Shivamogga | ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

Update: 2026-08-10 22:54 IST

ಶಿವಮೊಗ್ಗ: ಶಾಲೆಯಲ್ಲಿ ಸಹಪಾಠಿಗಳ ಚೆಸ್ ಆಟವನ್ನು ವೀಕ್ಷಿಸುತ್ತಾ ಕುಳಿತಿದ್ದ ವಿದ್ಯಾರ್ಥಿಯೊಬ್ಬ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಶಿವಮೊಗ್ಗ ತಾಲೂಕಿನ ಆಯನೂರು ಸಮೀಪದ ತಮ್ಮಡಿಹಳ್ಳಿಯಲ್ಲಿ ವರದಿಯಾಗಿದೆ.

ತಮ್ಮಡಿಹಳ್ಳಿಯ ಸರಕಾರಿ ಹೈಸ್ಕೂಲ್‌ನಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದ ವಿನಯ್ ಜೆ.ಕೆ. (15) ಮೃತಪಟ್ಟ ವಿದ್ಯಾರ್ಥಿ.

ವಿದ್ಯಾರ್ಥಿ ವಿನಯ್ ಶಾಲೆಯಲ್ಲಿ ಇತರ ವಿದ್ಯಾರ್ಥಿಗಳು ಚೆಸ್ ಆಡುತ್ತಿದ್ದನ್ನು ಆಸಕ್ತಿಯಿಂದ ನೋಡುತ್ತಾ ಕುಳಿತಿದ್ದನು. ಈ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾನೆ. ಇದನ್ನು ಕಂಡು ತಕ್ಷಣವೇ ಎಚ್ಚೆತ್ತ ಶಿಕ್ಷಕರು ಹಾಗೂ ಪೋಷಕರು ಆತನನ್ನು ಆಯನೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ.

ಆದರೆ, ವಿದ್ಯಾರ್ಥಿಯ ಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಯಿತು. ಆದರೆ ಆಸ್ಪತ್ರೆಗೆ ತಲುಪುವಷ್ಟರಲ್ಲೇ ವಿದ್ಯಾರ್ಥಿ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.

ಮೃತ ವಿನಯ್ ಮೂಲತಃ ಶಿಕಾರಿಪುರದವನಾಗಿದ್ದು, ಆಯನೂರು ಸಮೀಪದ ತಮ್ಮಡಿಹಳ್ಳಿಯಲ್ಲಿರುವ ಅಜ್ಜನ ಮನೆಯಲ್ಲಿ ಇದ್ದುಕೊಂಡು ವಿದ್ಯಾಭ್ಯಾಸ ಮಾಡುತ್ತಿದ್ದನು.

ಮಗನ ಹಠಾತ್ ಸಾವಿನ ಸುದ್ದಿ ಕೇಳಿ ಮೆಗ್ಗಾನ್ ಆಸ್ಪತ್ರೆಗೆ ಧಾವಿಸಿದ ತಂದೆ-ತಾಯಿ ಹಾಗೂ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಸಾಮಾನ್ಯವಾಗಿದ್ದ ವಿದ್ಯಾರ್ಥಿ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿರುವುದಕ್ಕೆ ಆತನ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ.

ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News