‘ಸಚಿವ ಸಂಪುಟ ವಿಸ್ತರಣೆ’ ಮುಂದುವರೆದ ಗೊಂದಲ | ಹೆಸರುಗಳನ್ನು ಅಂತಿಮಗೊಳಿಸದ ಹೈಕಮಾಂಡ್; ಆಕಾಂಕ್ಷಿಗಳಲ್ಲಿ ತಳಮಳ
ಬೆಂಗಳೂರು : ಬಹುನಿರೀಕ್ಷಿತ ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರದಲ್ಲಿ ಇನ್ನೂ ಗೊಂದಲಗಳು ಮುಂದುವರೆದಿದ್ದು, ಕಾಂಗ್ರೆಸ್ ಹೈಕಮಾಂಡ್ ನಾಯಕರು ಸಂಪುಟ ಸೇರ್ಪಡೆಯಾಗುವವರ ಹೆಸರುಗಳನ್ನು ಅಂತಿಮಗೊಳಿಸದಿರುವುದರಿಂದ ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ತಳಮಳ ಹೆಚ್ಚಾಗಿದೆ.
ಹೊಸದಿಲ್ಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಉಪಸ್ಥಿತಿಯಲ್ಲಿ ಗುರುವಾರ ರಾತ್ರಿ ನಡೆದ ಹೈಕಮಾಂಡ್ ನಾಯಕರ ಸಭೆಯಲ್ಲಿ ರವಿವಾರ ನೂತನ ಸಚಿವರ ಹೆಸರುಗಳನ್ನು ಅಂತಿಮಗೊಳಿಸಿ ಕಳುಹಿಸಿಕೊಡುವುದಾಗಿ ರಾಜ್ಯ ನಾಯಕರಿಗೆ ತಿಳಿಸಲಾಗಿತ್ತು.
ಆದರೆ, ಕೇರಳ ಪ್ರವಾಸದಲ್ಲಿರುವ ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅಥವಾ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಬೆಂಗಳೂರಿಗೆ ಭೇಟಿ ನೀಡುವ ಕುರಿತು ಯಾವುದೆ ಮಾಹಿತಿ ಇಲ್ಲದಿರುವುದರಿಂದ ಆಕಾಂಕ್ಷಿಗಳು, ಸೋಮವಾರ ಸಚಿವ ಸಂಪುಟ ವಿಸ್ತರಣೆಯಾಗಲಿದೆಯೊ ಇಲ್ಲವೋ ಎಂಬ ಗೊಂದಲಕ್ಕೆ ಸಿಲುಕಿದ್ದಾರೆ.
ಇದರಿಂದಾಗಿ, ಸೋಮವಾರ ತಮ್ಮ ಬೆಂಬಲಿಗರನ್ನು ಬೆಂಗಳೂರಿಗೆ ಕರೆಸಿಕೊಳ್ಳಲು ಉತ್ಸುಕರಾಗಿದ್ದ ಆಕಾಂಕ್ಷಿಗಳು ಮೌನಕ್ಕೆ ಶರಣಾಗುವಂತೆ ಆಗಿದೆ. ರವಿವಾರ ಸಂಜೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಕರೆ ಮಾಡಿದ ಕಾಂಗ್ರೆಸ್ ಹೈಕಮಾಂಡ್ ನಾಯಕರು, ರಾಹುಲ್ ಗಾಂಧಿ ತಮಿಳುನಾಡು ಹಾಗೂ ಕೆ.ಸಿ.ವೇಣುಗೋಪಾಲ್ ಕೇರಳ ಪ್ರವಾಸದಲ್ಲಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಕುರಿತು ಎಐಸಿಸಿ ನಾಯಕರು ಮತ್ತೊಂದು ಸುತ್ತಿನ ಚರ್ಚೆ ನಡೆಸಬೇಕಿದ್ದು, ಸೋಮವಾರ ಬೆಳಗ್ಗೆ 10 ಗಂಟೆ ವೇಳೆಗೆ ನೂತನ ಸಚಿವರ ಹೆಸರುಗಳನ್ನು ಅಂತಿಮಗೊಳಿಸಿ ಪಟ್ಟಿ ಕಳುಹಿಸಿಕೊಡುವುದಾಗಿ ತಿಳಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ, ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಸಮುದಾಯ, ಸಾಮಾಜಿಕ ನ್ಯಾಯ, ಪ್ರಾದೇಶಿಕ ಸಮಾನತೆಯನ್ನು ಕಾಪಾಡುವುದನ್ನು ಪರಿಗಣಿಸಿ ಸಚಿವ ಸಂಪುಟಕ್ಕೆ ಯಾರನ್ನು ಸೇರಿಸಿಕೊಳ್ಳಬೇಕು ಎಂಬುದರ ಕುರಿತು ಹೈಕಮಾಂಡ್ ನಾಯಕರು ಅಂತಿಮ ಕಸರತ್ತು ನಡೆಸಲು ಮುಂದಾಗಿದ್ದಾರೆ. ಒಂದು ವೇಳೆ ಸೋಮವಾರವೂ ನೂತನ ಸಚಿವರ ಪಟ್ಟಿ ಪ್ರಕಟವಾಗದಿದ್ದರೆ, ಸಚಿವ ಸಂಪುಟ ವಿಸ್ತರಣೆ ಬುಧವಾರಕ್ಕೆ ಮುಂದೂಡುವ ಸಾಧ್ಯತೆಗಳಿವೆ.
