ಬೆಂಗಳೂರು : ಬಜೆಟ್‍ನಲ್ಲಿ ಘೋಷಿಸಿದಂತೆ ಕಾಲೇಜು ಮತ್ತು ವಿಶ್ವ ವಿದ್ಯಾನಿಲಯಗಳಲ್ಲಿ ವಿದ್ಯಾರ್ಥಿ ಸಂಘ ಚುನಾವಣೆ ನಡೆಸಲಾಗುವುದು. ವ್ಯವಸ್ಥಿತವಾಗಿ, ಯಾವುದೇ ಗೊಂದಲಗಳಿಗೆ ಒಳಗಾಗದಂತೆ ಚುನಾವಣೆ ನಡೆಸಲು ಇಲಾಖೆ ಎಲ್ಲ ಕ್ರಮ ಕೈಗೊಳ್ಳಲಿದೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ತಿಳಿಸಿದ್ದಾರೆ.

ಶುಕ್ರವಾರ ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಈಗಾಗಲೇ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್‍ನಲ್ಲಿ ರಾಜ್ಯದ ವಿದ್ಯಾರ್ಥಿ ಸಂಘಟನೆಗಳು, ಅಧ್ಯಾಪಕ ವೃಂದ ಮತ್ತು ಖಾಸಗಿ/ಅನುದಾನಿತ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳ ಜೊತೆ ಚರ್ಚೆ ನಡೆಸಲಾಗಿದೆ. ಪಾರದರ್ಶಕ ಚುನಾವಣಾ ಪ್ರಕ್ರಿಯೆ ಕುರಿತು ಸಹ ಸಲಹೆ ಸ್ವೀಕರಿಸಲಾಗಿದೆ. ವಿದ್ಯಾರ್ಥಿ ಸಂಘಗಳು, ಕಾಲೇಜ್ ಮತ್ತು ವಿಶ್ವ ವಿದ್ಯಾನಿಲಯಗಳ ಸಹಕಾರ ಸಹ ಮುಖ್ಯ ಎಂದರು.

ಸುಮಾರು ಮೂರು ದಶಕಗಳ ನಂತರ ವಿದ್ಯಾರ್ಥಿ ಸಂಘದ ಚುನಾವಣೆ ನಡೆಸಲಾಗುತ್ತಿದ್ದು, ಗುಂಪುಗಾರಿಕೆ, ಚುನಾವಣಾ ಹಿಂಸಾಚಾರಕ್ಕೆ ಅವಕಾಶ ನೀಡಲಾಗುವುದಿಲ್ಲ. ಇಂದಿನ ವಿದ್ಯಾರ್ಥಿಗಳು ಮುಂದೆ ನಾಯಕರಾಗಿ ಬೆಳೆಯಬೇಕು ಎನ್ನುವುದು ಕೂಡ ಇದರ ಉದ್ದೇಶವಾಗಿದೆ ಎಂದು ಬಸವರಾಜ ರಾಯರಡ್ಡಿ ಹೇಳಿದರು.

ಕಾಲೇಜು ಮತ್ತು ವಿಶ್ವವಿದ್ಯಾಲಯಗಳ ಹಂತದಲ್ಲಿಯೇ ನಾಯಕತ್ವದ ಗುಣಗಳನ್ನು ಬೆಳೆಸಲು ಮತ್ತು ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಧ್ವನಿಯಾಗಲು ವಿದ್ಯಾರ್ಥಿ ಚುನಾವಣೆ ಸಹಕಾರಿ. ಇದು ವಿದ್ಯಾರ್ಥಿಗಳಲ್ಲಿ ನಾಯಕತ್ವ ಮತ್ತು ಜವಾಬ್ದಾರಿಯ ಭಾವನೆಯನ್ನು ಬೆಳೆಸುತ್ತದೆ. ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಡಳಿತ ಮಂಡಳಿಯ ಗಮನಕ್ಕೆ ತರಲು ಇದು ಸೇತುವೆಯಾಗಿ ಕೆಲಸ ಮಾಡುತ್ತದೆ ಎಂದು ಬಸವರಾಜ ರಾಯರಡ್ಡಿ ತಿಳಿಸಿದರು.

ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಮತದಾನದ ಮಹತ್ವವನ್ನು ಪ್ರಾಯೋಗಿಕವಾಗಿ ಕಲಿಯಲು ಸಹಾಯ ಮಾಡುತ್ತದೆ. ವಿದ್ಯಾರ್ಥಿಗಳ ಸಂಘಟನಾ ಶಕ್ತಿ ಮತ್ತು ಸೃಜನಶೀಲತೆಯನ್ನು ಹೊರಹಾಕಲು ಇದು ಉತ್ತಮ ವೇದಿಕೆಯಾಗಿದೆ. ವಿದ್ಯಾರ್ಥಿ ಸಮುದಾಯದಲ್ಲಿ ಜಾತಿ ಪ್ರಜ್ಞೆ ಬೆಳೆಸಬಾರದು ಎಂಬ ಕಾರಣಕ್ಕೆ ಮೀಸಲು ವ್ಯವಸ್ಥೆ ಇರುವುದಿಲ್ಲ ಎಂದು ಬಸವರಾಜ ರಾಯರಡ್ಡಿ ತಿಳಿಸಿದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor