‘ಗಾಂಧೀಜಿ ಹೆಸರಿಗೆ ಕತ್ತರಿ’ | ಬಿಜೆಪಿಯ ಅಂತಿಮ ದಿನಗಳು ಪ್ರಾರಂಭವಾಗಿದೆ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (Photo:X/@DKShivakumar)
ಬೆಂಗಳೂರು: ಹುಟ್ಟಿದ ಸೂರ್ಯ ಮುಳುಗಲೇ ಬೇಕು. ಮಹಾತ್ಮ ಗಾಂಧಿ ಅವರ ಹೆಸರನ್ನು ತೆಗೆಯುವುದರ ಮೂಲಕ ಕೇಂದ್ರ ಬಿಜೆಪಿ ಸಡಿಕಾರದ ಕೊನೆಯ ದಿನಗಳು ಪ್ರಾರಂಭವಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಸೋಮವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಾಂವಿಧಾನಿಕವಾಗಿ ಕಾಂಗ್ರೆಸ್ ಪಕ್ಷ ನೀಡಿದ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಕಾರ್ಯಕ್ರಮವನ್ನು ಬಿಜೆಪಿ ಮುಟ್ಟುವ ಧೈರ್ಯ ಮಾಡುತ್ತದೆ ಎಂದುಕೊಂಡಿರಲಿಲ್ಲ. ಆದರೆ ಈಗ ಮನರೇಗಾ ಹೆಸರನ್ನು ಬದಲಾವಣೆ ಮಾಡಿರುವುದು ನೋಡಿದರೆ ಬಿಜೆಪಿಯ ಅಂತ್ಯ ಪ್ರಾರಂಭವಾಗಿದೆ ಎಂದು ನನಗೆ ಅನಿಸುತ್ತಿದೆ ಎಂದರು.
ಬಡವರಿಗೆ ಕೊಟ್ಟ ಕಾರ್ಯಕ್ರಮದ ಕುತ್ತಿಗೆ ಹಿಸುಕುವ ಕೆಲಸ ಮಾಡಲಾಗುತ್ತಿದೆ. ದೇಶದ ಬಡಜನತೆಗೆ ಎಸಗುತ್ತಿರುವ ದ್ರೋಹವಿದು. ಇದಕ್ಕಿಂತ ದೊಡ್ಡ ಅವಮಾನವಿಲ್ಲ. ಡಿ.27 ರಂದು ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ಮುಂದಿನ ಹೋರಾಟದ ಬಗ್ಗೆ ತೀರ್ಮಾನ ಮಾಡಲಾಗುತ್ತದೆ. ಹೆಸರು ಬದಲಾವಣೆ ಹಿಂಪಡೆಯುವ ತನಕ ಪಂಚಾಯಿತಿಯಿಂದ ಪಾರ್ಲಿಮೆಂಟ್ ತನಕ ಹೋರಾಟ ರೂಪಿಸಲಾಗುವುದು ಎಂದು ಶಿವಕುಮಾರ್ ಹೇಳಿದರು.
ಅತ್ಯುತ್ತಮ ಯೋಜನೆಯನ್ನು ಕೊಲೆ, ಸಮಾಧಿ ಮಾಡಲಾಗಿದೆ: ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ದಿಲ್ಲಿಯಲ್ಲಿ ಮಂಗಳವಾರ ಸಭೆ ಕರೆದಿದ್ದಾರೆ. ಅಲ್ಲಿ ಇದರ ಬಗ್ಗೆ ಚರ್ಚೆ ನಡೆಸಲಾಗುವುದು. ಕೇಂದ್ರ ಸರಕಾರ ಹೇಳಿದ ಅನುಪಾತದಲ್ಲಿ ಯಾವ ರಾಜ್ಯ ಸರಕಾರವೂ ಹಣ ನೀಡಲು ಸಾಧ್ಯವಿಲ್ಲ. ಈ ರೀತಿ ಆದರೆ ಕಾರ್ಯಕ್ರಮ ಸತ್ತು ಹೋದಂತೆ. ಇದನ್ನು ಸಮಾಧಿ ಮಾಡಲಾಗಿದೆ. ಕೊಲೆ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಟೀಕಿಸಿದರು.
