×
Ad

ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಿಗೆ ನಗದು ಪುರಸ್ಕಾರದ ಮೊತ್ತ ಹೆಚ್ಚಳ : ಸಿಎಂ ಸಿದ್ದರಾಮಯ್ಯ

Update: 2025-08-28 23:05 IST

ಬೆಂಗಳೂರು : ಕ್ರೀಡಾಕೂಟಗಳ ಪದಕ ವಿಜೇತರಿಗೆ ನಗದು ಪುರಸ್ಕಾರವನ್ನು ಹೆಚ್ಚಿಸಿ, ಚಿನ್ನ ಪದಕ ವಿಜೇತರಿಗೆ 7 ಲಕ್ಷ ರೂ, ಬೆಳ್ಳಿ ಪದಕ ವಿಜೇತರಿಗೆ 5 ಲಕ್ಷ ರೂ. ಹಾಗೂ ಕಂಚಿನ ಪದಕ ವಿಜೇತರಿಗೆ 3 ಲಕ್ಷ ರೂ. ನೀಡಲು ಸರಕಾರ ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ಯುವನಿಕಾ ಸಭಾಂಗಣದಲ್ಲಿ 38ನೇ ರಾಷ್ಟ್ರೀಯ ಕ್ರೀಡಾಕೂಟದ ವಿವಿಧ ಕ್ರೀಡಾ ವಿಭಾಗಗಳಲ್ಲಿ ಭಾಗವಹಿಸಿ ಪದಕಗಳನ್ನು ಪಡೆದ ಕ್ರೀಡಾ ಪಟುಗಳಿಗೆ ನೇರ ನಗದು ಪುರಸ್ಕಾರ ಪ್ರದಾನ ಮಾಡಿ ಅವರು ಮಾತನಾಡಿದರು.

ಉತ್ತರಾಖಂಡದಲ್ಲಿ ನಡೆದ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಕರ್ನಾಟಕದ ಕ್ರೀಡಾಪಟುಗಳು ರಾಜ್ಯಕ್ಕೆ ಐದನೇ ಸ್ಥಾನವನ್ನು ದೊರಕಿಸಿಕೊಟ್ಟಿದ್ದು, ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಕ್ರೀಡಾಕೂಟದಲ್ಲಿ ರಾಜ್ಯದ ಕ್ರೀಡಾಪಟುಗಳು 34 ಚಿನ್ನ, 18 ಬೆಳ್ಳಿ ಹಾಗೂ 28 ಕಂಚಿನ ಪದಕಗಳನ್ನು ಗೆದ್ದಿರುವುದು ನಮಗೆಲ್ಲ ಹೆಮ್ಮೆಯ ವಿಷಯ ಎಂದು ಕ್ರೀಡಾಕೂಟದಲ್ಲಿ ಭಾಗವಹಿಸಿದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸಿದರು.

2015 ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಚಿನ್ನದ ಪದಕ ಗೆದ್ದ ವಿಜೇತರಿಗೆ 5 ಲಕ್ಷ , ಬೆಳ್ಳಿ ಪದಕ ಪಡೆದವರಿಗೆ 3 ಲಕ್ಷ ಹಾಗೂ ಕಂಚಿನ ಪದಕ ಗೆದ್ದವರಿಗೆ 2 ಲಕ್ಷ ರೂ. ನೀಡುವುದಾಗಿ ತಿಳಿಸಲಾಗಿತ್ತು. ನಮ್ಮ ಸರ್ಕಾರ ಈ ಘೋಷಣೆಯನ್ನು ಜಾರಿಗೆ ತಂದಿದೆ. ಕರ್ನಾಟಕ ಒಲಂಪಿಕ್ಸ್ ಸಂಸ್ಥೆಯವರು ಪದಕ ವಿಜೇತರಿಗೆ ನೀಡಲಾಗುವ ನಗದು ಪುರಸ್ಕಾರವನ್ನು ಹೆಚ್ಚಿಸಬೇಕೆಂದು ಕೋರಿದ್ದರು. ಅದರಂತೆ ಮನವಿಯನ್ನು ಪುರಸ್ಕರಿಸಿ, ಗೆದ್ದ ಪ್ರತಿಯೊಬ್ಬ ಪದಕ ವಿಜೇತರಿಗೂ ನಗದು ಪುರಸ್ಕಾರವನ್ನು ನೀಡಲು ತೀರ್ಮಾನಿಸಿರುವುದಾಗಿ ಸಿಎಂ ತಿಳಿಸಿದರು.

