ಶಿವಮೊಗ್ಗ: ನೀಟ್ ಅಕ್ರಮ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ; ಬಿಜೆಪಿ ಕಚೇರಿಗೆ ಮುತ್ತಿಗೆಗೆ ಯತ್ನ
ಶಿವಮೊಗ್ಗ: ನೀಟ್ ಪರೀಕ್ಷೆ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ಗುರುವಾರ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ಬಳಿಕ ಪಾದಯಾತ್ರೆ ಮೂಲಕ ಶಿವಮೊಗ್ಗದ ಜಿಲ್ಲಾ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆಯಿತು.
ನಗರದ ಮಹಾವೀರ ವೃತ್ತದಲ್ಲಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಮಹಾವೀರ ವೃತ್ತದಿಂದ ಪಾದಯಾತ್ರೆ ಮೂಲಕ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಶಿವಮೊಗ್ಗದ ಜಿಲ್ಲಾ ಬಿಜೆಪಿ ಕಚೇರಿ ಕಡೆ ತೆರಳಿದರು. ಪೊಲೀಸರ ತಡೆ ನಡುವೆಯೂ ಬ್ಯಾರಿಕೇಡ್ ತಳ್ಳಿ ನುಗ್ಗಿದ ಪ್ರತಿಭಟನಾಕಾರರು, ಬಿಜೆಪಿ ಕಚೇರಿ ಆವರಣ ಪ್ರವೇಶಿಸಿದರು. ಈ ವೇಳೆ ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಯತ್ನಿಸಿದರು.
ಈ ವೇಳೆ ಪರಸ್ಪರ ತಳ್ಳಾಟ-ನೂಕಾಟ ಉಂಟಾಯಿತು. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು.
ಬಿಜೆಪಿ ಕಚೇರಿ ಬಳಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಜಮಾಯಿಸಿದ್ದರು. ಈ ವೇಳೆ ಕಚೇರಿಯ ಶಟರ್ ಎಳೆಯುವ ವಿಚಾರವಾಗಿ ಪೊಲೀಸರೊಂದಿಗೆ ಬಿಜೆಪಿ ಕಾರ್ಯಕರ್ತರು ವಾಗ್ವಾದ ನಡೆಸಿದರು.