ಬಸವರಾಜ್ ಹೊರಟ್ಟಿ ರಾಜೀನಾಮೆ ಅಂಗೀಕಾರ

ಅವಧಿ ಮುಗಿಯುವ ಮುನ್ನವೇ ರಾಜೀನಾಮೆ ಪಡೆದಿರುವುದು ನನಗೆ ಬೇಸರ ಆಗಿದೆ ಎಂದ ಹೊರಟ್ಟಿ

Update: 2026-08-07 21:45 IST

ಬೆಂಗಳೂರು: ವಿಧಾನ ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರು ಸ್ವ ಇಚ್ಛೆಯಿಂದ ರಾಜೀನಾಮೆ ಸಲ್ಲಿಕೆ ಮಾಡಿದ್ದು, ಅವರ ರಾಜೀನಾಮೆಯನ್ನು ಶುಕ್ರವಾರ ಅಂಗೀಕಾರ ಮಾಡಲಾಗಿದೆ.

ಉಪಸಭಾಪತಿ ಇಲ್ಲದ ಹಿನ್ನೆಲೆ ವಿಧಾನ ಪರಿಷತ್ತಿನ ಕಾರ್ಯದರ್ಶಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿರುವ ಬಸವರಾಜ ಹೊರಟ್ಟಿ ಅವರು, ‘ಸ್ವ ಇಚ್ಛೆಯಿಂದ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ’ ಎಂದು ಉಲ್ಲೇಖಿಸಿದ್ದಾರೆ.

ಈ ಮೊದಲು ಅವರು, ಆ.14ರಂದು ರಾಜೀನಾಮೆ ಕೊಡಲು ತೀರ್ಮಾನಿಸಿದ್ದರು. ಆದರೆ, ಶುಕ್ರವಾರ ಮತ್ತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಧಾನಸೌಧದಲ್ಲಿನ ಸಭಾಪತಿ ಕೊಠಡಿಗೆ ಆಗಮಿಸಿ ಮಾತುಕತೆ ನಡೆಸಿದ ಹಿನ್ನೆಲೆಯಲ್ಲಿ ಬಸವರಾಜ ಹೊರಟ್ಟಿ ಅವರು ಇಂದೇ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.

ಇತ್ತ ರಾಜೀನಾಮೆ ಸಲ್ಲಿಸಲು ಉಪಸಭಾಪತಿ ಇಲ್ಲದಿರುವ ಕಾರಣ, ವಿಧಾನ ಪರಿಷತ್ತಿನ ಕಾರ್ಯದರ್ಶಿಗೆ ಸಲ್ಲಿಕೆ ಮಾಡಿದ್ದಾರೆ. ರಾಜೀನಾಮೆ ಪತ್ರ ಸ್ವೀಕರಿಸಿರುವ ಕಾರ್ಯದರ್ಶಿ, ರಾಜ್ಯಪಾಲರಿಗೆ ಶಿಫಾರಸ್ಸು ಮಾಡಿದ ಬಳಿ ಅದನ್ನು ಅಂಗೀಕಾರ ಮಾಡಿದ್ದು, ‘ಸಭಾಪತಿ ಹುದ್ದೆ ತೆರವಾಗಿದೆ’ ಎಂದು ಅಧಿಸೂಚನೆ ಹೊರಡಿಸಿದ್ದಾರೆ.

ರಾಜೀನಾಮೆ ಬಳಿಕ ಪ್ರತಿಕ್ರಿಯಿಸಿದ ಬಸವರಾಜ ಹೊರಟ್ಟಿ ಅವರು, ‘ಇಂದೇ ರಾಜೀನಾಮೆ ಬೇಕೆಂದು ಕೇಳಿದರು. ಅದಕ್ಕಾಗಿ ಇಂದೇ ಸಲ್ಲಿಕೆ ಮಾಡಿದ್ದೇನೆ. ಆದರೆ, ಅವಧಿ ಮುಗಿಯುವ ಮುನ್ನವೇ ರಾಜೀನಾಮೆ ಪಡೆದಿರುವುದು ನನಗೆ ಸ್ವಲ್ಪ ಬೇಸರ ಆಗಿದೆ’ ಎಂದು ನುಡಿದರು.

