ಕೋಮುದ್ವೇಷಕ್ಕಾಗಿ ಸುಳ್ಳು ಸುದ್ದಿ ಹಬ್ಬಿಸಿದ ಆರೋಪ: ಬಿಜೆಪಿ ವಕ್ತಾರ ಹರಿಪ್ರಕಾಶ್ ಕೋಣೆಮನೆ ವಿರುದ್ಧ ದೂರು
ಹರಿಪ್ರಕಾಶ್ ಕೋಣೆಮನೆ
ಬೆಂಗಳೂರು: ಯಾವುದೇ ಸಾಕ್ಷ್ಯವಿಲ್ಲದೇ, ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ಸುಳ್ಳು ಸುದ್ದಿ ಮೂಲಕ ಕೋಮುದ್ವೇಷ ಹಬ್ಬಿಸುತ್ತಿರುವ ಆರೋಪದಡಿ ಬಿಜೆಪಿ ವಕ್ತಾರ ಹರಿಪ್ರಕಾಶ್ ಕೋಣೆಮನೆ ವಿರುದ್ಧ ಇಲ್ಲಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಲಾಗಿದೆ.
ಮಂಗಳವಾರ ಇಲ್ಲಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ಭೇಟಿ ನೀಡಿದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳ ಯಂಗ್ ಬ್ರಿಗೇಡ್ ಅಧ್ಯಕ್ಷ ಮುಹಮ್ಮದ್ ಜುನೈದ್ ಪಿ.ಕೆ.ನೇತೃತ್ವದ ನಿಯೋಗ, ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ, ಕೋಮು ದ್ವೇಷ ಹರಡುತ್ತಿರುವ ಬಿಜೆಪಿ ವಕ್ತಾರ ಹರಿಪ್ರಕಾಶ್ ಕೋಣೆ ಮನೆ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ದೂರು ಸಲ್ಲಿಕೆ ಮಾಡಿದರು.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಮುಹಮ್ಮದ್ ಜುನೈದ್ ಪಿ.ಕೆ., 2023-24ನೆ ಸಾಲಿನ ರಾಜ್ಯ ಮಟ್ಟದ ಎಸ್ಸೆಸ್ಸೆಲ್ಸಿ ಪೂರ್ವ ಸಿದ್ದತಾ ಪರೀಕ್ಷೆ ವೇಳಾಪಟ್ಟಿಯನ್ನು ಇಟ್ಟುಕೊಂಡು ಬಿಜೆಪಿ ವಕ್ತಾರ ಹರಿಪ್ರಕಾಶ್ ಕೋಣೆಮನೆ ತಮ್ಮ ಫೇಸ್ಬುಕ್ ಖಾತೆಯಲ್ಲಿ ರಾಜ್ಯ ಕಾಂಗ್ರೆಸ್ ಸರಕಾರದ ನಿರ್ದೇಶನದಂತೆ ರಾಜ್ಯ ಶಿಕ್ಷಣ ಇಲಾಖೆ ಬೆಳಗ್ಗೆ ಶುಕ್ರವಾರದಂದು ಸಮಯ ಬದಲಾಯಿಸಿ ನಮಾಜ್ ಮಾಡಲು ಅನುಕೂಲ ಮಾಡಿಕೊಟ್ಟಿದೆ ಎಂದು ಉಲ್ಲೇಖಿಸಿ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ ಎಂದು ಹೇಳಿದರು.
ಎಸ್ಸೆಸ್ಸೆಲ್ಸಿ ಪರೀಕ್ಷೆ ಕೊನೆಯ ದಿನ ಪಿಯುಸಿ ಪರೀಕ್ಷೆ ಆರಂಭವಾಗಲಿದೆ. ಅವರಿಗೂ ಕೆಲವು ಸೆಂಟರ್ ಗಳು ಎಸ್ಸೆಸ್ಸೆಲ್ಸಿ ಕೇಂದ್ರಗಳಲ್ಲೇ ಇರುತ್ತದೆ. ಹಾಗಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಒಂದು ವಿಷಯವನ್ನು ಮಧ್ಯಾಹ್ನ ಮಾಡುತ್ತಿರುವುದಕ್ಕೆ ಹರಿಪ್ರಕಾಶ್ ಕೋಣೆಮನೆ ಈ ರೀತಿ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದು, ಅವರ ವಿರುದ್ಧ ಕಾನೂನು ರೀತ್ಯ ಕ್ರಮ ಕೈಗೊಳ್ಳುವಂತೆ ದೂರ ನೀಡಲಾಗಿದೆ ಎಂದು ತಿಳಿಸಿದರು.