‘ಆಪರೇಷನ್ ಸಿಂಧೂರ’ | ಭಾರತೀಯ ಸೇನೆಯ ಕಾರ್ಯಾಚರಣೆಗೆ ಸಚಿವ ಸಂಪುಟದಲ್ಲಿ ಅಭಿನಂದನೆ
Update: 2025-05-09 21:36 IST
ಬೆಂಗಳೂರು : ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ಅಮಾಯಕರನ್ನು ಹತ್ಯೆ ಮಾಡಿದ ಭಯೋತ್ಪಾದಕರ ಕೃತ್ಯದ ವಿರುದ್ಧ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ʼಆಪರೇಷನ್ ಸಿಂಧೂರʼ ಮೂಲಕ ಕಾರ್ಯಾಚರಣೆ ನಡೆಸಿ ತಕ್ಕ ಉತ್ತರ ನೀಡಿರುವ ಭಾರತೀಯ ಸಶಸ್ತ್ರ ಪಡೆಗಳ ಸಾಹಸ, ಶೌರ್ಯ, ಕಾರ್ಯಾಚರಣೆಗೆ ಸಚಿವ ಸಂಪುಟ ಅಭಿನಂದನೆ ಸಲ್ಲಿಸಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಹೇಳಿದರು.
ಶುಕ್ರವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತದ ಮೇಲೆ ಪದೇ ಪದೇ ಕಾಲು ಕೆರೆದುಕೊಂಡು ಬರುತ್ತಿದ್ದ ಪಾಕಿಸ್ತಾನಕ್ಕೆ ನಮ್ಮ ಸಶಸ್ತ್ರ ಪಡೆಗಳು ತಕ್ಕ ಶಾಸ್ತಿ ಮಾಡಿವೆ. ಅವರಿಗೆ ಯಾವ ಭಾಷೆಯಲ್ಲಿ ಉತ್ತರ ಕೊಡಬೇಕೋ ಆ ಉತ್ತರವನ್ನು ನಮ್ಮ ಸೇನೆ ನೀಡಿದೆ ಎಂದು ಹೇಳಿದರು.