ಬಿಜೆಪಿ ದುರ್ಬಲವಾಗಿರುವುದಕ್ಕೆ ಹಾಲಿ ಸಂಸದರಿಗೆ ಟಿಕೆಟ್ ನೀಡಿಲ್ಲ: ಡಿ.ಕೆ ಶಿವಕುಮಾರ್

Update: 2024-03-28 06:16 GMT

ಬೆಂಗಳೂರು, ಮಾರ್ಚ್ 28: "ಕೋಲಾರದಲ್ಲಿ ಎಲ್ಲಾ ನಾಯಕರು ಒಟ್ಟಾಗಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಕೆಲಸ ಮಾಡಲಿದ್ದಾರೆ. ಯಾರ ವೈಯಕ್ತಿಕ ಪ್ರತಿಷ್ಠೆಗೂ ಪಕ್ಷದಲ್ಲಿ ಅವಕಾಶ ನೀಡುವುದಿಲ್ಲ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಗುರುವಾರ ಸದಾಶಿವನಗರ ನಿವಾಸದ ಬಳಿ  ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, "ಯಾರೂ ರಾಜೀನಾಮೆ ನೀಡಲ್ಲ. ಟಿಕೆಟ್ ವಿಚಾರವಾಗಿ ಒತ್ತಡ ಇದೆ. ಪಕ್ಷ ಇದುವರೆಗೂ ಯಾರಿಗೂ ಟಿಕೆಟ್ ಘೋಷಣೆ ಮಾಡಿಲ್ಲ. ಇಂದು ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಚರ್ಚೆ ಮಾಡಲಾಗುವುದು" ಎಂದು ತಿಳಿಸಿದರು.

ಬಿಜೆಪಿ ಹಾಗೂ ಜೆಡಿಎಸ್ ಸೇರಿ ಓರ್ವ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವ ಬಗ್ಗೆ ಕೇಳಿದಾಗ, "ನಾವು ದೇವೇಗೌಡರ ಕುಟುಂಬದ ವಿರುದ್ಧ ಅನೇಕ ಚುನಾವಣೆಗಳನ್ನು ಮಾಡಿದ್ದೇವೆ. ದೇವೇಗೌಡರ ವಿರುದ್ಧ ಓರ್ವ ಮಹಿಳೆಯನ್ನು ನಿಲ್ಲಿಸಿ ಗೆಲ್ಲಿಸಿದ್ದೇವೆ. ನಾನು ಕುಮಾರಸ್ವಾಮಿ ಅವರ ವಿರುದ್ಧ ಸ್ಪರ್ಧಿಸಿ ಗೆದ್ದಿದ್ದೇನೆ. 2013ರ ಉಪಚುನಾವಣೆಯಲ್ಲಿ ಇದೇ ರೀತಿ ಜೆಡಿಎಸ್ ಹಾಗೂ ಬಿಜೆಪಿ ಸೇರಿ ಅನಿತಾ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಿದಾಗ ಸುರೇಶ್ ಅವರು ಗೆದ್ದಿದ್ದರು. ಆಗ ಸಿದ್ದರಾಮಯ್ಯ ಅವರ ಸರ್ಕಾರ ಇದ್ದರೂ ನಾನು ಸಚಿವನಾಗಿರಲಿಲ್ಲ. ಆಗ ನನಗೆ ದೊಡ್ಡ ಸವಾಲಾಗಿತ್ತು. ಆಗಲೂ ನಾವು ಅನಿತಾ ಕುಮಾರಸ್ವಾಮಿ ಅವರನ್ನು 1.30 ಲಕ್ಷ ಮತಗಳಿಂದ ಮಣಿಸಿದೆವು. ನಂತರ ಜನ ಸುರೇಶ್ ಅವರನ್ನು ಸತತವಾಗಿ ಗೆಲ್ಲಿಸಿಕೊಂಡು ಬಂದಿದ್ದಾರೆ" ಎಂದು ತಿಳಿಸಿದರು.

ಚಿತ್ರದುರ್ಗದಲ್ಲಿ ಬಿಜೆಪಿಯಿಂದ ಮಾಜಿ ಸಚಿವ ಗೋವಿಂದ ಕಾರಜೋಳ ಅವರ ಸ್ಪರ್ಧೆ ಬಗ್ಗೆ ಕೇಳಿದಾಗ, "ಅವರ ಪಕ್ಷದಿಂದ ಯಾರನ್ನಾದರೂ ನಿಲ್ಲಿಸಲಿ. ನಾವು ಚಂದ್ರಪ್ಪ ಅವರನ್ನು ಕಣಕ್ಕಿಳಿಸಿದ್ದೇವೆ. ಹಾಲಿ ಸಚಿವರಿಗೆ, ಹಾಲಿ ಸಂಸದರಿಗೆ ಬಿಜೆಪಿ ಟಿಕೆಟ್ ನೀಡಿಲ್ಲ. ಆಮೂಲಕ ಅವರ ಪಕ್ಷ ದುರ್ಬಲವಾಗಿದೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ" ಎಂದರು.

