‘ಸಂಪುಟ ವಿಸ್ತರಣೆ’ ರಾಹುಲ್ ಗಾಂಧಿ ನೇತೃತ್ವದಲ್ಲಿ ನಾಯಕರ ಸಭೆ : ಅಂತಿಮಗೊಳ್ಳದ ಪಟ್ಟಿ; ಬೆಂಗಳೂರಿಗೆ ಹಿಂದಿರುಗಿದ ಡಿಕೆಶಿ, ಸಿದ್ದರಾಮಯ್ಯ
ಬೆಂಗಳೂರು : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರಕಾರದ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಬಹುತೇಕ ಅಂತಿಮ ಹಂತಕ್ಕೆ ಬಂದಿದ್ದು, ಕೊನೆಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಜೊತೆ ರಾಜ್ಯ ನಾಯಕರು ಸಭೆ ನಡೆಸಿ ಚರ್ಚೆ ನಡೆಸಿದ್ದಾರೆ.
ಗುರುವಾರ ಸಂಜೆ ಹೊಸದಿಲ್ಲಿಯಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಡೆದ ಕಾಂಗ್ರೆಸ್ ವರಿಷ್ಠ ನಾಯಕರ ಸಭೆಯಲ್ಲಿ ರಾಹುಲ್ ಗಾಂಧಿ, ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರ ಜೊತೆ ಸಚಿವ ಸಂಪಟು ವಿಸ್ತರಣೆ ಕುರಿತು ಸಮಾಲೋಚನೆ ನಡೆಸಿದರು.
ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರಿಂದ ಸಚಿವ ಸ್ಥಾನದ ಆಕಾಂಕ್ಷಿಗಳ ಪಟ್ಟಿಯನ್ನು ರಾಹುಲ್ ಗಾಂಧಿ ಪಡೆದುಕೊಂಡಿದ್ದು, ರಾಜ್ಯ ನಾಯಕರೊಂದಿಗೆ ಚರ್ಚೆ ನಡೆಸಿದ ಬಳಿಕ, ಮಲ್ಲಿಕಾರ್ಜುನ ಖರ್ಗೆ, ವೇಣುಗೋಪಾಲ್, ಸುರ್ಜೆವಾಲ ಹಾಗೂ ಹರಿಪ್ರಸಾದ್ ಜೊತೆ ಪ್ರತ್ಯೇಕವಾಗಿ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ರಾಹುಲ್ ಗಾಂಧಿ ಜೊತೆ ಸಭೆ ನಡೆದಿದ್ದರೂ ಸಂಪುಟಕ್ಕೆ ಸೇರ್ಪಡೆಯಾಗುವವರು ಯಾರು? ಎಂಬ ಪ್ರಶ್ನೆಗೆ ಉತ್ತರ ಮಾತ್ರ ನಿಗೂಢವಾಗಿಯೆ ಇದೆ. ನೂತನ ಸಚಿವರ ಪಟ್ಟಿಯನ್ನು ಅಂತಿಮಗೊಳಿಸಿ, ರಾಜ್ಯಕ್ಕೆ ಕಳುಹಿಸಿಕೊಡುವುದಾಗಿ ರಾಹುಲ್ ಗಾಂಧಿ ತಿಳಿಸಿದ ಬೆನ್ನಲ್ಲೆ, ನಾಲ್ಕು ದಿನಗಳಿಂದ ದಿಲ್ಲಿಯಲ್ಲೆ ಬೀಡು ಬಿಟ್ಟಿದ್ದ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಗುರುವಾರ ರಾತ್ರಿಯೇ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಹಿಂದಿರುಗಿದ್ದಾರೆ.
ಆದರೆ, ಹರಿಪ್ರಸಾದ್ ಅವರನ್ನು ಹೊಸದಿಲ್ಲಿಯಲ್ಲೆ ಇರುವಂತೆ ರಾಹುಲ್ ಗಾಂಧಿ ಸೂಚಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಯಾವುದೆ ಕ್ಷಣದಲ್ಲಿ ನೂತನ ಸಚಿವರ ಪಟ್ಟಿ ಅಂತಿಮವಾಗುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಇದರ ನಡುವೆ ಕಾವೇರಿ ವಿವಾದ ಹಿನ್ನೆಲೆಯಲ್ಲಿ ರವಿವಾರ ಮುಖ್ಯಮಂತ್ರಿ ಸರ್ವಪಕ್ಷಗಳ ಸಭೆ ಕರೆದಿದ್ದಾರೆ.
ಈ ಹಿನ್ನೆಲೆಯಲ್ಲಿ ಬಹುತೇಕ ರವಿವಾರ ರಾತ್ರಿ ನೂತನ ಸಚಿವರ ಪಟ್ಟಿ ಅಂತಿಮಗೊಳ್ಳುವ ಸಾಧ್ಯತೆಗಳಿದ್ದು, ಸೋಮವಾರ ಪದಗ್ರಹಣ ಸಮಾರಂಭ ನಡೆಯಬಹುದು ಎಂದು ಹೇಳಲಾಗುತ್ತಿದೆ.
ಸಚಿವ ಸಂಪುಟ ವಿಸ್ತರಣೆ ಕುರಿತು ವರಿಷ್ಠರೊಂದಿಗೆ ಚರ್ಚಿಸಲು ರಾಜ್ಯ ನಾಯಕರು, ಸೋಮವಾರ (ಜು.27) ದಿಲ್ಲಿಗೆ ತೆರಳಿದ್ದರು. ಆದರೆ, ಸೋಮವಾರ, ಮಂಗಳವಾರ ನಿಗದಿಯಾಗಿದ್ದ ಸಭೆ ಬುಧವಾರಕ್ಕೆ ಮುಂದೂಡಲಾಗಿತ್ತು. ಆದರೆ, ಬುಧವಾರವು ಸಭೆ ನಡೆಯಲಿಲ್ಲ. ಅಂತಿಮವಾಗಿ ಗುರುವಾರ ಸಂಜೆ ಕಾಂಗ್ರೆಸ್ ಹೈಕಮಾಂಡ್ ನಾಯಕರು ಸಭೆ ನಡೆಸಿ ಮಾತುಕತೆ ನಡೆಸಿದರು.