ಕ್ರೀಡಾಕ್ಷೇತ್ರಕ್ಕೆ ಸರ್ಕಾರದ ಬೆಂಬಲ :

ಕ್ರೀಡಾಪಟುಗಳು ಪದಕ ಗೆಲ್ಲಲು ಸಹಕರಿಸುವ ಮ್ಯಾನೇಜರ್ ಹಾಗೂ ತರಬೇತುದಾರರಿಗೂ ನಗದು ಪುರಸ್ಕಾರವನ್ನು ನೀಡಲಾಗುವುದು. ರಾಜ್ಯದಲ್ಲಿ ಕ್ರೀಡಾ ಕ್ಷೇತ್ರಕ್ಕೆ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡಲಿದೆ. ಕ್ರೀಡಾಪಟುಗಳ ಎಲ್ಲ ಬೇಡಿಕೆಗಳನ್ನು ಮುಂಚಿನಿಂದಲೂ ಈಡೇರಿಸುತ್ತಾ ಬಂದಿದ್ದೇನೆ. ಕ್ರೀಡೆಯೊಂದಿಗೆ ಶಿಕ್ಷಣವನ್ನೂ ಕೈಗೊಳ್ಳುವಂತೆ ಕ್ರೀಡಾಪಟುಗಳಿಗೆ ಮುಖ್ಯಮಂತ್ರಿಗಳು ಸಲಹೆ ನೀಡಿದರು. ಪದಕ ವಿಜೇತರಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ನೀಡಲು ಆದೇಶ ನೀಡಲಾಗಿದ್ದು, ಈಗಾಗಲೇ ಗ್ರೂಪ್ 1 ನ ಡಿವೈಎಸ್ ಪಿ ಹುದ್ದೆಗೆ ನೇಮಕಾತಿ ನೀಡಲಾಗಿದೆ. ಕ್ರೀಡಾಪಟು ಸುನಿಲ್ ಭಾಟಿಯವರು ಗ್ರೂಪ್ -1 ಸ್ಥಾನ ಸಿಕ್ಕಿದ್ದು ಪೋಲಿಸ್ ಅಬಕಾರಿ ಇಲಾಖೆಯಲ್ಲಿ ಡಿವೈಎಸ್ಪಿ ಯಾಗಿದ್ದಾರೆ. ಬಡ್ತಿಯಾಗಿ ಉನ್ನತ ಹುದ್ದೆಗೆ ಹೋಗುವ ಅವಕಾಶಗಳೂ ಇರುತ್ತವೆ ಎಂದರು.

ಒಲಂಪಿಕ್ಸ್ , ಏಷ್ಯನ್ ಗೇಮ್ಸ್, ಹಾಗೂ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಚಿನ್ನದ ಪದಕ ಗೆದ್ದವರಿಗೆ 5 ಕೋಟಿ ಬಹುಮಾನ :

ಬಜೆಟ್ ನಲ್ಲಿ ಘೋಷಿಸಿರುವಂತೆ ಒಲಂಪಿಕ್ಸ್ , ಏಷ್ಯನ್ ಗೇಮ್ಸ್, ಹಾಗೂ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಚಿನ್ನದ ಪದಕ ಗೆದ್ದವರಿಗೆ 5 ಕೋಟಿ, ಬೆಳ್ಳಿ ಗೆದ್ದವರಿಗೆ 3 ಹಾಗೂ ಕಂಚು ಗೆದ್ದವರಿಗೆ 2 ಕೋಟಿ ರೂ.ಗಳ ಬಹುಮಾನವನ್ನು ನೀಡಲಾಗುವುದು,  ಇದು ಆಮಿಷವಲ್ಲ, ಪ್ರೋತ್ಸಾಹ ಎಂದರು.

ಬಹುಮಾನ ಗೆದ್ದರೆ ಅದಕ್ಕಿಂತ ಸಂತೋಷ ಕೊಡುವ ವಿಚಾರ ಮತ್ತೊಂದಿಲ್ಲ. ಸೋಲು ಗೆಲುವು ಇದೆ ಇರುತ್ತದೆ, ಆದರೆ ಕ್ರೀಡೆಗಳಲ್ಲಿ ಭಾಗವಹಿಸುವುದು ಮುಖ್ಯ ಎಂದರು.

ವಿಧಾನ ಪರಿಷತ್ ಸದಸ್ಯರು ಹಾಗೂ ರಾಜ್ಯ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರಾದ ಗೋವಿಂದರಾಜು ಮತ್ತು ಶಾಸಕರಾದ ರಿಜ್ವಾನ್ ಅರ್ಷದ್ ಅವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News