15 ಸಾವಿರ ಶಿಕ್ಷಕರ ನೇಮಕ, ರಾಜ್ಯಪಾಲರ ಕಚೇರಿಗೆ 29 ಕೋಟಿ ರೂ.ನೀಡಲು ಸಂಪುಟ ಸಭೆ ಅನುಮೋದನೆ

Update: 2026-07-19 21:39 IST

ಬೆಂಗಳೂರು: ರಾಜ್ಯದ ಸರಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳ ಭರ್ತಿಗೆ ರಾಜ್ಯ ಸರಕಾರ ಮುಂದಾಗಿದ್ದು, ಈ ನಿಟ್ಟಿನಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಕೈಗೆತ್ತಿಕೊಳ್ಳಲು ಹಾಗೂ ಬೆಂಗಳೂರಿನ ಲೋಕಭವನ ಆವರಣದಲ್ಲಿ ರಾಜ್ಯಪಾಲರ ಆಡಳಿತ ಕಚೇರಿ, ವಿಶೇಷ ಕಾರ್ಯದರ್ಶಿಗಳ ವಸತಿ ಗೃಹ ಮತ್ತು ಒಳಾಂಗಣ ಕ್ರೀಡಾಂಗಣ ನಿರ್ಮಾಣ ಕಾಮಗಾರಿಗಳನ್ನು 27 ಕೋಟಿ ರೂ.ಗಳಲ್ಲಿ ಕೈಗೊಳ್ಳಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ರವಿವಾರ ವಿಧಾನಸೌಧದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಸಾರ್ವಜನಿಕ ಶಿಕ್ಷಣ ಇಲಾಖೆ) ಕೆಲವು ಬೋಧನಾ ಹುದ್ದೆಗಳಿಗೆ ನೇಮಕಾತಿ ನಿಯಮ-2026ರ ಕರಡು ಅಧಿಸೂಚನೆ ಅನ್ನು ಈಗಾಗಲೇ ಹೊರಡಿಸಿರುವ ಕ್ರಮಕ್ಕೆ ಘಟನೋತ್ತರ ಅನುಮೋದನೆ ನೀಡಲಾಗಿದ್ದು, ಅದರಂತೆ 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯಲಿದೆ ಎಂದು ಪ್ರಕಟಿಸಿದರು.

ಅದೇ ರೀತಿ, ರೈತರಿಗೆ ಕೃಷಿ, ತೋಟಗಾರಿಕೆ, ಪಶು ವೈದ್ಯಕೀಯ ಮತ್ತು ಇತರೆ ಸಂಬಂಧಿತ ಬೆಳೆ ಮೇಲ್ವಿಚಾರಣೆ ಮತ್ತು ಸಂಯೋಜಿತ ಡಿಜಿಟಲ್ ಸಲಹೆಗಳು, ಬೆಳೆ ಸಮೀಕ್ಷೆಯನ್ನು ಕೈಗೊಳ್ಳುವ ಕರ್ನಾಟಕ ಅಗ್ರಿಟೆಕ್ ಮಿಷನ್-2026 ಅನ್ನು 35.99 ಕೋಟಿ ರೂ.,ಗಳಲ್ಲಿ ಅನುಷ್ಠಾನಗೊಳಿಸಲು ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಹೊಸದಾಗಿ ಮಂಜೂರು ಆಗಿರುವ ವಿದ್ಯಾರ್ಥಿ ನಿಲಯಗಳಿಗೆ 7,500 ಟೂ-ಟಯರ್ ಕಾಟ್, 15 ಸಾವಿರ ತೆಂಗಿನ ನಾರಿನ ಹಾಸಿಗೆಗಳನ್ನು ಒಟ್ಟು 29.98 ಕೋಟಿ ರೂ.ಗಳಲ್ಲಿ ಖರೀದಿಸಲು ಅನುಮೋದನೆ ನೀಡಲಾಗಿದೆ ಎಂದರು.

