ಸುರ್ಜೇವಾಲ ಅವರಿಗೆ ಹೇಳಬೇಕಿರುವುದನ್ನು ಹೇಳಿದ್ದೇನೆ : ಬಿ.ಆರ್.ಪಾಟೀಲ್
ಬಿ.ಆರ್.ಪಾಟೀಲ್
ಬೆಂಗಳೂರು: ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರಿಗೆ ಏನು ಹೇಳಬೇಕೋ ಅದನ್ನು ನಾನು ಹೇಳಿದ್ದೇನೆ. ಮುಂದಿನ ತೀಮಾರ್ನ ಅವರಿಗೆ ಬಿಟ್ಟಿದ್ದು ಎಂದು ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಹಾಗೂ ಶಾಸಕ ಬಿ.ಆರ್.ಪಾಟೀಲ್ ತಿಳಿಸಿದರು.
ಸೋಮವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ರಣದೀಪ್ ಸಿಂಗ್ ಸುರ್ಜೇವಾಲ ಅವರೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುದೀರ್ಘವಾಗಿ ಸುರ್ಜೇವಾಲ ಅವರ ಜೊತೆ ಚರ್ಚೆ ಮಾಡಿದ್ದೇನೆ. ನಾನು ಹೇಳಿದ ಎಲ್ಲ ವಿಚಾರಗಳನ್ನು ಅವರು ಗಮನಕ್ಕೆ ತೆಗೆದುಕೊಂಡಿದ್ದಾರೆ ಎಂದು ಹೇಳಿದರು.
ರಾಜೀವ್ ಗಾಂಧಿ ವಸತಿ ನಿಗಮದಲ್ಲಿ ಹಣ ಕೊಟ್ಟವರಿಗೆ ಮಾತ್ರ ಮನೆಗಳನ್ನು ಮಂಜೂರು ಮಾಡಲಾಗುತ್ತಿದೆ ಎಂದು ಬಿ.ಆರ್.ಪಾಟೀಲ್ ಬಹಿರಂಗವಾಗಿ ಆರೋಪ ಮಾಡಿದ್ದರು. ಇದರಿಂದಾಗಿ, ಸರಕಾರ ಹಾಗೂ ಪಕ್ಷಕ್ಕೆ ಮುಜುಗರ ಉಂಟಾಗಿತ್ತು. ಅಲ್ಲದೇ, ಶಾಸಕ ರಾಜು ಕಾಗೆ, ಎನ್.ವೈ.ಗೋಪಾಲಕೃಷ್ಣ ಸೇರಿದಂತೆ ಇನ್ನಿತರರು ಅಭಿವೃದ್ಧಿಗೆ ಅನುದಾನ ಲಭ್ಯವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದನ್ನು ಗಂಭೀರವಾಗಿ ಪರಿಗಣಿಸಿದ ಕಾಂಗ್ರೆಸ್ ಹೈಕಮಾಂಡ್, ಶಾಸಕರ ಅಹವಾಲು ಆಲಿಸಲು ಸುರ್ಜೇವಾಲರನ್ನು ಕಳುಹಿಸಿದೆ.