ಮಲ್ಪೆಯ ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್ ವಂಚನೆ ಹಿಂದೆ ಬಿಜೆಪಿ ಶಾಸಕ ಯಶ್ಪಾಲ್ ಸುವರ್ಣ ಪಾತ್ರವಿದೆ: ಬಿ.ಕೆ. ಹರಿಪ್ರಸಾದ್ ಆರೋಪ
► "ಬ್ಯಾಂಕ್ ಮ್ಯಾನೇಜರ್ ಸುಬ್ಬಣ್ಣ ಅವರದ್ದು ಆತ್ಮಹತ್ಯೆ ಅಲ್ಲ, ಅದು ಕೊಲೆ" ►ಎಸ್ಐಟಿ ತನಿಖೆ ಬಗ್ಗೆ ಚರ್ಚೆ: ಸಚಿವ ಬಸವರಾಜ ರಾಯರೆಡ್ಡಿ ಭರವಸೆ
ಬಿ.ಕೆ. ಹರಿಪ್ರಸಾದ್ / ಯಶ್ಪಾಲ್ ಸುವರ್ಣ
ಬೆಂಗಳೂರು: ಉಡುಪಿಯ ಮಲ್ಪೆಯ ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡವನ್ನು(ಎಸ್ಐಟಿ) ರಚನೆ ಮಾಡುವ ಬಗ್ಗೆ ಸಂಬಂಧಪಟ್ಟ ಸಚಿವರೊಂದಿಗೆ ಮಾತನಾಡಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಭರವಸೆ ನೀಡಿದ್ದಾರೆ.
ಬುಧವಾರ ಪರಿಷತ್ತಿನಲ್ಲಿ ಕಾಂಗ್ರೆಸ್ನ ಸದಸ್ಯ ಬಿ.ಕೆ.ಹರಿಪ್ರಸಾದ್ ನಿಯಮ-330ರಡಿ ಪ್ರಸ್ತಾಪಿಸಿದ ಸೂಚನೆಗೆ ಉತ್ತರಿಸಿದ ಅವರು, ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ದೂರುಗಳು ಸಲ್ಲಿಕೆಯಾಗಿದ್ದು, ಮೇಲ್ನೊಟಕ್ಕೆ ಅಕ್ರಮ ನಡೆದಿರುವುದು ಗೊತ್ತಾಗಿದೆ. ವಂಚನೆ ಹಾಗೂ ಮ್ಯಾನೇಜರ್ ಸಾವಿನ ಪ್ರಕರಣವನ್ನು ಎಸ್ಐಟಿಗೆ ವಹಿಸುವ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ಆರಂಭಕ್ಕೆ ವಿಷಯ ಪ್ರಸ್ತಾಪಿಸಿದ ಬಿ.ಕೆ.ಹರಿಪ್ರಸಾದ್, ಉಡುಪಿಯ ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್ನಲ್ಲಿ ಸಾಲದ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ವಂಚನೆ ನಡೆದಿದೆ. ಅಲ್ಲದೆ ಮ್ಯಾನೇಜರ್ ಆಗಿದ್ದ ಸುಬ್ಬಣ್ಣ ಎಂಬುವರ ಕೊಲೆಯಾಗಿದೆ. ಕೃತ್ಯದ ಹಿಂದೆ ಬ್ಯಾಂಕ್ ಅಧ್ಯಕ್ಷ ಹಾಗೂ ಬಿಜೆಪಿ ಶಾಸಕರಾಗಿರುವ ಯಶ್ಪಾಲ್ ಸುವರ್ಣ ಅವರ ಪಾತ್ರವಿದೆ. ಹೀಗಾಗಿ ತನಿಖೆಯನ್ನು ಎಸ್ಐಟಿಗೆ ವಹಿಸಬೇಕು ಎಂದು ಆಗ್ರಹಿಸಿದರು.
ಉಡುಪಿಯ ಇತಿಹಾಸದಲ್ಲಿ ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್ನಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ಫಲಾನುಭವಿಗಳಿಗೆ 20 ಸಾವಿರ ಸಾಲ ನೀಡಿ ಅವರಿಂದ ದಾಖಲಾತಿ ಪಡೆದು 2 ಲಕ್ಷ ರೂ. ಸಾಲ ನೀಡಿರುವ ರೀತಿ ಸಾಲದ ಪತ್ರ ಸೃಷ್ಟಿಸಿದ್ದಾರೆ. ಈ ರೀತಿ 25 ಕೋಟಿ ರೂ.ಗೂ ಅಧಿಕ ಅಕ್ರಮವಾಗಿ ಸಾಲ ಪಡೆಯಲಾಗಿದೆ ಎಂದು ಅವರು ಆರೋಪಿಸಿದರು.
ವಂಚನೆ ಬೆಳಕಿಗೆ ಬರುತ್ತಿದ್ದಂತೆ ಮಲ್ಪೆಯ ಬ್ಯಾಂಕ್ ಶಾಖೆಯ ವ್ಯವಸ್ಥಾಪಕ ಸುಬ್ಬಣ್ಣ ಅವರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. ಇದು ಆತ್ಮಹತ್ಯೆಯಲ್ಲ. ಇದೊಂದು ವ್ಯವಸ್ಥಿತ ಕೊಲೆ. ಇದರ ಹಿಂದೆ ಸ್ಥಳೀಯ ಶಾಸಕರ ಕೈವಾಡವಿದೆ. ಸಮಗ್ರ ತನಿಖೆಗಾಗಿ ಎಸ್ಐಟಿ ರಚಿಸಬೇಕು ಹಾಗೂ ಬ್ಯಾಂಕ್ಗೆ ಕೂಡಲೇ ಆಡಳಿತಾಧಿಕಾರಿಯನ್ನು ನೇಮಿಸಬೇಕು ಎಂದು ಸರಕಾರಕ್ಕೆ ಒತ್ತಾಯಿಸಿದರು.
ಸಚಿವರ ಪರವಾಗಿ ಉತ್ತರಿಸಿದ ಸಭಾನಾಯಕ ಡಾ.ಯತೀಂದ್ರ ಸಿದ್ದರಾಮಯ್ಯ, ನಕಲಿ ದಾಖಲಾತಿ ಸೃಷ್ಟಿಸಿ ಸಾಲ ಪಡೆದವರ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಲಾಗುವುದು. ಬ್ಯಾಂಕ್ ವ್ಯವಹಾರ ಕುರಿತು ನಿಗಾ ವಹಿಸಲಾಗುವುದು ಎಂದು ಹೇಳಿದರು.