ಎಲ್ಲರನ್ನು ವಿಶ್ವಾಸಕ್ಕೆ ಪಡೆದು ಕಾರ್ಯನಿರ್ವಹಣೆ: ಬಿ.ವೈ.ವಿಜಯೇಂದ್ರ

Update: 2023-11-23 06:58 GMT

ಬೆಂಗಳೂರು, ನ.23: ಪಕ್ಷದ ಹಿರಿಯರು ಏನೇ ಹೇಳಿಕೆ ಕೊಟ್ಟರೂ ಅದನ್ನು ಗಂಭೀರವಾಗಿ ಪರಿಗಣಿಸುವೆ. ಅವರೆಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವೆ. ಯಾರು ಏನೇ ಹೇಳಿಕೆ ಕೊಟ್ಟರೂ ಅದನ್ನು ಅಪಾರ್ಥ ಮಾಡಿಕೊಳ್ಳದೆ, ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ರಾಜ್ಯಾಧ್ಯಕ್ಷನಾಗಿ ಕೆಲಸ ಮಾಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರನ್ನು ಸದಾಶಿವ ನಗರದ ಅವರ ನಿವಾಸದಲ್ಲಿಂದು ಭೇಟಿಯಾದ ನಂತರ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡುತ್ತಿದ್ದರು.

ಇವತ್ತು ರಮೇಶ್ ಜಾರಕಿಹೊಳಿಯವರನ್ನು ಭೇಟಿ ಮಾಡಿ ಸುಮಾರು 30 ನಿಮಿಷ ಮಾತನಾಡಿದ್ದೇನೆ. ಕೆಲವು ನೋವುಗಳನ್ನೂ ತೋಡಿಕೊಂಡಿದ್ದಾರೆ. ನಾನು ಹೇಳಿದ ಮಾತುಗಳಿಂದ ಅವರಿಗೆ ಸಮಾಧಾನವಾಗಿದೆ ಎಂದುಕೊಂಡಿದ್ದೇನೆ' ಎಂದರು.

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗರಿಷ್ಠ ಸ್ಥಾನಗಳನ್ನು ಗೆಲ್ಲಲು ಒಟ್ಟಾಗಿ ಶ್ರಮಿಸೋಣ ಎಂದು ರಮೇಶ್ ಜಾರಕಿಹೊಳಿ ಅವರಿಗೆ ತಿಳಿಸಿದ್ದಾಗಿ ಹೇಳಿದರು. ರಮೇಶ್ ಜಾರಕಿಹೊಳಿಯವರ ನಡೆ ಬಗ್ಗೆ ಹಲವಾರು ರೀತಿಯ ಚರ್ಚೆಗಳು ನಡೆಯುತ್ತಿದ್ದವು. ಕೆಲವು ಸಂದರ್ಭದಲ್ಲಿ ಅವರು ಅಸಮಾಧಾನವನ್ನೂ ತೋಡಿಕೊಂಡಿದ್ದರು. ನಾನು ಬಿಜೆಪಿ ರಾಜ್ಯಾಧ್ಯಕ್ಷನಾದ ಮೇಲೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತಿದ್ದೇನೆ ಎಂದರು.

ನಮ್ಮದು ರಾಷ್ಟ್ರೀಯ ಪಕ್ಷ. ರಾಷ್ಟ್ರೀಯ ನಾಯಕರು ಈ ಜವಾಬ್ದಾರಿ ನೀಡಿದ್ದಾರೆ. ಯಾರೇನೇ ಹೇಳಿದರೂ ಅದನ್ನು ಆಶೀರ್ವಾದ ಎಂದು ಭಾವಿಸಿ, ಎಲ್ಲರ ಮನವೊಲಿಸಿ ಅವರ ಸಹಕಾರದೊಂದಿಗೆ ಮುನ್ನಡೆಯುತ್ತೇನೆ ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News