ಮಲ್ಲಿಕಾರ್ಜುನ ಖರ್ಗೆ, ಕೆ.ಸಿ.ವೇಣುಗೋಪಾಲ್ ಹಾಗೂ ಸುರ್ಜೆವಾಲ ನಡುವೆ ಕೆಲ ಹೆಸರುಗಳ ಬಗ್ಗೆ ಒಮ್ಮತ ಮೂಡದೆ ಇರುವುದರಿಂದ, ಅಂತಿಮ ಕ್ಷಣದಲ್ಲಿ ಅಚ್ಚರಿಯ ಹೆಸರುಗಳು ಪಟ್ಟಿಗೆ ಸೇರುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ದಿಲ್ಲಿಯಲ್ಲಿ ನಡೆದ ಹೈಕಮಾಂಡ್ ನಾಯಕರ ಸಭೆಯಲ್ಲಿ ನಿರ್ಧರಿಸಿದಂತೆ ವೇಣುಗೋಪಾಲ್ ಹಾಗೂ ಸುರ್ಜೆವಾಲ ಬೆಂಗಳೂರಿಗೆ ಬಂದು ಸಚಿವರ ಹೆಸರನ್ನು ಮುಖ್ಯಮಂತ್ರಿಗೆ ನೀಡುತ್ತಾರಾ? ಅಥವಾ ಎಐಸಿಸಿ ವತಿಯಿಂದಲೆ ಪಟ್ಟಿಯನ್ನು ಪ್ರಕಟಿಸಲಾಗುತ್ತದೆಯೋ ಎಂಬುದು ನಿಗೂಢವಾಗಿದೆ.
ಲಿಖಿತ ಸೂಚನೆ ನೀಡಿದರಷ್ಟೇ ಸಿದ್ಧತೆ?: ಸೋಮವಾರ ಸಂಜೆ 5 ಗಂಟೆಗೆ ನೂತನ ಸಚಿವರ ಪ್ರಮಾಣ ವಚನಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಲೋಕಭವನಕ್ಕೆ ಮುಖ್ಯಮಂತ್ರಿ ಕಚೇರಿಯಿಂದ ಸೂಚಿಸಲಾಗಿತ್ತು ಎನ್ನಲಾಗಿದೆ. ಆದರೆ, ಮೌಖಿಕವಾಗಿ ನೀಡುವ ಸೂಚನೆಯನ್ನು ಆಧರಿಸಿ ಸಿದ್ಧತೆಗಳನ್ನು ಮಾಡಿಕೊಳ್ಳುವುದು ಕಷ್ಟ. ಲಿಖಿತವಾಗಿ ಸೂಚನೆ ನೀಡಿದರೆ ಸಿದ್ಧತೆಗಳನ್ನು ಮಾಡಿಕೊಳ್ಳಬಹುದು ಎಂದು ಲೋಕಭವನ ಮುಖ್ಯಮಂತ್ರಿ ಕಚೇರಿಗೆ ತಿಳಿಸಿದೆ ಎಂದು ತಿಳಿದು ಬಂದಿದೆ.