ ಉತ್ಸವ, ಸಿರಿಧಾನ್ಯ ಮೇಳ ಮತ್ತು ಪುಷ್ಪಸಿರಿ–63ನೇ ಫಲ–ಪುಷ್ಪ ಪ್ರದರ್ಶನವನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು.
ನಮ್ಮ ನಾಡಿನ ಕಲೆ ಹಾಗೂ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಅನೇಕ ಉತ್ಪನ್ನಗಳು ಮತ್ತು ಕಲಾತ್ಮಕ ವಸ್ತುಗಳನ್ನು ಈ ಪ್ರದರ್ಶನದಲ್ಲಿ ಅಚ್ಚುಕಟ್ಟಾಗಿ ಪ್ರದರ್ಶಿಸಲಾಗಿದೆ. ಇಂತಹ ಹಳೆಯ ಕಲೆಗಳು ಉಳಿಯಬೇಕಾದರೆ ಅವುಗಳನ್ನು ಮುಂದಿನ ಪೀಳಿಗೆಗೆ ತಲುಪಿಸಬೇಕು. ಈ ಹಿನ್ನೆಲೆಯಲ್ಲಿ ಶಾಲಾ ಹಂತದಲ್ಲೇ ಆಯಾ ಭಾಗದ ಕಲೆಯನ್ನು ಅಲ್ಲಿನ ಶಾಲೆಗಳಲ್ಲಿ ಕಲಿಸುವ ಚಿಂತನೆ ಮಾಡಲಾಗುತ್ತಿದೆ ಎಂದರು.
ಪ್ರದರ್ಶನದಲ್ಲಿ ಜಿಲ್ಲೆಯ ಹಾಗೂ ರಾಜ್ಯದ ವಿವಿಧ ಕಲಾತ್ಮಕ ಉತ್ಪನ್ನಗಳು, ಸಿರಿಧಾನ್ಯಗಳು, ಖಾದ್ಯಗಳು, ಸ್ವಸಹಾಯ ಗುಂಪಿನ ಮಹಿಳೆಯರು ತಯಾರಿಸಿರುವ ಉತ್ಪನ್ನಗಳು, ವಿವಿಧ ಜಿಲ್ಲೆಗಳು ಹಾಗೂ ರಾಜ್ಯಗಳಿಂದ ಬಂದಿರುವ ಹ್ಯಾಂಡ್ಲೂಂ ಸೀರೆಗಳು, ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳು, ವಿವಿಧ ಜಾತಿಯ ಹಣ್ಣು–ತರಕಾರಿಗಳನ್ನು ಸುಸಜ್ಜಿತವಾಗಿ ಪ್ರದರ್ಶಿಸಲಾಗಿದೆ ಎಂದು ವಿವರಿಸಿದರು.
‘ಕ್ರಾಫ್ಟ್ಸ್ ಆಫ್ ಮಲ್ನಾಡ್’ ಎಂಬ ಹೆಸರಿನಡಿ ಸ್ವಸಹಾಯ ಸಂಘದ ಮಹಿಳೆಯರು ತಯಾರಿಸಿದ ಉತ್ಪನ್ನಗಳಿಗೆ ಬ್ರಾಂಡಿಂಗ್ ಮಾಡಿರುವುದು ಅತ್ಯುತ್ತಮ ಕಾರ್ಯ. ಜಿಲ್ಲೆ ಹಾಗೂ ರಾಜ್ಯದ ಕರಕುಶಲ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸುವ ಉದ್ದೇಶದಿಂದ ವೆಬ್ಸೈಟ್ ರಚಿಸಿರುವುದು ಶ್ಲಾಘನೀಯ. ಈ ವೆಬ್ಸೈಟ್ ಕುರಿತು ಇನ್ನಷ್ಟು ಪ್ರಚಾರ ಅಗತ್ಯವಿದ್ದು, ಸಣ್ಣ ವಿಡಿಯೋ ತುಣುಕುಗಳು ಹಾಗೂ ಕ್ಯೂಆರ್ ಕೋಡ್ಗಳನ್ನು ವಿವಿಧ ಕಾರ್ಯಕ್ರಮಗಳಲ್ಲಿ ಪ್ರದರ್ಶಿಸಬೇಕು ಎಂದು ಸಲಹೆ ನೀಡಿದರು. ರಾಜ್ಯಮಟ್ಟದಲ್ಲಿ ‘ಕ್ರಾಫ್ಟ್ಸ್ ಆಫ್ ಮಲ್ನಾಡ್’ ಕರಕುಶಲ ಪ್ರದರ್ಶನ ಆಯೋಜಿಸೋಣ ಎಂದರು.
ಜಿಲ್ಲೆಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಕುಶಲಕರ್ಮಿಗಳು ಹಾಗೂ ಮಹಿಳೆಯರು ತಯಾರಿಸಿದ ಉತ್ಪನ್ನಗಳನ್ನು ಖರೀದಿಸುವ ಮೂಲಕ ಅವರಿಗೆ ಆರ್ಥಿಕ ಬೆಂಬಲ ನೀಡಿ ಕಲೆಗೆ ಉತ್ತೇಜನ ನೀಡಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಚಿವರು ಸ್ವಸಹಾಯ ಸಂಘದ ಮಹಿಳೆಯರು ತಯಾರಿಸಿದ ಉತ್ಪನ್ನಗಳ ಬ್ರಾಂಡ್ ‘ಕ್ರಾಫ್ಟ್ಸ್ ಆಫ್ ಮಲ್ನಾಡ್’ ವೆಬ್ಸೈಟ್ಗೆ ಅಧಿಕೃತವಾಗಿ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ರಾಜ್ಯ ಜವಳಿ ಮೂಲಸೌಲಭ್ಯ (ವಿದ್ಯುತ್ ಮಗ್ಗ) ಅಭಿವೃದ್ಧಿ ನಿಗಮದ ಅಧ್ಯಕ್ಷ ಚೇತನ್ ಕೆ., ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಚಂದ್ರಭೂಪಾಲ್, ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಅಧ್ಯಕ್ಷ ನಗರದ ಮಹಾದೇವಪ್ಪ, ಹಾಪ್ಕಾಮ್ಸ್ ಅಧ್ಯಕ್ಷ ವಿಜಯಕುಮಾರ್, ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸದಸ್ಯ ದೇವಿಕುಮಾರ್, ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪಂಚಾಯತ್ ಸಿಇಒ ಹೇಮಂತ್ ಎನ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ., ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಡಾ. ಎ.ಬಿ. ಸಂಜಯ್, ಜಿ.ಪಂ. ಯೋಜನಾ ನಿರ್ದೇಶಕಿ ನಂದಿನಿ, ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್, ಜಿಲ್ಲಾ ಉದ್ಯಾನ ಕಲಾ ಸಂಘದ ಉಪಾಧ್ಯಕ್ಷ ಸಿದ್ದಪ್ಪ ಹರಳೆಣ್ಣೆಯವರ್, ಖಜಾಂಚಿ ಜಿ.ಎಂ. ರಘು, ಪದಾಧಿಕಾರಿಗಳು, ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.