ಸರಕಾರ ಮತ್ತು ಪಕ್ಷ ಒಟ್ಟಾಗಿ ಹೋರಾಡಲಿದೆ: ಸರಕಾರ ಮತ್ತು ಪಕ್ಷ ಒಟ್ಟಾಗಿ ನರೇಗಾ ಯೋಜನೆಯ ವಿರುದ್ಧ ಕೇಂದ್ರ ಬಿಜೆಪಿ ಸರಕಾರ ತೆಗೆದುಕೊಂಡಿರುವ ತೀರ್ಮಾನ ವಿರೋಧಿಸಿ ಹೋರಾಟ ಮಾಡುತ್ತೇವೆ. ಪಂಚಾಯತಿಗೆ, ಮತದಾರರಿಗೆ, ಉದ್ಯೋಗ ಖಾತ್ರಿ ಯೋಜನೆ ಫಲಾನುಭವಿಗಳಿಗೆ ನೀಡಿರುವ ಹಕ್ಕನ್ನು ಕಾಂಗ್ರೆಸ್ ಪಕ್ಷ ಕಾಪಾಡಲಿದೆ. ಇದರ ಬಗ್ಗೆ ರಾಜ್ಯದ ಎಲ್ಲ ಗ್ರಾಮಪಂಚಾಯತಿಗಳ ಮುಖಂಡರನ್ನು ಪಕ್ಷಾತೀತವಾಗಿ ಕರೆದು ಅವರ ಬಳಿ ಚರ್ಚೆ ನಡೆಸಲಾಗುವುದು ಎಂದು ಅವರು ಹೇಳಿದರು.
ಇಡೀ ಭಾರತದಲ್ಲಿಯೆ ನನ್ನ ಕನಕಪುರ ಕ್ಷೇತ್ರ ಅತಿ ಹೆಚ್ಚು ನರೇಗಾ ಕಾಮಗಾರಿಗಳನ್ನು ನಡೆಸಿದ ಕ್ಷೇತ್ರ. ಇಲ್ಲಿ ಅವ್ಯವಹಾರ ನಡೆದಿದೆ ಎಂದು ಕೇಂದ್ರ ಬಿಜೆಪಿ ಸರಕಾರ ತನಿಖಾ ತಂಡವನ್ನು ಕಳುಹಿಸಿತು. ಹತ್ತಾರು ನಿಯೋಗ ಬಂದಿತು. 250-300 ಕೋಟಿ ರೂಪಾಯಿ ಕೆಲಸವನ್ನು ನರೇಗಾ ಮೂಲಕ ಮಾಡಲಾಗಿತ್ತು ಎಂದು ಶಿವಕುಮಾರ್ ತಿಳಿಸಿದರು.
50 ಸಾವಿರ ದನದ ಕೊಟ್ಟಿಗೆಗಳನ್ನು ಕಟ್ಟಲಾಗಿತ್ತು. ಶಾಲಾ ಕಟ್ಟಡ, ಜಮೀನು ಮಟ್ಟ ಮಾಡುವುದು, ಕೃಷಿ ಹೊಂಡ ನಿರ್ಮಾಣ, ನೂರಾರು ಚೆಕ್ ಡ್ಯಾಂಗಳನ್ನು ನಿರ್ಮಾಣ ಮಾಡಲಾಯಿತು. ಇಲ್ಲಿನ ಕೆಲಸಗಳನ್ನು ನೋಡಿ ನನಗೆ ಎಲ್ಲಿ ಪ್ರಶಸ್ತಿ ನೀಡಬೇಕಾಗುತ್ತದೊ ಎಂದು ಕ್ಷೇತ್ರದ ತಾಲೂಕು ಪಂಚಾಯತಿ ಅಧ್ಯಕ್ಷರಿಗೆ ಪ್ರಶಸ್ತಿ ನೀಡಿದರು ಎಂದು ಅವರು ಹೇಳಿದರು.
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಯಾವುದೇ ಎಫ್ಐಆರ್ ಇಲ್ಲದೆ ಈ.ಡಿ ಈ ಪ್ರಕರಣವನ್ನು ಹೇಗೆ ಕೈಗೆತ್ತಿಕೊಂಡಿತು. ನಮ್ಮ ಮೇಲೂ ಈ.ಡಿ ಬೇಕಾದಷ್ಟು ಪ್ರಕರಣಗಳನ್ನು ದಾಖಲಿಸಿತ್ತು. ಕೊನೆಗೆ ಏನಾಯಿತು? ಜೈಲಿಗೆ ಕಳುಹಿಸಿದರು. ಸೋನಿಯಾಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೂ ಇದೇ ರೀತಿ ಮಾಡಲು ಹೊರಟರು ಆದರೆ ಧೈರ್ಯ ಸಾಲದೆ ಚಾರ್ಜ್ ಶೀಟ್ ಹಾಕಿದರು. ನ್ಯಾಯಾಲಯ ಇದನ್ನು ತಿರಸ್ಕರಿಸಿತು ಎಂದು ಅವರು ತಿಳಿಸಿದರು.
