800 ಉರ್ದು, 200 ಮರಾಠಿ ಮಾಧ್ಯಮ ಶಾಲಾ ಶಿಕ್ಷಕರ ನೇಮಕಾತಿಗೆ ಮುಖ್ಯಮಂತ್ರಿ ಅನುಮೋದನೆ?

Update: 2026-08-22 00:00 IST

ಬೆಂಗಳೂರು : ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ 800 ಉರ್ದು ಹಾಗೂ 200 ಮರಾಠಿ ಭಾಷಾ ಮಾಧ್ಯಮ ಶಿಕ್ಷಕರ ನೇಮಕಾತಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅನುಮೋದನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಶುಕ್ರವಾರ ವಿಧಾನಸೌಧದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವ ಯು.ಟಿ.ಖಾದರ್, ರಾಜ್ಯದ ಉರ್ದು ಮಾಧ್ಯಮ ಶಾಲೆಗಳಲ್ಲಿ ಶಿಕ್ಷಕರ ಕೊರತೆ, ವಿದ್ಯಾರ್ಥಿಗಳು ಎದುರಿಸುತ್ತಿರುವ ಶೈಕ್ಷಣಿಕ ಸಮಸ್ಯೆಗಳ ಬಗ್ಗೆ ವಿಷಯ ಪ್ರಸ್ತಾಪಿಸಿದರು ಎಂದು ಹೇಳಲಾಗಿದೆ.

ರಾಜ್ಯಾದ್ಯಂತ 15 ಸಾವಿರ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಲಾಗಿದೆ. ವಿವಿಧ ಜಿಲ್ಲೆಗಳಲ್ಲಿ ದೊಡ್ಡ ಪ್ರಮಾಣದ ಶಿಕ್ಷಕರ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಇದು ಮಹತ್ವದ ಹೆಜೆ. ಆದರೆ, ಈ ನೇಮಕಾತಿ ಮುಖ್ಯವಾಗಿ ಕನ್ನಡ ಮತ್ತು ಇಂಗ್ಲಿಷ್‌ ಮಾಧ್ಯಮದ ಶಾಲೆಗಳಿಗೆ ಮಾತ್ರ ಸೀಮಿತವಾಗಿರುವುದು ವ್ಯಾಪಕ ಚರ್ಚೆಗೆ ಕಾರಣವಾಗಿದೆ ಎಂದು ಯು.ಟಿ.ಖಾದರ್ ಸಭೆಯ ಗಮನ ಸೆಳೆದರು ಎಂದು ತಿಳಿದು ಬಂದಿದೆ.

ಈ ಹುದ್ದೆಗಳಲ್ಲಿ 6,967 ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಹಾಗೂ 8,033 ಹುದ್ದೆಗಳನ್ನು ರಾಜ್ಯದ ಇತರೆ ಭಾಗಗಳಿಗೆ ಹಂಚಿಕೆ ಮಾಡಲಾಗಿದೆ. ಆದರೆ ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಉರ್ದು, ಮರಾಠಿ, ತಮಿಳು, ತೆಲುಗು, ಹಿಂದಿ ಮುಂತಾದ ಇತರ ಮಾಧ್ಯಮದ ಶಾಲೆಗಳಿಗೆ ಪ್ರತ್ಯೇಕ ನೇಮಕಾತಿ ಅಥವಾ ಹುದ್ದೆಗಳ ಹಂಚಿಕೆ ಮಾಡಲಾಗಿಲ್ಲ ಎಂದು ಖಾದರ್ ತಿಳಿಸಿದರು ಎಂದು ಹೇಳಲಾಗಿದೆ.

ಅಲ್ಲದೇ, ಇತ್ತೀಚೆಗೆ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸಭಾಪತಿ ಸಲೀಂ ಅಹ್ಮದ್, ಅಲ್ಪಸಂಖ್ಯಾತ ಸಮುದಾಯದ ಶಾಸಕರು, ಸಚಿವರೊಂದಿಗೆ ನಡೆಸಿದ ಸಭೆಯ ಕುರಿತು ಮುಖ್ಯಮಂತ್ರಿಗೆ ಯು.ಟಿ.ಖಾದರ್ ಮನವರಿಕೆ ಮಾಡಿಕೊಟ್ಟರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು 800 ಉರ್ದು ಹಾಗೂ 200 ಮರಾಠಿ ಶಿಕ್ಷಕರ ನೇಮಕಾತಿಗೆ ಅನುಮೋದನೆ ನೀಡಿದರು ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News