ಅರಣ್ಯ ಜಾಗ ಒತ್ತುವರಿ ಮಾಡಿದ್ದ ಆರೋಪಿಗೆ 1 ವರ್ಷ ಜೈಲು ಶಿಕ್ಷೆ
ಸಾಂದರ್ಭಿಕ ಚಿತ್ರ
ಶಿವಮೊಗ್ಗ: ಶಿವಮೊಗ್ಗ ತಾಲ್ಲೂಕು ಹೊಳಲೂರು ಹೋಬಳಿಯ ಕುಂಚೇನಹಳ್ಳಿ ವ್ಯಾಪ್ತಿಯ ರಾಜ್ಯ ಅರಣ್ಯ ಪ್ರದೇಶದಲ್ಲಿನ 7 ಎಕರೆ ಒತ್ತುವರಿ ಆರೋಪ ಸಾಬೀತಾದ ಕಾರಣ ಇದೇ ಗ್ರಾಮದ ಚಿನ್ನಸ್ವಾಮಿ ಅವರಿಗೆ, ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯ ಒಂದು ವರ್ಷದ ಸಾಧಾರಣ ಜೈಲು ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಿದೆ.
ಒತ್ತುವರಿ ಆರೋಪಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದ ಶಂಕರ ವಲಯ ಅರಣ್ಯಾಧಿಕಾರಿ ನೀಡಿದ್ದ ದೂರಿನ ಅನುಸಾರ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯದ ನ್ಯಾಯಿಕ ಸದಸ್ಯ ಪಾಟೀಲ ನಾಗಲಿಂಗನಗೌಡ ಮತ್ತು ಕಂದಾಯ ಸದಸ್ಯ ಕೆ.ಎಚ್.ಅಶ್ವತ್ಥ ನಾರಾಯಣಗೌಡ ಅವರಿದ್ದ ಪೀಠವು ಈ ಕುರಿತಂತೆ ಆದೇಶಿಸಿದೆ.
ದಂಡ ಪಾವತಿಸಲು ತಪ್ಪಿದರೆ ಮೂರು ತಿಂಗಳ ಸಾಧಾರಣ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ ಎಂದೂ ತಿಳಿಸಿದೆ.
ಆರೋಪಿಗಳು ಒತ್ತುವರಿ ಮಾಡಿರುವ ಅರಣ್ಯ ಜಮೀನನ್ನು ಕೂಡಲೇ ತೆರವುಗೊಳಿಸಬೇಕು. ಈ ಸಂಬಂಧ ವಲಯ ಅರಣ್ಯಾಧಿಕಾರಿ 60 ದಿನಗಳ ಒಳಗಾಗಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕು ಎಂದು ಪೀಠವು ನಿರ್ದೇಶಿಸಿದೆ.