ʼಶಕ್ತಿ ಯೋಜನೆʼಯಡಿ 500 ಕೋಟಿ ಮಹಿಳೆಯರ ಪ್ರಯಾಣ: ಟಿಕೆಟ್ ವಿತರಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ 500 ಕೋಟಿ ಮಹಿಳಾ ಪ್ರಯಾಣಿಕರ ಪ್ರಯಾಣ ಸಂಭ್ರಮದ ಅಂಗವಾಗಿ ಸಾಂಕೇತಿಕವಾಗಿ 500ನೇ ಕೋಟಿಯ ಟಿಕೆಟ್ಅನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿತರಿಸಿದರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಲಾಗಿತ್ತು. 2023ರ ಮೇ 20 ರಂದು ಸರಕಾರ ಅಸ್ತಿತ್ವಕ್ಕೆ ಬಂದ ತಕ್ಷಣ ಜಾರಿಗೊಳಿಸಲು ಸಚಿವಸಂಪುಟದಲ್ಲಿ ಕೈಗೊಂಡ ತೀರ್ಮಾನದಂತೆ ಜೂನ್ 11 ರಂದು ಶಕ್ತಿ ಯೋಜನೆಗೆ ಚಾಲನೆ ನೀಡಲಾಯಿತು. ಅಂದಿನಿಂದ ರಾಜ್ಯದ ಮಹಿಳೆಯರಿಗೆ ಸರಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನು ಕಲ್ಪಿಸಲಾಗಿರುವ ಬಗ್ಗೆ ಮುಖ್ಯಮಂತ್ರಿ ವಿವರಿಸಿದರು.
ಸಿಗಂದೂರು ಕಾರ್ಯಕ್ರಮ-ಶಿಷ್ಠಾಚಾರ ಪಾಲನೆಯಾಗಿಲ್ಲ:
ಸಿಗಂದೂರು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುವ ಕಾರ್ಯಕ್ರಮದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಸಾಗರ ತಾಲ್ಲೂಕಿನಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮವನ್ನು ಮುಂದೂಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ದೂರವಾಣಿ ಮೂಲಕ ಮಾತನಾಡಿ ಪತ್ರವನ್ನೂ ಬರೆಯಲಾಗಿತ್ತು. ಕೇಂದ್ರ ಸಚಿವರೂ ಕಾರ್ಯಕ್ರಮ ಮುಂದೂಡಲು ಸಮ್ಮತಿಸಿದ್ದರೂ, ಕೂಡ ಇಲ್ಲಿನ ಸ್ಥಳೀಯ ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು, ನನ್ನ ಗಮನಕ್ಕೆ ತಾರದೇ, ಕಾರ್ಯಕ್ರಮವನ್ನು ಇಂದೇ ಆಯೋಜಿಸಿದ್ದಾರೆ. ನನಗೆ ಪೂರ್ವನಿಯೋಜಿತ ಕಾರ್ಯಕ್ರಮಗಳಂತೆ ವಿಜಯಪುರ ಜಿಲ್ಲೆಗೆ ತೆರಳಬೇಕಾಗಿರುವುದರಿಂದ, ಸಾಗರ ತಾಲ್ಲೂಕಿನ ಕಾರ್ಯಕ್ರಮಕ್ಕೆ ಹೋಗಲು ಸಾಧ್ಯವಾಗುತ್ತಿಲ್ಲ ಎಂದರು.
ಬಿಜೆಪಿಯ ಈ ನಡೆಯನ್ನು ಪ್ರತಿಭಟಿಸಲು ಸಂಬಂಧಪಟ್ಟ ಸಾಗರ ತಾಲ್ಲೂಕಿನ ಇಂದಿನ ಕಾರ್ಯಕ್ರಮವನ್ನು ಸರಕಾರದ ಯಾವುದೇ ಸಚಿವರು, ಸ್ಥಳೀಯ ಶಾಸಕರು ಭಾಗವಹಿಸುತ್ತಿಲ್ಲ. ನಮ್ಮ ನಡುವೆ ತಿಕ್ಕಾಟವನ್ನು ಪ್ರಾರಂಭಿಸಿರುವುದು ಕೇಂದ್ರ ಸರಕಾರವೇ. ಇಲ್ಲಿ ಶಿಷ್ಠಾಚಾರದ ಪಾಲನೆಯಾಗಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ರಾಜ್ಯ ಸರಕಾರದ ಪಾಲೂ ಇರುತ್ತದೆ. ಅಂತಹ ಸಂದರ್ಭದಲ್ಲಿ ರಾಜ್ಯ ಸರಕಾರ ಎಲ್ಲ ಶಿಷ್ಠಾಚಾರಗಳನ್ನೂ ತಪ್ಪದೇ ಪಾಲಿಸುತ್ತದೆ. ಇಂದಿನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಿಗಾಗಲಿ, ಸಂಬಂಧಪಟ್ಟ ಇಲಾಖಾ ಸಚಿವರನ್ನಾಗಲೀ, ಸ್ಥಳೀಯ ಶಾಸಕರನ್ನಾಗಲೀ ಆಮಂತ್ರಣ ನೀಡಲಾಗಿಲ್ಲ ಎಂದರು.