ಶಿವಮೊಗ್ಗದಲ್ಲಿ ಅಣು ವಿದ್ಯುತ್ ಸ್ಥಾವರ ವಿರೋಧಿಸಿ ಜಿಲ್ಲಾ ಮಟ್ಟದ ಹೋರಾಟಕ್ಕೆ ತೀರ್ಮಾನ
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಕೋಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೇಸೂರು ಗ್ರಾಮದಲ್ಲಿ ಕೇಂದ್ರ ಸರ್ಕಾರ ಅಣು ವಿದ್ಯುತ್ ಸ್ಥಾವರ ನಿರ್ಮಾಣಕ್ಕೆ ಮುಂದಾಗಿರುವುದನ್ನು ಖಂಡಿಸಿ ಜಿಲ್ಲಾ ಮಟ್ಟದಲ್ಲಿ ಬೃಹತ್ ಹೋರಾಟ ನಡೆಸಲು ಜನ ಹೋರಾಟ ಹಾಗೂ ಮಲೆನಾಡು ರೈತ ಹೋರಾಟ ಸಮಿತಿ ನಿರ್ಧರಿಸಿದೆ.
ಬೇಸೂರು ಗ್ರಾಮದಲ್ಲಿ ನಡೆದ ಸಭೆಯಲ್ಲಿ ಕಲ್ಮನೆ, ಆವಿನಹಳ್ಳಿ, ಕೋಳೂರು, ಹೆಗ್ಗೋಡು, ತುಮರಿ, ಬ್ಯಾಕೋಡು, ಎಸ್.ಎಸ್. ಬೋಗ್, ಚನ್ನಗೊಂಡನಹಳ್ಳಿ ಹಾಗೂ ಅರಳಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನರು ಭಾಗವಹಿಸಿ ಹೋರಾಟಕ್ಕೆ ಸಂಪೂರ್ಣ ಬೆಂಬಲ ಸೂಚಿಸಿದರು.
ಅಣು ವಿದ್ಯುತ್ ಸ್ಥಾವರ ನಿರ್ಮಾಣಕ್ಕೆ ನಿರಾಕ್ಷೇಪಣಾ ಪತ್ರ ಕೋರಿ ಸ್ಥಳೀಯ ಗ್ರಾಮ ಪಂಚಾಯಿತಿಗೆ ಪತ್ರ ಬಂದ ಬೆನ್ನಲ್ಲೇ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲಿಂಗನಮಕ್ಕಿ, ಚಕ್ರಾ-ಸಾವೆಹಕ್ಲು ಹಾಗೂ ಮಾಣಿ ಅಣೆಕಟ್ಟುಗಳ ನಿರ್ಮಾಣದಿಂದ ನೂರಾರು ಹಳ್ಳಿಗಳು ಮುಳುಗಡೆಯಾಗಿದ್ದು, ಸಂತ್ರಸ್ತರಿಗೆ ಇಂದಿಗೂ ಸಮರ್ಪಕ ಪುನರ್ವಸತಿ ಸಿಗಲಿಲ್ಲ. ಇಂತಹ ಸಂದರ್ಭದಲ್ಲಿ ಶರಾವತಿ ಹಿನ್ನೀರು ಪ್ರದೇಶದಲ್ಲಿ ಅಣು ವಿದ್ಯುತ್ ಸ್ಥಾವರ ಸ್ಥಾಪನೆಗೆ ಮುಂದಾಗಿರುವುದು ಜನರಲ್ಲಿ ಆತಂಕ ಮೂಡಿಸಿದೆ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.
ಈವರೆಗೆ ಸಾಗರ ತಾಲೂಕಿಗೆ ಸೀಮಿತವಾಗಿದ್ದ ಹೋರಾಟವನ್ನು ಇದೀಗ ಜಿಲ್ಲಾ ಮಟ್ಟಕ್ಕೆ ವಿಸ್ತರಿಸಲು ತೀರ್ಮಾನಿಸಲಾಗಿದ್ದು, ಮೇ 27ರಂದು ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಮಲೆನಾಡು ರೈತ ಹೋರಾಟ ವೇದಿಕೆಯ ಸಂಚಾಲಕ ತೀ.ನ. ಶ್ರೀನಿವಾಸ್ ತಿಳಿಸಿದ್ದಾರೆ.
ಈ ಕುರಿತು ವಾರ್ತಾಭಾರತಿ ಪತ್ರಿಕೆಗೆ ಪ್ರತಿಕ್ರಿಯಿಸಿದ ಅವರು, “ಬೇಸೂರು ಗ್ರಾಮದಲ್ಲಿ ಈಗಾಗಲೇ ಸುಮಾರು 25 ಬಾರಿ ವಿಮಾನ ಹಾರಾಟ ನಡೆಸಲಾಗಿದೆ. ಕೇಂದ್ರ ಸರ್ಕಾರದ ಅಧೀನದ ಎನ್ಟಿಪಿಸಿ ಮತ್ತು ರಾಜ್ಯ ಸರ್ಕಾರದ ನಡುವೆ ಪತ್ರ ವ್ಯವಹಾರ ನಡೆದಿದೆ. ಹಿರಿಯ ಅಧಿಕಾರಿಗಳು ಹಲವು ಬಾರಿ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದ್ದಾರೆ. ಜಿಲ್ಲಾಡಳಿತದಿಂದ ರಾಜ್ಯ ಸರ್ಕಾರಕ್ಕೆ ಮಾಹಿತಿ ರವಾನೆಯಾಗಿದೆ. ಆದರೂ ಜಿಲ್ಲೆಯ ಸಂಸದರು, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸ್ಥಳೀಯ ಶಾಸಕರು ಮಾಹಿತಿ ಇಲ್ಲ ಎಂದು ಹೇಳುತ್ತಿರುವುದು ಖಂಡನೀಯ,” ಎಂದು ಆರೋಪಿಸಿದರು.
“ಅಣು ವಿದ್ಯುತ್ ಸ್ಥಾವರ ನಿರ್ಮಾಣಕ್ಕೆ ಶರಾವತಿ ಮುಳುಗಡೆ ರೈತರ ಜಾಗವನ್ನೇ ಗುರುತಿಸಲಾಗಿದೆ. ರಾಜ್ಯಕ್ಕೆ ಬೆಳಕು ನೀಡಿದ ರೈತರಿಗೆ ದಶಕಗಳಾದರೂ ಸಮರ್ಪಕ ಪುನರ್ವಸತಿ ಸಿಕ್ಕಿಲ್ಲ. ಈಗ ಮತ್ತೆ ಅದೇ ರೈತರ ಭೂಮಿಯ ಮೇಲೆ ಸರ್ಕಾರದ ಕಣ್ಣು ಬಿದ್ದಿದೆ,” ಎಂದು ಅವರು ಪ್ರಶ್ನಿಸಿದರು.
ಶಿವಮೊಗ್ಗದಲ್ಲಿ ನಡೆಯಲಿರುವ ಹೋರಾಟಕ್ಕೆ ಜಿಲ್ಲೆಯ ಜನರು ಹಾಗೂ ವಿವಿಧ ಜನಪರ ಸಂಘಟನೆಗಳು ಬೆಂಬಲ ನೀಡಬೇಕು ಎಂದು ಅವರು ಮನವಿ ಮಾಡಿದರು.