ಬುಮ್ರಾಗೆ ಗಾಯ; ಶ್ರೀಲಂಕಾ ಟೆಸ್ಟ್ ಸರಣಿಗೆ ಆಕಿಬ್ ನಬಿಗೆ ಭಾರತ ತಂಡದಲ್ಲಿ ಚೊಚ್ಚಲ ಅವಕಾಶ
Photo | IANS
ಹೊಸದಿಲ್ಲಿ: ಜಸ್ಪ್ರೀತ್ ಬುಮ್ರಾ ಗಾಯಗೊಂಡಿರುವ ಹಿನ್ನೆಲೆಯಲ್ಲಿ, ಶ್ರೀಲಂಕಾ ವಿರುದ್ಧ ಆಗಸ್ಟ್ 15ರಿಂದ ಆರಂಭವಾಗಲಿರುವ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಜಮ್ಮು ಮತ್ತು ಕಾಶ್ಮೀರದ ವೇಗದ ಬೌಲರ್ ಆಕಿಬ್ ನಬಿ ಅವರನ್ನು ಭಾರತ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಇದರೊಂದಿಗೆ 29 ವರ್ಷದ ಆಕಿಬ್ ಹಿರಿಯ ರಾಷ್ಟ್ರೀಯ ತಂಡಕ್ಕೆ ಮೊದಲ ಬಾರಿಗೆ ಆಯ್ಕೆಯಾಗಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ವೇಳೆ ಬುಮ್ರಾ ಅವರ ಎಡ ಮೊಣಕಾಲಿಗೆ ಗಾಯವಾಗಿತ್ತು. ಅವರು ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಳ್ಳದ ಕಾರಣ ಅವರನ್ನು ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗಿಡಲಾಗಿದೆ ಎಂದು ಬಿಸಿಸಿಐ ಸೋಮವಾರ ಪ್ರಕಟಣೆಯಲ್ಲಿ ತಿಳಿಸಿದೆ.
ಆಕಿಬ್ ದೇಶೀಯ ಕ್ರಿಕೆಟ್ ನಲ್ಲಿ ಸತತ ಉತ್ತಮ ಪ್ರದರ್ಶನ ನೀಡುವ ಮೂಲಕ ರಾಷ್ಟ್ರೀಯ ಆಯ್ಕೆದಾರರ ಗಮನ ಸೆಳೆದಿದ್ದರು. ಕಳೆದ ಎರಡು ರಣಜಿ ಟ್ರೋಫಿ ಋತುಗಳಲ್ಲಿ ಅವರು ಒಟ್ಟು 104 ವಿಕೆಟ್ಗಳನ್ನು ಕಬಳಿಸಿದ್ದಾರೆ. 2025–26ರ ಋತುವಿನಲ್ಲಿ 10 ಪಂದ್ಯಗಳಲ್ಲಿ ಏಳು ಬಾರಿ ಐದು ವಿಕೆಟ್ ಗೊಂಚಲು ಸಹಿತ 60 ವಿಕೆಟ್ ಪಡೆದು, ಜಮ್ಮು ಮತ್ತು ಕಾಶ್ಮೀರ ತಂಡ ಚೊಚ್ಚಲ ಬಾರಿಗೆ ರಣಜಿ ಟ್ರೋಫಿ ಪ್ರಶಸ್ತಿ ಗೆಲ್ಲುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು.
ಇತ್ತೀಚೆಗೆ ಶ್ರೀಲಂಕಾ ಪ್ರವಾಸ ಕೈಗೊಂಡಿದ್ದ ಭಾರತ 'ಎ' ತಂಡದ ಪರ ಗಾಲೆಯಲ್ಲಿ ನಡೆದ ಎರಡು ನಾಲ್ಕು ದಿನಗಳ ಪ್ರಥಮ ದರ್ಜೆ ಪಂದ್ಯಗಳಲ್ಲಿ ಆಕಿಬ್ ಆರು ವಿಕೆಟ್ ಗಳನ್ನು ಪಡೆದಿದ್ದರು. ಆ ಪ್ರದರ್ಶನದ ಫಲವಾಗಿ ಅವರಿಗೆ ರಾಷ್ಟ್ರೀಯ ತಂಡದಲ್ಲಿ ಅವಕಾಶ ದೊರೆತಿದೆ.
ಪರ್ವೇಝ್ ರಸೂಲ್ ಮತ್ತು ಉಮ್ರಾನ್ ಮಲಿಕ್ ಬಳಿಕ ಭಾರತ ಹಿರಿಯ ತಂಡಕ್ಕೆ ಆಯ್ಕೆಯಾದ ಜಮ್ಮು ಮತ್ತು ಕಾಶ್ಮೀರದ ಮೂರನೇ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಆಕಿಬ್ ಪಾತ್ರರಾಗಿದ್ದಾರೆ.
'ಆಕಿಬ್ ನಬಿ ಕಳೆದ ಎರಡು ರಣಜಿ ಟ್ರೋಫಿ ಋತುಗಳಲ್ಲಿ 104 ವಿಕೆಟ್ಗಳನ್ನು ಪಡೆದಿದ್ದಾರೆ. ಇದರಲ್ಲಿ 2025–26ರ ಋತುವಿನ 60 ವಿಕೆಟ್ಗಳೂ ಸೇರಿವೆ. ಜಮ್ಮು ಮತ್ತು ಕಾಶ್ಮೀರದ ಚೊಚ್ಚಲ ರಣಜಿ ಟ್ರೋಫಿ ಪ್ರಶಸ್ತಿ ಗೆಲುವಿನಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ. ಇತ್ತೀಚೆಗೆ ಭಾರತ 'ಎ' ತಂಡದ ಪರ ಶ್ರೀಲಂಕಾದಲ್ಲಿ ನಡೆದ ಎರಡು ಪ್ರಥಮ ದರ್ಜೆ ಪಂದ್ಯಗಳಲ್ಲಿ ಆರು ವಿಕೆಟ್ಗಳನ್ನು ಕಬಳಿಸಿದ್ದಾರೆ' ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ.
ಭಾರತ ಮತ್ತು ಶ್ರೀಲಂಕಾ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಆಗಸ್ಟ್ 15ರಿಂದ ಗಾಲೆಯಲ್ಲಿ ಆರಂಭವಾಗಲಿದೆ.
ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ನವೀಕರಿಸಿದ ಭಾರತ ತಂಡ: ಶುಭಮನ್ ಗಿಲ್ (ನಾಯಕ), ಕೆ.ಎಲ್. ರಾಹುಲ್ (ಉಪನಾಯಕ), ಯಶಸ್ವಿ ಜೈಸ್ವಾಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸಾಯಿ ಸುದರ್ಶನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಮಾನವ್ ಸುತಾರ್, ದೇವದತ್ ಪಡಿಕ್ಕಲ್, ಸರನ್ಶ್ ಜೈನ್ ಹಾಗೂ ಆಕಿಬ್ ನಬಿ.