ಇನ್ನೂ, ಸಭಾಪತಿ ಸ್ಥಾನದ ಕುರಿತು ಒಂದು ವಾರದಿಂದ ನಡೆದಿದ್ದ ಈ ಪ್ರಹಸನ ಇಂದು ಅಂತ್ಯಗೊಂಡಂತಾಗಿದ್ದು, ಸಾಂವಿಧಾನಿಕ ಬಿಕ್ಕಟ್ಟು ಎದುರಾಗದಂತೆ ಮತ್ತು ಯಾವುದೇ ಸಮಸ್ಯೆ ಸೃಷ್ಟಿಯಾಗದಂತೆ ಹೊರಟ್ಟಿಯವರು ಶಾಂತಚಿತ್ತದಿಂದಲೇ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮಾತಿನಂತೆ ಹೊರಟ್ಟಿ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚಿಗೆ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯ ನಂತರ ಪರಿಷತ್‍ನಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಗಳಿಸಿದೆ. ಅದೇ ರೀತಿ, ತನ್ನ ಪಕ್ಷದ ಸದಸ್ಯರೊಬ್ಬರನ್ನು ಸಭಾಪತಿಯನ್ನಾಗಿ ನೇಮಿಸಲು ನಿರ್ಧರಿಸಿದ್ದು, ಈಗಾಗಲೇ ಆ ಸ್ಥಾನಕ್ಕೆ ವಿಧಾನ ಪರಿಷತ್ತಿನ ಹಿರಿಯ ಸದಸ್ಯ ಸಲೀಂ ಅಹ್ಮದ್ ಅವರ ಹೆಸರನ್ನು ಅಂತಿಮಗೊಳಿಸಿದೆ.


ಆ.14ರ ವರೆಗೂ ಹೊರಟ್ಟಿ ಮುಂದುವರೆಯಲಿ: ಡಿ.ಕೆ.ಶಿವಕುಮಾರ್

ವಿಧಾನ ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರು ರಾಜೀನಾಮೆ ನೀಡಿರುವ ಹಿನ್ನೆಲೆ ಬದಲಿ ವ್ಯವಸ್ಥೆ ಆಗುವವರೆಗೂ ಆ.14ರವರೆಗೂ ಅವರನ್ನೆ ಈ ಸ್ಥಾನದಲ್ಲಿ ಮುಂದುವರಿಸಬೇಕು ಎಂದು ರಾಜ್ಯಪಾಲರಿಗೆ ಪತ್ರ ಬರೆದಿದ್ದೇನೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಶುಕ್ರವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸಕ್ತ ರಾಜಕೀಯ ಬೆಳವಣಿಗೆ ಗಮನದಲ್ಲಿಟ್ಟುಕೊಂಡು ಬಸವರಾಜ ಹೊರಟ್ಟಿ ಅವರು ತಮ್ಮ ರಾಜೀನಾಮೆ ನೀಡಿದ್ದು, ಅವರಿಗೆ ಧನ್ಯವಾದ ಅರ್ಪಿಸುತ್ತೇನೆ. ಹೊರಟ್ಟಿ ಅವರು ದೇಶದ ವಿಧಾನ ಪರಿಷತ್ತು ಇತಿಹಾಸದಲ್ಲೇ ಅತ್ಯಂತ ಹಿರಿಯ ನಾಯಕರಾಗಿದ್ದು, ಅವರು ತಮ್ಮ ಹೃದಯ ವೈಶಾಲ್ಯತೆ ತೋರಿದ್ದಾರೆ. ಆ.13 ರಂದು ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, 14 ರಂದು ನೂತನ ಉಪಸಭಾಪತಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ನಂತರ ಉಪಸಭಾಪತಿಗಳ ಮೂಲಕ ಸಭಾಪತಿಗಳ ಚುನಾವಣೆ ನಡೆಯಲಿದೆ ಎಂದು ತಿಳಿಸಿದರು.

ಇದಕ್ಕೂ ಮುನ್ನ ಬಸವರಾಜ ಹೊರಟ್ಟಿ ಅವರೊಂದಿಗೆ ವಿಧಾನಸೌಧದಲ್ಲಿ ಚರ್ಚೆ ನಡೆಸಿದ್ದ ಶಿವಕುಮಾರ್ ಅವರು, ವಿಧಾನ ಪರಿಷತ್ತಿನ ಅಧ್ಯಕ್ಷ, ಉಪಾಧ್ಯಕ್ಷರನ್ನ ಆಯ್ಕೆ ಮಾಡಿ ನಂತರ ನಮ್ಮ ಸದಸ್ಯರೆಲ್ಲರಿಗೂ ಕೃತಜ್ಞತೆ ಸಲ್ಲಿಸುವ ಆಸೆಯನ್ನು ಬಸವರಾಜ ಹೊರಟ್ಟಿಯವರು ಇಟ್ಟುಕೊಂಡಿದ್ದಾರೆ. ಅವರ ಭಾವನೆಗಳನ್ನು ನಾವು ಒಪ್ಪಿಕೊಂಡಿದ್ದೇವೆ, ಗೌರವಿಸುತ್ತೇವೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News