ಕೋಮು ದ್ವೇಷ ಹರಡಲು ಯತ್ನಿಸಿದ ಆರೋಪ : ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಪೊಲೀಸ್ ವಶಕ್ಕೆ

Update: 2024-05-09 15:34 GMT

ಬೆಂಗಳೂರು : ಮೀಸಲಾತಿಗೆ ಸಂಬಂಧಿಸಿದಂತೆ ತಪ್ಪು ಮಾಹಿತಿ ಮತ್ತು ದ್ವೇಷಪೂರಿತ ವಿಡಿಯೋ ತುಣುಕನ್ನು ಬಿಜೆಪಿ ರಾಜ್ಯ ಘಟಕದ ‘ಎಕ್ಸ್’ ಖಾತೆಯಲ್ಲಿ ಹಂಚಿಕೊಂಡು ಕೋಮು ದ್ವೇಷ ಹರಡಲು ಯತ್ನಿಸಿದ ಆರೋಪದಡಿ ಕರ್ನಾಟಕ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಪ್ರಶಾಂತ್ ಮಾಕನೂರುನನ್ನು ಇಲ್ಲಿನ ಹೈಗ್ರೌಂಡ್ಸ್ ಠಾಣಾ ಪೊಲೀಸರು ವಶಕ್ಕೆ ಪಡೆದು ಹೇಳಿಕೆ ದಾಖಲಿಸಿಕೊಂಡಿರುವುದಾಗಿ ವರದಿಯಾಗಿದೆ.

ಈ ವೇಳೆ ಪ್ರಶಾಂತ್ ಮಾಕನೂರು ಅವರು ನ್ಯಾಯಾಲಯದ ನಿರೀಕ್ಷಣಾ ಜಾಮೀನು ಆದೇಶ ಪ್ರತಿ ಪೊಲೀಸರ ಮುಂದೆ ಹಾಜರು ಪಡಿಸಿದ್ದಾರೆ.

ಕಾಂಗ್ರೆಸ್ ವಿರುದ್ಧ ಮುಸ್ಲಿಮ್ ಸಮುದಾಯಾಧಾರಿತವಾಗಿ ಮೀಸಲಾತಿ ಕುರಿತು ಟೀಕೆ ಮಾಡುವ ಸಂಬಂಧ ಬಿಜೆಪಿ ರಾಜ್ಯ ಘಟಕದ ‘ಎಕ್ಸ್’ ಖಾತೆಯಲ್ಲಿ ಮೊಟ್ಟೆ ವಿಡಿಯೋ ಅಪ್ಲೋಡ್ ಮಾಡಲಾಗಿತ್ತು. ಈ ಸಂಬಂಧ ಮೇ 8ರಂದು ಕಾಂಗ್ರೆಸ್ ದೂರಿನ ಮೇರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ , ಐಟಿ ಘಟಕದ ಮುಖ್ಯಸ್ಥ ಅಮಿತ್ ಮಾಳವೀಯಾ ಹಾಗೂ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

ಈ ಹಿನ್ನೆಲೆಯಲ್ಲಿ ಹೈಗ್ರೌಂಡ್ಸ್ ಪೊಲೀಸರು ನೋಟಿಸ್ ಜಾರಿ ಮಾಡಿ 7 ದಿನಗಳೊಳಗೆ ಉತ್ತರಿಸುವಂತೆ ಸೂಚಿಸಿದ್ದರು. ಇದರ ಬೆನ್ನಲೇ ಗುರುವಾರ ಬಿಜೆಪಿಯ ಸಾಮಾಜಿಕ ಜಾಲತಾಣದ ಮುಖ್ಯಸ್ಥ ಪ್ರಶಾಂತ್ ಮಾಕನೂರು ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಗೊತ್ತಾಗಿದೆ.

ಆದರೆ, ಪ್ರಶಾಂತ್ ಮಾಕನೂರು ಅವರು ನ್ಯಾಯಾಲಯದ ನಿರೀಕ್ಷಣಾ ಜಾಮೀನು ಆದೇಶ ಪ್ರತಿಯನ್ನು ಪೊಲೀಸರ ಮುಂದೆ ಹಾಜರು ಪಡಿಸಿದ್ದು, ಹೀಗಾಗಿ ಜಾಮೀನು ಪ್ರಕ್ರಿಯೆ ಹಾಗೂ ಪ್ರಶಾಂತ್ ಹೇಳಿಕೆಯನ್ನು ದಾಖಲಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News