ಚುನಾವಣೆಯ ಸ್ಟಾರ್ ಪ್ರಚಾರಕರಾಗಿ ಯಾರು ಆಗಮಿಸಲಿದ್ದಾರೆ ಎಂದು ಕೇಳಿದಾಗ, "ಎಐಸಿಸಿ ಅಧ್ಯಕ್ಷರು ನಮ್ಮವರೇ. ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರಿಗೆ ಆಗಮಿಸುವಂತೆ ಮನವಿ ಮಾಡಿದ್ದೇವೆ. ಅವರು ಇಡೀ ದೇಶದಲ್ಲಿ ಪ್ರಚಾರ ಮಾಡಬೇಕಿದ್ದು, ಅವರಿಂದ ರಾಜ್ಯದಲ್ಲಿ ಹೆಚ್ಚು ದಿನಗಳ ಪ್ರಚಾರ ನಿರೀಕ್ಷೆ ಮಾಡಲು ಆಗುವುದಿಲ್ಲ" ಎಂದು ತಿಳಿಸಿದರು.

ಕೋವಿಡ್ ಸಮಯದಲ್ಲಿ ಸುರೇಶ್ ಅವರ ಸೇವೆ ಒಂದು ಇತಿಹಾಸ:

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ತಯಾರಿ ಬಗ್ಗೆ ಕೇಳಿದಾಗ, "ನಾವು ಕೇವಲ ಇಂದು ಚುನಾವಣೆ ತಯಾರಿ ಮಾಡುತ್ತಿಲ್ಲ. ಸುರೇಶ್ ಅವರು ಗೆದ್ದ ಮೊದಲ ದಿನದಿಂದ ಪ್ರತಿ ನಿತ್ಯ ಕೆಲಸ ಮಾಡಿಕೊಂಡೆ ಬಂದಿದ್ದಾರೆ. ಕೋವಿಡ್ ಸಮಯದಲ್ಲಿ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ದೇಹವನ್ನು ಅವರ ತವರೂರಿಗೆ ತರಲು ಬಿಜೆಪಿ ಕೇಂದ್ರ ಸರ್ಕಾರ ಅವಕಾಶ ನೀಡಲಿಲ್ಲ. ಆದರೆ ಡಿ.ಕೆ. ಸುರೇಶ್ ಅವರು ಕೋವಿಡ್ ಕಷ್ಟಕಾಲದಲ್ಲಿ ರೈತರಿಂದ ಹಣ್ಣು ತರಕಾರಿ ಖರೀದಿ ಮಾಡಿ ಜನರಿಗೆ ಉಚಿತವಾಗಿ ಹಂಚಿದ್ದಾರೆ. ಜನರಿಗೆ ಮೆಡಿಕಲ್ ಕಿಟ್ ನೀಡಿ ಸಹಾಯ ಮಾಡಿದರು. ಸರ್ಕಾರ ಶವಗಳನ್ನು ಜೆಸಿಬಿಯಲ್ಲಿ ಎಸೆಯುತ್ತಿರುವಾಗ, ಕೋವಿಡ್ ನಿಂದ ಮೃತಪಟ್ಟವರ ಅಂತ್ಯಸಂಸ್ಕಾರಕ್ಕೆ ಅವರ ಮನೆಯವರು ಮುಂದೆ ಬಾರದಿದ್ದಾಗ ಡಿ.ಕೆ ಸುರೇಶ್ ಪಿಪಿಇ ಕಿಟ್ ಧರಿಸಿ ಶವಗಳ ಅಂತ್ಯ ಸಂಸ್ಕಾರ ಮಾಡಿದರು. ಎಲ್ಲಾ ನಾಯಕರು ಮನೆಯಿಂದ ಆಚೆ ಬರಲು ಹಿಂಜರಿದಾಗ, ಸುರೇಶ್ ಅವರು ಆಸ್ಪತ್ರೆಗಳಿಗೆ ಹೋಗಿ, ಕೋವಿಡ್ ಸೋಂಕಿತರ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು. ಇದೆಲ್ಲವೂ ಇತಿಹಾಸ. ಅಂತಹ ಕಷ್ಟ ಕಾಲದಲ್ಲಿ ತಮ್ಮ ಪ್ರಾಣವನ್ನು ಲೆಕ್ಕಿಸದೆ ಕ್ಷೇತ್ರದ ಜನರಿಗಾಗಿ ಶ್ರಮಿಸಿದ್ದಾರೆ. ಇದ್ಯಾವುದೂ ಚುನಾವಣೆ ಸಮಯದಲ್ಲಿ ಮಾಡಿದ ಕೆಲಸವಲ್ಲ. ಸುರೇಶ್ ಅವರು ಪ್ರತಿ ಹಳ್ಳಿ, ಹಳ್ಳಿ ಸುತ್ತಾಡಿ ಪಂಚಾಯ್ತಿ ಸದಸ್ಯನಂತೆ ಕೆಲಸ ಮಾಡಿದ್ದಾರೆ.ಹೀಗಾಗಿ ನಾವು ಈ ಬಾರಿಯ ಚುನಾವಣೆಯಲ್ಲಿ ನಾವು ವಿಶೇಷವಾದ ತಯಾರಿ ಮಾಡುವ ಅಗತ್ಯವಿಲ್ಲ. ನಮ್ಮ ಪರವಾಗಿ ಜನರು, ಕಾರ್ಯಕರ್ತರು ಇದ್ದಾರೆ.

 

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News