ಅಲೆಮಾರಿ, ಅರೆ ಅಲೆಮಾರಿ ಕಾಲೋನಿಗಳ ಸಮಗ್ರ ಅಭಿವೃದ್ಧಿಗಾಗಿ ಮೂಲಭೂತ ಸೌಕರ್ಯಗಳನ್ನು ಒಳಗೊಂಡಂತೆ ಮನೆಗಳನ್ನು ನಿರ್ಮಿಸುವ ಕುರಿತು 10ಲಕ್ಷ ರೂ.ಗಳ ಘಟಕ ವೆಚ್ಚದಲ್ಲಿ 380ಚದರ ಅಡಿಗಳ ವಿಸ್ತೀರ್ಣದ ಮನೆಗಳ ನಿರ್ಮಾಣ ಮಾಡಲಾಗುವುದು. ರಾಯಚೂರಿನಲ್ಲಿ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯಡಿ ಎಐ ಉತ್ಕೃಷ್ಯತಾ ಕೇಂದ್ರವನ್ನು 5ವರ್ಷಗಳ ಅವಧಿಯಲ್ಲಿ ಸ್ಥಾಪಿಸಲು ಒಟ್ಟು 12 ಕೋಟಿ ರೂ., ಜತೆಗೆ, ಬೆಂಗಳೂರಿನ ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕಾಲೇಜುಗಳ ಎಂಬಿಬಿಎಸ್ ಮತ್ತು ಬಿಡಿಎಸ್ ವಿದ್ಯಾರ್ಥಿಗಳಿಗೆ ಬಾಲಕರ ವಸತಿ ಕಟ್ಟಡ ನಿರ್ಮಾಣ ಕಾಮಗಾರಿಯನ್ನು 83.50 ಕೋಟಿ ರೂ. ಗಳಲ್ಲಿ ಕೈಗೊಳ್ಳಲು ಅನುಮೋದಿಸಲಾಗಿದೆ ಎಂದು ಹೇಳಿದರು.

2025-26ನೆ ಸಾಲಿನ ಮುಖ್ಯಮಂತ್ರಿಗಳ ಮೂಲಭೂತ ಸೌಕರ್ಯ ಅಭಿವೃದ್ಧಿ ಯೋಜನೆಯಡಿ ಕಲಬುರಗಿ ಜಿಲ್ಲೆಯಲ್ಲಿ ರಾಜ್ಯ ಹೆದ್ದಾರಿ ಎಸ್‍ಎಚ್-156 ಹಾಗೂ ಜಿಲ್ಲಾ ಮುಖ್ಯ ರಸ್ತೆ ಅಭಿವೃದ್ಧಿ ಪಡಿಸುವ ಕಾಮಗಾರಿಗಳನ್ನು 25 ಕೋಟಿ ರೂ.ಗಳಲ್ಲಿ ಕೈಗೊಳ್ಳಲಾಗುವುದು. ಕಪಿಲಾ ನದಿಗೆ ನಂಜನಗೂಡು ನಗರ ವ್ಯಾಪ್ತಿಯ ಮಲಿನ ನೀರು ಸೇರಿದಂತೆ ಪ್ರವಾಹವನ್ನು ತಡೆಯಲು ಅಭಿವೃದ್ಧಿ ಕಾಮಗಾರಿಗಳನ್ನು 70 ಕೋಟಿ ರೂ. ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ಎಂದು ಡಿ.ಕೆ.ಶಿವಕುಮಾರ್ ಮಾಹಿತಿ ನೀಡಿದರು.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವಗೊಂಡನಹಳ್ಳಿ ಹೋಬಳಿ ನೀರಾವರಿ ಜಲಮಂಡಳಿಯ 116 ಕೆರೆಗಳು ಹಾಗೂ ಗ್ರಾಯತ್ರಿ ಜಲಾಶಯದ ಕುಡಿಯುವ ನೀರು ತುಂಬಿಸುವ ಹಾಗೂ ಅಂತರ್ಜಲ ಅಭಿವೃದ್ಧಿ ಪಡಿಸುವ 244 ಕೋಟಿ ರೂ., ಮೊತ್ತದ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ ಎಂದ ಅವರು, ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷರನ್ನು ಅಮಾನತ್ತಿನಲ್ಲಿರಿಸಿರುವ ರಾಜ್ಯಪಾಲರ ಆದೇಶವನ್ನು ಸಂಪುಟ ಅನುಮೋದಿಸಿದೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಯು.ಟಿ.ಖಾದರ್ ಸೇರಿದಂತೆ ಪ್ರಮುಖರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News