Budget Session 2026 | ಮಂಗಳೂರಿನಲ್ಲಿ ಹೈಕೋರ್ಟ್ ವಿಭಾಗೀಯ ಪೀಠ ಸ್ಥಾಪನೆಗೆ ಐವನ್ ಡಿಸೋಜಾ ಆಗ್ರಹ
ಬೆಂಗಳೂರು : ಕರಾವಳಿ ಭಾಗದ ಜನರಿಗೆ ಅನುಕೂಲವಾಗುವಂತೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಹೈಕೋರ್ಟ್ ವಿಭಾಗೀಯ ಪೀಠವನ್ನು ಸ್ಥಾಪನೆ ಮಾಡಬೇಕು ಎಂದು ಕಾಂಗ್ರೆಸ್ ಸದಸ್ಯ ಐವನ್ ಡಿಸೋಜಾ ಆಗ್ರಹಿಸಿದ್ದಾರೆ.
ಮಂಗಳವಾರ ವಿಧಾನ ಪರಿಷತ್ತಿನಲ್ಲಿ ‘2026-27ನೇ ಸಾಲಿನ ಆಯವ್ಯಯ ಅಂದಾಜುಗಳ’ ಕುರಿತಾಗಿ ನಡೆದ ಚರ್ಚೆ ವೇಳೆ ಮಾತನಾಡಿದ ಅವರು, ಕರಾವಳಿಯ ಜನರು ಹೈಕೋರ್ಟ್ ವಿಚಾರಣೆಗಳಿಗಾಗಿ ಸುಮಾರು 350 ಕಿ.ಮೀ. ದೂರ ಇರುವ ಬೆಂಗಳೂರಿಗೆ ಬರಬೇಕಾದ ಅನಿವಾರ್ಯತೆ ಇದೆ. ಹೀಗಾಗಿ ವಿಚಾರಣೆ ನಡೆಯುವ ಒಂದು ದಿನ ಮುಂಚಿತವಾಗಿ ಬರಬೇಕಾಗಿದೆ. ಸರಿಯಾದ ವಸತಿಯೂ ಇಲ್ಲದೆ, ವಕೀರನ್ನು ಭೇಟಿ ಮಾಡಿ ವಿಚಾರ ಮಾಡಲು ಸಮಯವೂ ದೊರೆಯುತ್ತಿಲ್ಲ. ಹೀಗಾಗಿ ಕರಾವಳಿ ಭಾಗಕ್ಕೆ ಒಂದು ಹೈಕೋರ್ಟ್ ವಿಭಾಗೀಯ ಪೀಠ ಬೇಕಾಗಿದೆ ಎಂದರು.
ಕರಾವಳಿ ಕರ್ನಾಟಕದಲ್ಲಿ ಹೈಕೋರ್ಟ್ ವಿಭಾಗೀಯ ಪೀಠ ಸ್ಥಾಪನೆಯಾದರೆ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಜನರಿಗೆ ಅನುಕೂಲವಾಗುತ್ತದೆ. ಈ ಬಗ್ಗೆ ಮುಖ್ಯಮಂತ್ರಿ ಮತ್ತು ಸರಕಾರ ಮುಖ್ಯ ಕಾರ್ಯದರ್ಶಿಗಳೊಂದಿಗೆ ಚರ್ಚೆ ಮಾಡಲಾಗಿದೆ. ಈಗಾಗಲೇ ಕಲಬುರಗಿ ಮತ್ತು ಧಾರವಾಡದಲ್ಲಿ ಹೈಕೋರ್ಟ್ ವಿಭಾಗೀಯ ಪೀಠವನ್ನು ಸ್ಥಾಪನೆ ಮಾಡಿ, ಅಲ್ಲಿನ ಜನರಿಗೆ ಅನುಕೂಲ ಮಾಡಲಾಗಿದೆ. ಕಾನೂನನ್ನು ಮನೆ ಬಾಗಿಲಿಗೆ ತಲುಪಿಸುವುದು ಸರಕಾರ ಉದ್ದೇಶವೂ ಆಗಿದ್ದು, ಅದರ ಭಾಗವಾಗಿ ಮಂಗಳೂರಿನಲ್ಲಿ ಹೈಕೋರ್ಟ್ ವಿಭಾಗೀಯ ಪೀಠವನ್ನು ಸ್ಥಾಪನೆ ಮಾಡಬೇಕು ಎಂದು ಅವರು ಹೇಳಿದರು.
ಇನ್ನು ಮಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ 200 ಕೋಟಿ ರೂ.ಗಳ ಅನುದಾನವನ್ನು ನೀಡಬೇಕು. ಇದರಿಂದ ನಗರದ ರಸ್ತೆ ಸೇರಿದಂತೆ ಮೂಲಭೂತ ಸೌಕರ್ಯಗಳ ಅಭವೃದ್ಧಿಯನ್ನು ಮಾಡಬೇಕು. ಹಾಗೆಯೇ ಕರಾವಳಿಯ ಪ್ರವಾಸೋದ್ಯಮದ ಅಭಿವೃದ್ಧಿಗೆ ಸರಕಾರವು ಯೋಜನೆಗಳನ್ನು ಸಿದ್ದಪಡಿಸಿ ಅನುಷ್ಟಾನ ಮಾಡಬೇಕು ಎಂದು ಅವರು ಒತ್ತಾಯಿಸಿದರು.