ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯತ್ವದಿಂದ ಕೈಬಿಡಲು ಸರಕಾರಕ್ಕೆ ಅಕ್ಕಯ್ ಪದ್ಮಶಾಲಿ ಮನವಿ
ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಆಯ್ಕೆಯಾಗಿದ್ದ ಲೈಂಗಿಕ ಅಲ್ಪಸಂಖ್ಯಾತರ ಪರ ಹಕ್ಕುಗಳ ಹೋರಾಟಗಾರ್ತಿ ಅಕ್ಕಯ್ ಪದ್ಮಶಾಲಿ ಅವರು,ತಮ್ಮನ್ನು ಸದಸ್ಯತ್ವದಿಂದ ಕೈಬಿಡುವಂತೆ ಆಗ್ರಹಿಸಿ ಸರಕಾರಕ್ಕೆ ಮನವಿ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಪತ್ರ ಬರೆದಿರುವ ಅಕ್ಕಯ್, "ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯರನ್ನಾಗಿ ನನ್ನನ್ನು ಗುರುತಿಸಿ ಆಯ್ಕೆ ಮಾಡಿರುವುದಕ್ಕೆ ತಮಗೆ ಹಾಗೂ ತಮ್ಮ ನೇತೃತ್ವದ ಸರ್ಕಾರಕ್ಕೆ ಅಭಿನಂದನೆಯನ್ನು ಸಲ್ಲಿಸುತ್ತಿದ್ದೇನೆ. ಆದರೆ ನನ್ನ ಸದಸ್ಯತ್ವವನ್ನು ಕೈಬಿಡಬೇಕಾಗಿ ಮನವಿ ಮಾಡಿಕೊಳ್ಳುತ್ತಿದ್ದೇನೆ. ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ಸಾಮಾಜಿಕ ಹಾಗೂ ರಾಜಕೀಯದ ವಿಚಾರದ ನನ್ನ ಹೋರಾಟವು ಪ್ರಪಂಚದಾದ್ಯಂತ ಪಸರಿಸಿದೆ. ನಮ್ಮ ಸಮುದಾಯದ ಸಂಪೂರ್ಣ ಶ್ರೇಯೋಭಿವೃದ್ಧಿಗಾಗಿ ಹಾಗೂ ಸಾಮಾಜಿಕ ಬಹಿಷ್ಕಾರದ ವಿರುದ್ಧ ನನ್ನ ಹೋರಾಟ ಮುಂದುವರಿಸಲಿದ್ದೇನೆʼ ಎಂದು ತಿಳಿಸಿದ್ದಾರೆ.
"ಈ ಬಗ್ಗೆ ಗಮನಹರಿಸಿ ನನ್ನನ್ನು ಮುಂಬರುವ ಕರ್ನಾಟಕ ರಾಜ್ಯ ವಿಧಾನ ಪರಿಷತ್ತಿನ ಸದಸ್ಯರನ್ನಾಗಿ ಅಥವಾ ರಾಜ್ಯಸಭೆಯ ಸದಸ್ಯರನ್ನಾಗಿಸಿ, ಶಾಸನಸಭೆಯ ಭಾಗವಾಗಿ ನಮ್ಮ ಸಮುದಾಯದ ರಾಜಕೀಯ ಪ್ರಾತಿನಿಧ್ಯತೆಯನ್ನು ‘ಸರ್ವ ಜನಾಂಗದ ಶಾಂತಿಯ ತೋಟದ’ ನಾಡಿನಲ್ಲಿ ಸಾಕ್ಷಿಯಾಗಬೇಕಾಗಿರುವ ವಾತಾವರಣ ನಿರ್ಮಾಣವಾಗಿದೆ. ಇದರ ಬಗ್ಗೆ ತಾವುಗಳು ವಿಶೇಷ ಕಾಳಜಿವಹಿಸಿ ಕ್ರಮವಹಿಸಬೇಕಾಗಿ ವಿನಂತಿಸುತ್ತಿದ್ದೇನೆ" ಎಂದು ಮನವಿ ಮಾಡಿದ್ದಾರೆ.
ಲೋಕಸಭೆ ಚುನಾವಣೆಗೆ ನೀತಿ ಸಂಹಿತೆ ಜಾರಿ ಮಾಡುವ ಕೆಲವೇ ಗಂಟೆಗಳ ಮುನ್ನ 19 ವಿವಿಧ ಅಕಾಡೆಮಿ ಹಾಗೂ ಪ್ರಾಧಿಕಾರಗಳಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಿಸಿ ಶನಿವಾರ(ಮಾ.16) ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.