ನೋಟಿಸ್ ವಿರುದ್ಧ ಮೇಲ್ಮನವಿ: ನನಗೂ ದಿಲ್ಲಿ ಪೊಲೀಸರು ನೋಟಿಸ್ ನೀಡಿದ್ದರು. ಇದರ ವಿರುದ್ಧ ಮೇಲ್ಮನವಿ ಸಲ್ಲಿಸಲಾಗುವುದು. ನೋಟಿಸ್ ಗೆ ಉತ್ತರ ನೀಡಲು ನಾಳೆ (ಮಂಗಳವಾರ) ದಿಲ್ಲಿಗೆ ತೆರಳುತ್ತೇನೆ ಎಂದು ಶಿವಕುಮಾರ್ ಹೇಳಿದರು.
ಪಕ್ಷಕ್ಕೆ ಹಾಗು ಪಕ್ಷದ ಕಾರ್ಯಕ್ರಮಗಳಿಗೆ ಹಣ ನೀಡದೆ ಇನ್ನು ಯಾವ ಕೆಲಸಗಳಿಗೆ, ಇನ್ಯಾರಿಗೆ ಹಣ ನೀಡಬೇಕು. ಎಲ್ಲ ಶಾಸಕರಿಂದಲೂ ಹಣ ಸಂಗ್ರಹ ಮಾಡಲಾಗುತ್ತಿದೆ. ಎಸ್.ಎಸ್.ಮಲ್ಲಿಕಾರ್ಜುನ್ ಅವರ ಸಂಬಂಧಿಕರು 5 ಕೋಟಿ ರೂಪಾಯಿ ಹಣ ನೀಡಿದ್ದಾರೆ. ನಾವು ಏನು ತಪ್ಪು ಮಾಡಿಲ್ಲ. ನಾವು ದುಡಿದ ಹಣವನ್ನೇ ನೀಡಿದ್ದೇವೆ. ಕಪ್ಪು ಹಣ ನೀಡಿಲ್ಲ. ಸ್ವಂತ ಹಣದಿಂದ ದೇಣಿಗೆ ನೀಡಿದ್ದೇವೆ ಎಂದು ಅವರು ತಿಳಿಸಿದರು.
ಬಿಜೆಪಿಯವರು ಕೋಟ್ಯಂತರ ರೂಪಾಯಿಯನ್ನು ದೇಣಿಗೆ ಪಡೆದಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಎಷ್ಟು ಕೋಟಿ ಹಣವನ್ನು ಚುನಾವಣಾ ಬಾಂಡ್ ಮೂಲಕ ಪಡೆದಿದ್ದಾರೆ ಎಂದು ಪತ್ರಿಕೆಗಳಲ್ಲಿ ಬಂದಿದೆ. ಸೆಕ್ಷನ್ 25 ರ ಅಡಿ ನ್ಯಾಷನಲ್ ಹೆರಾಲ್ಡ್ ಸಂಸ್ಥೆಯನ್ನು ನೋಂದಣಿ ಮಾಡಿಸಲಾಗಿದೆ ಎಂದು ಅವರು ತಿಳಿಸಿದರು.
ಕಾಂಗ್ರೆಸ್ ಪಕ್ಷ ಈ ಸಂಸ್ಥೆಗೆ ಸಾಲ ನೀಡಿತು. ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ಹೆಸರಿಗೆ ಷೇರುಗಳು ವರ್ಗಾವಣೆಯಾಗುತ್ತವೆ. ನಾನು ಕೂಡ ಕಾಂಗ್ರೆಸ್ ಭವನದ ಟ್ರಸ್ಟಿ. ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಇದ್ದೇನೆ ಎಂದರೆ ನನ್ನ ಹೆಸರಿಗೆ ಆಸ್ತಿಗಳು ನೋಂದಾಯಿಸಲ್ಪಡುತ್ತವೆ. ಬೇರೆಯವರು ಬಂದಾಗ ಅವರ ಹೆಸರಿಗೆ ಹೋಗುತ್ತದೆ ಎಂದು ಶಿವಕುಮಾರ್ ಹೇಳಿದರು.